ಹುಬ್ಬಳ್ಳಿ:
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶನಿವಾರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.ಈ ವೇಳೆ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ದೇಶದಲ್ಲಿ ಜನರು ಪ್ರಧಾನಿ ನರೇಂದ್ರ ಮೋದಿ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿರುವುದು ಮತ್ತೊಮ್ಮೆ ಸಾಬೀತಾಗಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಪೂರ್ವ ಸಮೀಕ್ಷೆಯಂತೆ ದಿಗ್ವಿಜಯ ಸಾಧಿಸಿದೆ. ಅರವಿಂದ ಕ್ರೇಜಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ನಡೆಸಿದ ಭ್ರಷ್ಟಾಚಾರ ಹಾಗೂ ಜನವಿರೋಧಿ ಆಡಳಿತಕ್ಕೆ ಅಲ್ಲಿನ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದರು.
ಈ ವೇಳೆ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮಂಡಲ ಅಧ್ಯಕ್ಷರಾದ ರಾಜು ಕಾಳೆ, ಮಂಜುನಾಥ್ ಕಾಟ್ಕರ್, ಪಾಲಿಕೆ ಸದಸ್ಯರಾದ ಸಂತೋಷ ಚೌಹಾಣ, ಬೀರಪ್ಪ ಕಂಡೆಕರ್, ಚಂದ್ರಿಕಾ ಮೇಸ್ತ್ರಿ, ಜಿಲ್ಲಾ ವಕ್ತಾರ ರವಿ ನಾಯಕ, ಸಿದ್ದು ಮೊಗಲಿಶೆಟ್ಟರ, ಸತೀಶ್ ಶೇಜವಾಡಕರ, ಪ್ರಭು ನವಲಗುಂದಮಠ ಸೇರಿದಂತೆ ಹಲವರಿದ್ದರು.ಜೋಶಿ ಕಚೇರಿಯಲ್ಲೂ ವಿಜಯೋತ್ಸವದೆಹಲಿ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಪಡೆದು ಗೆಲುವು ಸಾಧಿಸುತ್ತಿದ್ದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಅವರಿಗೆ ಕಾರ್ಯಕರ್ತರು ಹೂವಿನ ಮಾಲೆ ಹಾಕಿ, ಸಿಹಿ ತಿನ್ನಿಸಿ ಸಂಭ್ರಮಿಸಿದರು. ಈ ವೇಳೆ ಪಾಲಿಕೆ ಮೇಯರ್ ರಾಮಪ್ಪ ಬಡಿಗೇರ, ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಸಂತೋಷ ಚವ್ಹಾಣ, ಶಂಕ್ರಣ್ಣ ಮುನವಳ್ಳಿ ಸೇರಿದಂತೆ ಹಲವರಿದ್ದರು.