ಕಪ್ಪು ಬಾವುಟ ಪ್ರದರ್ಶನ: ರೈತಸಂಘ, ಕನ್ನಡ ಸಂಘಟನೆ ಕಾರ್ಯಕರ್ತರ ಬಂಧನ

KannadaprabhaNewsNetwork |  
Published : Jan 27, 2026, 02:30 AM IST
ಕಪ್ಪು ಬಾವುಟ ಪ್ರದರ್ಶನ | Kannada Prabha

ಸಾರಾಂಶ

ರಾಜ್ಯ ಸರ್ಕಾರ ಕೆಪಿಎಸ್ಸಿ ಹಾಗೂ ಮ್ಯಾಗ್ನೆಟಿಕ್ ಶಾಲೆಗಳ ಹೆಸರಲ್ಲಿ ಸರ್ಕಾರಿ ಶಾಲೆಗಳ ಬಾಗಿಲು ಮುಚ್ಚುತ್ತಿದೆ. ಸಾರ್ವಜನಿಕ ಶಿಕ್ಷಣಕ್ಕೆ ಎಳ್ಳುನೀರು ಬಿಟ್ಟು ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಿಸಲಾಗುತ್ತಿದೆ. ರಾಜ್ಯದ ಜನಪ್ರತಿನಿಧಿಗಳು ಅವರ ಬೆಂಬಲಿಗರು ಶಿಕ್ಷಣವನ್ನು ಒಂದು ಉದ್ಯಮವಾಗಿಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಸರ್ಕಾರಿ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ರೈತಸಂಘ ಹಾಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದ ಘಟನೆ ಸೋಮವಾರ ನಡೆಯಿತು.

ಕೆಪಿಎಸ್‌ ಹಾಗೂ ಮ್ಯಾಗ್ನೆಟಿಕ್ ಶಾಲೆಗಳ ಹೆಸರಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ಖಂಡಿಸಿ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಲು ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ಪ್ರತಿಭಟನಾಕಾರರು ಸೇರಿದ್ದರು. ಸಚಿವರು ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ತೆರಳುತ್ತಿದ್ದಂತೆ ಕಪ್ಪು ಬಾವುಟ ಹಿಡಿದು ಕ್ರೀಡಾಂಗಣದತ್ತ ಮುನ್ನುಗಿದರು.

ಈ ಸಮಯದಲ್ಲಿ ಪಶ್ಚಿಮ ಪೊಲೀಸ್ ಠಾಣೆಯ ಎದುರು ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಖಾಸಗೀಕರಣದ ವಿರುದ್ಧ ಘೋಷಣೆ ಕೂಗಿದರು.

ರಾಜ್ಯ ಸರ್ಕಾರ ಕೆಪಿಎಸ್ಸಿ ಹಾಗೂ ಮ್ಯಾಗ್ನೆಟಿಕ್ ಶಾಲೆಗಳ ಹೆಸರಲ್ಲಿ ಸರ್ಕಾರಿ ಶಾಲೆಗಳ ಬಾಗಿಲು ಮುಚ್ಚುತ್ತಿದೆ. ಸಾರ್ವಜನಿಕ ಶಿಕ್ಷಣಕ್ಕೆ ಎಳ್ಳುನೀರು ಬಿಟ್ಟು ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಿಸಲಾಗುತ್ತಿದೆ. ರಾಜ್ಯದ ಜನಪ್ರತಿನಿಧಿಗಳು ಅವರ ಬೆಂಬಲಿಗರು ಶಿಕ್ಷಣವನ್ನು ಒಂದು ಉದ್ಯಮವಾಗಿಸಿಕೊಂಡಿದ್ದಾರೆ. ಅದರ ಪರಿಣಾಮವಾಗಿ ವಿಲೀನದ ಹೆಸರಲ್ಲಿ ಸರ್ಕಾರಿ ಶಾಲೆಗಳ ಭೂಮಿ ಕಸಿಯುವ ಹುನ್ನಾರವೂ ಅಡಗಿದೆ ಎಂದು ಗಂಭೀರವಾಗಿ ಆರೋಪಿಸಿದರು.

ಸರ್ಕಾರ ಕೂಡಲೇ ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಅಗತ್ಯ ತೀರ್ಮಾನ ಕೈಗೊಳ್ಳಬೇಕು. ಕೇಂದ್ರೀಯ, ಅಂತಾರಾಷ್ಟ್ರೀಯ ಪಠ್ಯ ಕ್ರಮದ ಶಿಕ್ಷಣದ ಹೆಸರಲ್ಲಿ ಸುಲಿಗೆ ನಡೆಸಲು ರಾಜ್ಯ ಸರ್ಕಾರವೇ ಪರವಾನಗಿ ಕೊಟ್ಟಿದೆ. ಇದರ ಬದಲು ಗುಣಮಟ್ಟದ ಏಕಪ್ರಕಾರದ ರಾಜ್ಯ ಪಠ್ಯಕ್ರಮವನ್ನು ಜಾರಿಗೆ ತರಬೇಕಿದೆ. ಶಿಕ್ಷಣದಲ್ಲಿ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರವನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಶಾಲೆಗಳ ಉಳಿವಿಗಾಗಿ ಮುಂದಿನ ಎಪ್ರಿಲ್‌ ೧೧ ರಿಂದ ಜಿಲ್ಲೆಯ ೨೩೩ ಪಂಚಾಯತಿಗಳಿಗೂ ಪಾದಯಾತ್ರೆ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಘೋಷಿಸಿದರು.

ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ, ಶಿವಳ್ಳಿ ಚಂದ್ರು, ಸೋ.ಶಿ ಪ್ರಕಾಶ್, ಕೀಳಘಟ್ಟ ನಂಜುಂಡಯ್ಯ, ಪ್ರಭುಲಿಂಗು, ರಾಮಲಿಂಗೇಗೌಡ, ಎಸ್ ಡಿಎಂಸಿ ಸದಸ್ಯರ ಸಂಘದ ತಗ್ಗಳ್ಳಿ ಅನಿಲ್ ಕುಮಾರ್, ಅಣ್ಣೂರು ಮಹೇಂದ್ರ, ಸಂಪಳ್ಳಿ ಮರಿಚನ್ಮೇಗೌಡ, ಸಂತೋಷ್ ಗೌಡ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಚ್‌.ಡಿ. ಜಯರಾಮ, ಕರುನಾಡ ಸೇವಕರು ಸಂಘಟನೆಯ ರಾಜ್ಯ ವಕ್ತಾರ ಎಂ.ಬಿ.ನಾಗಣ್ಣಗೌಡ, ಮೈಸೂರು ಜಿಲ್ಲಾಧ್ಯಕ್ಷ ಎಸ್. ಕೆ. ರಾಜೂಗೌಡ ಸೇರಿದಂತೆ ಹಲವರು ಇದ್ದರು.

ಬಂಧಿಸಿದ್ದ ಪ್ರತಿಭಟನಾಕಾರರನ್ನು ಜಿಲ್ಲಾ ಸಶಸ್ತ್ರ ಮೀಸಲು ಮೈದಾನದಲ್ಲಿ ಕೆಲ ಕಾಲ ತಂದಿರಿಸಿ ನಂತರ ಬಿಡುಗಡೆಗೊಳಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ