ಬಳ್ಳಾರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ಕೆ ಗಣಿಜಿಲ್ಲೆ ಬಳ್ಳಾರಿಯಲ್ಲಿ ಮಂಗಳವಾರ ಅಧಿಕೃತ ಚಾಲನೆ ದೊರೆತಿದ್ದು, ಜಿಲ್ಲೆಯಾದ್ಯಂತ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ವೇಗ ನೀಡಿದ್ದಾರೆ.
ಪ್ರತಿ ಮತದಾರರಿಂದ ಎರಡು ಅರ್ಜಿ ನಮೂನೆಗಳನ್ನು ಭರ್ತಿ ಮಾಡಿಸಿಕೊಳ್ಳಲಾಗುತ್ತಿದ್ದು, ಒಂದು ಪ್ರತಿಯನ್ನು ಬಿಎಲ್ಒಗಳು ಇಲಾಖೆಯ ದಾಖಲೆಯಾಗಿ ಇಟ್ಟುಕೊಳ್ಳುತ್ತಿದ್ದಾರೆ. ಮತ್ತೊಂದು ಪ್ರತಿಯನ್ನು ಮತದಾರರಿಗೆ ದಾಖಲೆಯಾಗಿ ನೀಡಲಾಗುತ್ತಿದೆ. ಇದರಿಂದ ಅರ್ಜಿ ಸಲ್ಲಿಸಿರುವ ಬಗ್ಗೆ ಮತದಾರರ ಬಳಿಯೂ ಅಧಿಕೃತ ದಾಖಲೆ ಉಳಿಯಲಿದೆ.
ಈ ಕುರಿತು ಕನ್ನಡಪ್ರಭ ಜೊತೆ ಮಾತನಾಡಿದ ಬಿಎಲ್ಒಗಳು, ಮನೆ ಮನೆಗೆ ತೆರಳಿ ಪ್ರತಿ ಅರ್ಹ ಮತದಾರರ ಮಾಹಿತಿಯನ್ನು ಪರಿಶೀಲಿಸಿ ಸಂಗ್ರಹಿಸಲಾಗುತ್ತಿದೆ. ಯಾರೊಬ್ಬ ಮತದಾರರೂ ಪಟ್ಟಿಯಿಂದ ಹೊರಗುಳಿಯದಂತೆ ವಿಶೇಷ ಮುತುವರ್ಜಿ ವಹಿಸಲಾಗಿದೆ. ಮನೆಗೆ ಭೇಟಿ ನೀಡಿದ ವೇಳೆ ಮತದಾರರು ಇಲ್ಲದಿದ್ದರೆ ತಿಂಗಳ ಅವಧಿಯಲ್ಲಿ ಮೂರು ಬಾರಿ ಪುನಃ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು.ಮಾಹಿತಿ ಸಂಗ್ರಹ ಹಾಗೂ ಅರ್ಜಿ ಅಪ್ಲೋಡ್ ಪ್ರಕ್ರಿಯೆ ಪೂರ್ಣಗೊಂಡ ಮನೆಗಳಿಗೆ ಬಿಳಿ-ನೇರಳೆ ಬಣ್ಣದ ಸ್ಟಿಕ್ಕರ್ ಅಂಟಿಸಲಾಗುತ್ತಿದೆ. ಇದು ಪರಿಶೀಲನೆ ಪೂರ್ಣಗೊಂಡಿರುವುದರ ಸಂಕೇತವಾಗಿದೆ. ಒಂದು ವೇಳೆ ಮನೆಗೆ ಭೇಟಿ ನೀಡಿದಾಗ ಯಾರೂ ಇಲ್ಲದಿದ್ದರೆ ಕೆಂಪು ಬಣ್ಣದ ಸ್ಟಿಕ್ಕರ್ ಅಂಟಿಸಿ ಆ ಮನೆಗಳನ್ನು ಗುರುತಿಸಲಾಗುತ್ತದೆ. ನಂತರ ಅಂತಹ ಮನೆಗಳಿಗೆ ಮತ್ತೆ ಭೇಟಿ ನೀಡಿ ಮತದಾರರ ವಿವರಗಳನ್ನು ಸಂಗ್ರಹಿಸಿ ನೋಂದಣಿ ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಮತದಾರರ ಪಟ್ಟಿಯನ್ನು ದೋಷರಹಿತ ಹಾಗೂ ನವೀಕೃತವಾಗಿಡುವ ಉದ್ದೇಶದಿಂದ ಕೈಗೊಳ್ಳಲಾಗಿರುವ ಈ ವಿಶೇಷ ಅಭಿಯಾನಕ್ಕೆ ಸಾರ್ವಜನಿಕರು ಅಗತ್ಯ ದಾಖಲೆ, ಮಾಹಿತಿ ಒದಗಿಸಿ ಸಹಕರಿಸುವಂತೆ ಜಿಲ್ಲಾ ಚುನಾವಣೆ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಮನವಿ ಮಾಡಿದ್ದಾರೆ. ಈ ಪ್ರಕ್ರಿಯೆಯಡಿ ಜಿಲ್ಲೆಯ 2025ರ ಪಟ್ಟಿಯ ಅನ್ವಯ ಇರುವ ಒಟ್ಟು 12,28,958 ಮತದಾರರ ಪೈಕಿ ಬರೋಬ್ಬರಿ 12,00,463 (ಶೇ 97.68 ರಷ್ಟು) ಜನರನ್ನು ಪತ್ತೆ ಹಚ್ಚಲಾಗಿದೆ.