ಬ್ಯಾಡಗಿ: ತಾಲೂಕನ್ನು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡದಿರುವುದನ್ನು ಖಂಡಿಸಿ ಹಾಗೂ ರೈತರ ಸಂಕಷ್ಟಕ್ಕೆ ಸರಕಾರ ತಕ್ಷಣ ಸ್ಪಂದಿಸುವಂತೆ ಆಗ್ರಹಿಸಿ ಸೆ.15ರಂದು ಬೆಳಗ್ಗೆ 10ಕ್ಕೆ ಬಿಜೆಪಿ ತಾಲೂಕು ಘಟಕದ ವತಿಯಿಂದ ಬ್ಯಾಡಗಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.
ಸರಕಾರದ ನಿರ್ಲಕ್ಷ್ಯಕ್ಕೆ ರೈತರ ಆಕ್ರೋಶ: ಮಳೆ ಕೊರತೆ ಹಾಗೂ ಬೆಳೆ ಹಾನಿಯ ವಾಸ್ತವ ಪರಿಸ್ಥಿತಿಯನ್ನು ಸರಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ರೈತರ ನೈಜ ಸಂಕಷ್ಟವನ್ನು ಪರಿಗಣಿಸಿ ವೈಜ್ಞಾನಿಕವಾಗಿ ಬೆಳೆ ಹಾನಿ ಸಮೀಕ್ಷೆ ನಡೆಸಿ, ತಾಲೂಕನ್ನು ಕೂಡಲೇ ಬರಪೀಡಿತ ಎಂದು ಘೋಷಿಸಬೇಕು. ಬರ ಘೋಷಣೆಯಾದರೆ ರೈತರಿಗೆ ಸರಕಾರದ ನಿಯಮಾನುಸಾರ ದೊರೆಯಬೇಕಾದ ಪರಿಹಾರ, ಬೆಳೆ ನಷ್ಟ ಪರಿಹಾರ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಅಗತ್ಯ ನೆರವು ಸಿಗುವ ಸಾಧ್ಯತೆ ಇದೆ. ಆದರೆ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡದಿರುವುದರಿಂದ ರೈತರು ಸರಕಾರದ ನೆರವಿನಿಂದ ವಂಚಿತರಾಗುವ ಆತಂಕ ಎದುರಾಗಿದೆ ಎಂದರು.
ಸೆ.15 ರಂದು ರೈತರೊಂದಿಗೆ ಹೋರಾಟ: ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ರೈತರ ಸಮಸ್ಯೆ ಗಂಭೀರವಾಗಿದ್ದು, ಸರಕಾರ ಈ ವಿಚಾರವನ್ನು ರಾಜಕೀಯ ದೃಷ್ಟಿಯಿಂದ ನೋಡದೆ ರೈತರ ಬದುಕಿನ ಪ್ರಶ್ನೆಯಾಗಿ ಪರಿಗಣಿಸಬೇಕು. ಕೂಡಲೇ ಬರ ಘೋಷಣೆ ಮಾಡಿ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ಸೆ.16ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಬ್ಯಾಡಗಿ ವಿಧಾನಸಭಾ ಕ್ಚೇತ್ರದ ರೈತರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿವಂತೆ ಕೋರಿದರು. ಈವೇಳೆ ತಾಲೂಕಾಧ್ಯಕ್ಷ ನಿಂಗಪ್ಪ ಬಟ್ಟಲಕಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.