ತೈಲಬೆಲೆ ಹೆಚ್ಚಳಕ್ಕೆ ಬಿಜೆಪಿ ಆಕ್ಷೇಪ ಸರಿಯಲ್ಲ-ರಾಜು ಕುನ್ನೂರ

KannadaprabhaNewsNetwork |  
Published : Jun 24, 2024, 01:40 AM IST
ಪೊಟೋ ಪೈಲ್ ನೇಮ್ ೨೨ಎಸ್‌ಜಿವಿ೨    ರಾಜು ಕುನ್ನೂರ  ಪ್ರಧಾನ ಕಾರ್ಯದರ್ಶಿಗಳು ಕೆಪಿಸಿಸಿಬೆಂಗಳುರು | Kannada Prabha

ಸಾರಾಂಶ

ಕಳೆದ ಹತ್ತು ವರ್ಷಗಳಲ್ಲಿ ಪೆಟ್ರೋಲ್ ಬೆಲೆಯನ್ನು ಎರಡರಿಂದ ಮೂರು ಪಟ್ಟು ಮತ್ತು ಡೀಸೆಲ್ ಬೆಲೆಯನ್ನು ಐದರಿಂದ ಹತ್ತು ಪಟ್ಟು ಹೆಚ್ಚಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಡುಹಗಲೇ ಜನರನ್ನು ಸುಲಿಗೆ ಮಾಡಿದರೂ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಗರು ಈಗ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮೂರು ರುಪಾಯಿ ಹೆಚ್ಚಿಸಿದ್ದಕ್ಕೆ ಎದೆ ಬಡಿದುಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಕುನ್ನೂರ ಪ್ರತಿಕ್ರಿಯೆಸಿದ್ದಾರೆ.

ಶಿಗ್ಗಾಂವಿ: ಕಳೆದ ಹತ್ತು ವರ್ಷಗಳಲ್ಲಿ ಪೆಟ್ರೋಲ್ ಬೆಲೆಯನ್ನು ಎರಡರಿಂದ ಮೂರು ಪಟ್ಟು ಮತ್ತು ಡೀಸೆಲ್ ಬೆಲೆಯನ್ನು ಐದರಿಂದ ಹತ್ತು ಪಟ್ಟು ಹೆಚ್ಚಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಡುಹಗಲೇ ಜನರನ್ನು ಸುಲಿಗೆ ಮಾಡಿದರೂ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಗರು ಈಗ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮೂರು ರುಪಾಯಿ ಹೆಚ್ಚಿಸಿದ್ದಕ್ಕೆ ಎದೆ ಬಡಿದುಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಕುನ್ನೂರ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ೨೦೧೪ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ ೪೧೦ ರು., ೭೨.೨೬ ರು. ಮತ್ತು ೫೭.೨೮ ಆಗಿತ್ತು. ಈಗ ಇವುಗಳ ಬೆಲೆ ೮೦೫.೫ ರು., ೧೦೪.೨೧ ರೂ ಮತ್ತು ೯೨.೧೫ ರು. ಆಗಿದೆ. ೨೦೧೪ರ ಮೊದಲು ಬ್ಯಾರೆಲ್‌ಗೆ ೧೦೯ ಡಾಲರ್‌ನಷ್ಟಿದ್ದ ಕಚ್ಚಾ ತೈಲದ ಬೆಲೆ ಬಳಿಕ ೮೨ ಡಾಲರ್‌ಗೆ ಇಳಿಕೆಯಾದರೂ ಪ್ರಧಾನಿ ನರೇಂದ್ರ ಮೋದಿಯವರು ಅಡುಗೆ ಅನಿಲದ ಬೆಲೆಯನ್ನು ೩೯೫.ರು., ಪೆಟ್ರೋಲ್ ೩೧.೯೫ ರೂ ಹಾಗೂ ಡೀಸೆಲ್ ೯೪.೮೭ರಷ್ಟು ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದ್ದಾರೆ ಎಂದು ಕುಟುಕಿದರು.

೨೦೨೧ರಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದ ಸಂದರ್ಭದಲ್ಲಿ ರಾಜ್ಯದ ಜನತೆ ಸಿಡಿದೆದ್ದಾಗ ಬೆಲೆ ಕಡಿಮೆ ಮಾಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದ್ದ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಪೆಟ್ರೋಲ್ ಶೇ. ೩೫ರಿಂದ ಶೇ.೨೫.೯೨ಕ್ಕೆ ಹಾಗೂ ಡೀಸೆಲ್ ಮೇಲಿನ ಶೇ.೨೪ರಿಂದ ೧೪.೩೪ಕ್ಕೆ ಮೌಲ್ಯ ವರ್ಧಿತ ತೆರಿಗೆಯನ್ನು ಇಳಿಸಿದ ಪರಿಣಾಮ ರಾಜ್ಯದ ಸರ್ಕಾರದ ಬೊಕ್ಕಸಕ್ಕೆ ಅಂದಾಜು ೧೫.೦೦೦ ಕೋಟಿ ನಷ್ಟ ಆಗಿದೆ. ಕೇಂದ್ರ ಸರ್ಕಾರದ ಸುಲಿಗೆಯನ್ನು ಪ್ರಶ್ನಿಸಿ ರಾಜ್ಯಕ್ಕೆ ಆಗುತ್ತಿದ್ದ ಅನ್ಯಾಯವನ್ನು ತಡೆಯಬೇಕಿದ್ದ ಬೊಮ್ಮಾಯಿ ಸರ್ಕಾರ ಕೇಂದ್ರದ ಜೊತೆ ಕೈಜೋಡಿಸಿ ಕನ್ನಡಿಗರಿಗೆ ದ್ರೋಹ ಬಗೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಜಿಎಸ್‌ಟಿ ಜಾರಿಗೊಳಿಸುವ ಮೂಲಕ ಸಂಪನ್ಮೂಲ ಸಂಗ್ರಹದ ಎಲ್ಲ ಅವಕಾಶಗಳನ್ನು ರಾಜ್ಯಗಳಿಂದ ಕಿತ್ತುಕೊಂಡಿದೆ. ಜನಪರ ಗ್ಯಾರಂಟಿ ಯೋಜನೆಗಳಿಂದ ಜನಪ್ರಿಯವಾಗುತ್ತಿರುವ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ನಮ್ಮ ಸಂಪನ್ಮೂಲವನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸಿದೆ. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದರು.

ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣ ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ವಿನಿಯೋಗವಾಗುತ್ತದೆ. ಸರ್ವರ ಹಿತ ಕಾಯಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸದಾ ಬದ್ಧವಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ