ಕನ್ನಡಪ್ರಭ ವಾರ್ತೆ ಹಾಸನ
ಸ್ಕಿಜೋಫ್ರೇನಿಯಾ ಒಂದು ತೀವ್ರತರ ಮಾನಸಿಕ ಕಾಯಿಲೆಯಾಗಿದ್ದು, ಪ್ರಾಥಮಿಕ ಹಂತದಲ್ಲೇ ಕಾಯಿಲೆಯನ್ನು ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ಕೊಡಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳಾದ ಡಾ. ನಾಗೇಶ್.ಪಿ.ಆರಾಧ್ಯ ಅವರು ತಿಳಿಸಿದ್ದಾರೆ.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಹಾಗೂ ಬಾಲಕಿಯರ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ವಾಣಿವಿಲಾಸ ಇವರ ಸಂಯುಕ್ತಾಶ್ರಯದಲ್ಲಿ ಬಾಲಕಿಯರ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ವಾಣಿವಿಲಾಸದಲ್ಲಿ ಆಯೋಜಿಸಿದ್ದ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಆತ್ಮಹತ್ಯೆ ಆಲೋಚನೆ ಬಂದಂತಹ ಸಂದರ್ಭದಲ್ಲಿ ನಮಗೆ ಆಪ್ತರಿರುವವರೊಂದಿಗೆ ಹಂಚಿಕೊಳ್ಳಲು ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಮಾನಸಿಕ ಆರೋಗ್ಯ ಸಹಾಯವಾಣಿ 14416 ಬಗ್ಗೆ ತಿಳಿಸುತ್ತಾ ಈ ಉಚಿತ ದೂರವಾಣಿಯು ದಿನದ 24 ಗಂಟೆಯೂ ಕೆಲಸ ನಿರ್ವಹಿಸುತ್ತಿದ್ದು ಮಾನಸಿಕ ಆರೋಗ್ಯದ ಕುರಿತು ಯಾವುದೇ ವಿಚಾರವನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯರಾದ ಡಾ. ಶಿಲ್ಪ ಮಾತನಾಡಿ, ಮಾಟ- ಮಂತ್ರಗಳಿಂದ ಮಾನಸಿಕ ಸಮಸ್ಯೆಗಳು ಬರುವುದಿಲ್ಲ, ಇತ್ತೀಚಿನ ದಿನಗಳಲ್ಲಿ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಇದಕ್ಕೆ ಪ್ರಮುಖ ಕಾರಣ ಕೀಳರಿಮೆ ಹಾಗೂ ಮೂಢನಂಬಿಕೆಗಳು. ಸಾರ್ವಜನಿಕರು ಇಂತಹ ಆಚರಣೆಗಳನ್ನು ಬಿಟ್ಟು ಮನೋವೈದ್ಯರ ಬಳಿ ಹೋಗಿ ತಮ್ಮ ಸಮಸ್ಯೆಗಳ ಬಗ್ಗೆ ತಿಳಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.ಬಾಲಕಿಯರ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ವಾಣಿವಿಲಾಸದ ಹಿರಿಯ ಉಪನ್ಯಾಸಕರಾದ ರಂಗರಾಜು ಮಾತನಾಡಿ, ನಮಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ ಮಾನಸಿಕ ಆರೋಗ್ಯ ಕೂಡ ಅಷ್ಟೆ ಮುಖ್ಯವಾದುದ್ದು, ಮಾನಸಿಕ ಖಾಯಿಲೆಗಳು ಬಂದಂತಹ ಸಂದರ್ಭದಲ್ಲಿ ಆ ಲಕ್ಷಣಗಳನ್ನು ನಿರ್ಲಕ್ಷಿಸದೇ ಚಿಕಿತ್ಸೆ ಪಡೆಯಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಾಲಕಿಯರ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ವಾಣಿವಿಲಾಸದ ಪ್ರಾಂಶುಪಾಲರಾದ ಮಲ್ಲಿಗಮ್ಮ ಸಿ.ಆರ್. ಅವರು ವಿದ್ಯಾರ್ಥಿಗಳು ಮಾನಸಿಕ ಸಮಸ್ಯೆಗಳು ಮತ್ತು ಲಕ್ಷಣಗಳ ಬಗ್ಗೆ ತಿಳಿದುಕೊಂಡು ಮಾನಸಿಕ ಸಮಸ್ಯೆಗಳಿಗೆ ಚಿಕಿತ್ಸೆ ಪಡೆದು ಮಾನಸಿಕವಾಗಿ ಆರೋಗ್ಯವಾಗಿರಬೇಕು ಎಂಬುದಾಗಿ ತಿಳಿಸಿದರು.ಕಾರ್ಯಕ್ರಮದಲ್ಲಿ ಸುಬ್ಬಶೆಟ್ಟಿ, ಜಗದಾಂಬ, ಮಹಾದೇವ್, ಸುಮಲತಾ , ಭಾಗ್ಯ, ರಮೇಶ್ ಉಪಸ್ಥಿತರಿದ್ದರು.