- ವಾಲ್ಮೀಕಿ ನಿಗಮ ಹಗರಣದಲ್ಲಿ ಕಳಂಕಿತ ಸಚಿವ: ಪ್ರತಿಭಟನೆಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಆರೋಪ
ಕನ್ನಡಪ್ರಭ ವಾರ್ತೆ ದಾವಣಗೆರೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪ ಹೊತ್ತ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕ ಹಾಗೂ ಎಸ್ಟಿ ಮೋರ್ಚಾದಿಂದ ನಗರದಲ್ಲಿ ಸೋಮವಾರ ಧರಣಿ ನಡೆಸಲಾಯಿತು.
ನಗರದ ಪಾಲಿಕೆ ಮುಂಭಾಗದ ಉಪ ವಿಭಾಗಾಧಿಕಾರಿ ಕಚೇರಿ ಎದುರು ಪಕ್ಷದ ಮುಖಂಡರು, ಪದಾಧಿಕಾರಿಗಳ ನೇತೃತ್ವದಲ್ಲಿ ಧರಣಿನಿರತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ನಾವು ಜನಪರ ಹೋರಾಟ ನಡೆಸುತ್ತಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರೂವರೆ ವರ್ಷವಾಗುತ್ತಿದೆ. ಅಂದಿನಿಂದ ಈವರೆಗೆ ರಾಜ್ಯವನ್ನು ಲೂಟಿ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೈಸೂರಿನ ಮುಡಾ ನಿವೇಶನ ಹಗರಣ ಹೀಗೆ ಬರೀ ಭ್ರಷ್ಟಾಚಾರ, ಹಗರಣದಲ್ಲೇ ಕಾಂಗ್ರೆಸ್ ಸರ್ಕಾರ ಮಿಂದೇಳುತ್ತಿದೆ ಎಂದು ಆರೋಪಿಸಿದರು.
ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚನ್ನಗಿರಿ ಲೋಹಿತಕುಮಾರ ಮಾತನಾಡಿ, ವಾಲ್ಮೀಕಿ ನಿಗಮದ ಹಗರಣದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ಹೋರಾಟ ನಡೆಸಿದೆ. ಬಿ.ನಾಗೇಂದ್ರ ರಾಜೀನಾಮೆ ಅಥವಾ ಸಂಪುಟದಿಂದ ವಜಾಗೊಳ್ಳುವವರೆಗೂ ನಮ್ಮ ಹೋರಾಟ ನಡೆಯಲಿದೆ. ನಿಗಮದಲ್ಲಿ ₹187 ಕೋಟಿಯನ್ನು ಬಳ್ಳಾರಿ ಲೋಕಸಭೆ ಕ್ಷೇತ್ರ ಚುನಾವಣೆ ಹಾಗೂ ತೆಲಂಗಾಣ ವಿಧಾನಸಭೆ ಚುನಾವಣೆ ನಡೆಸಲು ಆಗಿನ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ದುರುಪಯೋಗ ಆಗಿದೆ. ಪರಿಶಿಷ್ಟರ ಹಣವನ್ನು ಕಾಂಗ್ರೆಸ್ ಏಜೆಂಟರ ಖಾತೆ, ಚಿನ್ನಾಭರಣ ಅಂಗಡಿ, ವೈನ್ ಶಾಪ್, ಕಾರು ಶೋರೂಂ ಇತರೆ ಖಾತೆಗಳಿಗೆ ನಿಗಮದ ಹಣ ಜಮಾ ಮಾಡಿದ್ದರು ಎಂದು ಟೀಕಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಮೆಳ್ಳೆಕಟ್ಟೆ ಎ.ಇ.ನಾಗರಾಜ ಮಾತನಾಡಿ, ವಾಲ್ಮೀಕಿ ನಿಗಮದ ಲೂಟಿಯ ರೂವಾರಿ ಸಚಿವ ಬಿ.ನಾಗೇಂದ್ರ ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಬಿ.ನಾಗೇಂದ್ರ ಅವರನ್ನು ತಕ್ಷಣ ಬಂಧಿಸದಿದ್ದರೆ ರಾಜ್ಯ ಸರ್ಕಾರವು ಶೋಷಿತ ಸಮುದಾಯಗಳಿಗೆ ಘನಘೋರ ಅನ್ಯಾಯ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದರು.
- - -
ದಾವಣಗೆರೆ ಎಸಿ ಕಚೇರಿ ಬಳಿ ಸೋಮವಾರ ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ವಜಾಗೆ ಒತ್ತಾಯಿಸಿ ಬಿಜೆಪಿ ಧರಣಿ ಸತ್ಯಾಗ್ರಹ ನಡೆಸಿತು.