ರಾಜ್ಯದಲ್ಲಿ 100 ಕಾಲುಸಂಕ ನಿರ್ಮಾಣಕ್ಕೆ ನೀಲಿ ನಕ್ಷೆ: ಸಚಿವ ಸತೀಶ್ ಜಾರಕಿಹೊಳಿ

KannadaprabhaNewsNetwork |  
Published : May 30, 2025, 11:56 PM IST
ಮೂಡಿಗೆರೆ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಳೆಯಿಂದ ಹಾನಿಗೊಳಗಾದ ಪ್ರದೇಶವನ್ನು ವೀಕ್ಷಣೆ ಮಾಡಿದರು. ಶಾಸಕರಾದ ಎಚ್‌.ಡಿ. ತಮ್ಮಯ್ಯ, ಟಿ.ಡಿ. ರಾಜೇಗೌಡ, ನಯನ ಮೋಟಮ್ಮ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ರಾಜ್ಯದಲ್ಲಿ ಪ್ರತೀ ವರ್ಷ 100 ಕಾಲುಸಂಕ ನಿರ್ಮಿಸಲು ತಯಾರಿಸಲಾಗಿದ್ದ ನೀಲಿ ನಕ್ಷೆಯಂತೆ ಈಗಾಗಲೇ ₹20 ಕೋಟಿ ಅನುದಾನದಲ್ಲಿ 20 ಕಡೆ ಕಾಲುಸಂಕ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಮೂಡಿಗೆರೆ ಕ್ಷೇತ್ರದ ಮಳೆ ಹಾನಿ ಪ್ರದೇಶಕ್ಕೆ ಸಚಿವರು, ಶಾಸಕರು ಭೇಟಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ರಾಜ್ಯದಲ್ಲಿ ಪ್ರತೀ ವರ್ಷ 100 ಕಾಲುಸಂಕ ನಿರ್ಮಿಸಲು ತಯಾರಿಸಲಾಗಿದ್ದ ನೀಲಿ ನಕ್ಷೆಯಂತೆ ಈಗಾಗಲೇ ₹20 ಕೋಟಿ ಅನುದಾನದಲ್ಲಿ 20 ಕಡೆ ಕಾಲುಸಂಕ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಮೂಡಿಗೆರೆ ತಾಲೂಕಿನ ಹಳಸೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದ 36 ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಲುಸಂಕ ನಿರ್ಮಿಸಲು ಪ್ರಾಥಮಿಕ ಹಂತದಲ್ಲಿ ತಲಾ ಒಂದು ಕೋಟಿ ಅನುದಾನ ಒದಗಿಸಲಾಗಿದೆ. ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವ ಮಳೆಯಿಂದ ರಸ್ತೆ, ಸೇತುವೆ, ರೈತರ ಬೆಳೆ ಮತ್ತಿತರ ಆಸ್ತಿ ಪಾಸ್ತಿಗಳಿಗೆ ಹಾನಿಯಾದ ಬಗ್ಗೆ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿದ್ದಾರೆ. ಈ ಸಂಬಂಧ ವರದಿ ಬಂದ ಕೂಡಲೆ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿಗಳೊಂದಿಗೆ ಸಭೆ ನಡೆಸಿ, ಅತಿವೃಷ್ಟಿ ಪರಿಸ್ಥಿತಿ ನಿಭಾಯಿಸಲು ಸೂಕ್ತ ಸೂಚನೆ ನೀಡಲಿದ್ದಾರೆ. 2019 ರಿಂದ ನಿರಂತರ ವಾಗಿ ಅತಿವೃಷ್ಟಿಯುಂಟಾಗಿ ಸೇತುವೆ, ರಸ್ತೆಗಳಿಗೆ ಹಾನಿ ಸಂಭವಿಸಿದೆ. ಅಲ್ಲಲ್ಲಿ ಗುಡ್ಡ ಕುಸಿತದಿಂದ ಜಮೀನುಗಳಿಗೆ ಹಾನಿ ಯಾಗಿದ್ದು, ಅವುಗಳೆಲ್ಲವನ್ನು ಸರಿಪಡಿಸಲಾಗಿದೆ. ಕೆಲವೆಡೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು. ಮೂಡಿಗೆರೆ-ಸಕಲೇಶಪುರ ನಡುವಿನ 40 ಕಿ.ಮೀ. ರಸ್ತೆ ಹಾನಿಗೊಳಗಾಗಿದ್ದು, ಈ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಕ್ರಿಯಾಯೋಜನೆ ತಯಾರಿಸಲಿದ್ದಾರೆ. ಕ್ರಿಯಾಯೋಜನೆ ಸಿದ್ಧವಾದ ಕೂಡಲೇ ಅಗತ್ಯ ಅನುದಾನ ಒದಗಿಸ ಲಾಗುವುದು. 2014 ರಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಡಾ.ಎಚ್.ಸಿ.ಮಹದೇವಪ್ಪ ರಾಜ್ಯದ ವಿವಿಧೆಡೆ 40 ಸೇತುವೆ ನಿರ್ಮಿಸಲು ಮಂಜೂರಾತಿ ನೀಡಿದ್ದರು. ಅದರ ನಿರ್ಮಾಣ ಕಾಮಗಾರಿ ಹೊಣೆಯನ್ನು ಕೆಆರ್‌ಡಿಸಿಎಲ್ ಸಂಸ್ಥೆಗೆ ವಹಿಸ ಲಾಗಿತ್ತು. ಅದರಲ್ಲಿ 20 ಸೇತುವೆ ನಿರ್ಮಾಣ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ಉಳಿದ 20 ಕಡೆ ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಮೂಡಿಗೆರೆ-ಸಕಲೇಶಪುರ ರಾಜ್ಯ ಹೆದ್ದಾರಿಯ ಬೆಟ್ಟದಮನೆ ಗ್ರಾಮದಲ್ಲಿ ಹೇಮಾವತಿ ನದಿಗೆ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಆರಂಭವಾಗಿ 11 ವರ್ಷವಾದರೂ ತಾಂತ್ರಿಕ ಅಡಚಣೆಯಿಂದಾಗಿ ಪೂಣಗೊಂಡಿಲ್ಲ. ಈ ನಡುವೆ ಕೆಆರ್‌ಡಿಸಿಎಲ್ ಸಂಸ್ಥೆಯನ್ನು ಲೋಕೋಪಯೋಗಿ ಇಲಾಖೆಗೆ ಸೇರ್ಪಡೆಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.ಕಾಡಾನೆ ಮತ್ತಿತರ ವನ್ಯಪ್ರಾಣಿಗಳ ಉಪಟಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅರಣ್ಯದ ಸುತ್ತ ವಾರ್ಷಿಕ 100 ಕಿ.ಮೀ. ವ್ಯಾಪ್ತಿ ಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗುವುದು. ಈಗಾಗಲೆ ಗುಂಡ್ಲುಪೇಟೆ, ಹಾಸನ ಮತ್ತಿತರ ಕಡೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾರ್ಯ ನಡೆದಿದೆ. ಜಿಲ್ಲೆಯ ಕಾಡಾನೆ ಇರುವ ಪ್ರದೇಶದ ಅರಣ್ಯ ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ನೀಲಿ ನಕ್ಷೆ ತಯಾರಿಸಲಾಗಿದೆ. ಕಾಡಾನೆಗಳಿಗೆ ಅರಣ್ಯದಲ್ಲಿ ನೀರು ಮತ್ತು ಆಹಾರವಿಲ್ಲದೆ ಕಂಗಾಲಾಗಿ ನಾಡಿಗೆ ಆಹಾರ, ನೀರು ಹುಡುಕಿಕೊಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಆನೆ ಪಥ ನಿರ್ಮಿಸಿ ನೀರು, ಆಹಾರ ಸೇರಿದಂತೆ ಎಲ್ಲ ವ್ಯವಸ್ಥೆ ಒದಗಿಸಿ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಾಸನ ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಟಿ.ಡಿ.ರಾಜೇಗೌಡ, ಎಚ್.ಡಿ.ತಮ್ಮಯ್ಯ, ನಯನಾ ಮೋಟಮ್ಮ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಇದ್ದರು.

ಮೂಡಿಗೆರೆ ಕ್ಷೇತ್ರದಲ್ಲಿ ಮಳೆಯಿಂದ ಶಿಥಿಲಗೊಂಡಿರುವ ದೇವವೃಂದ-ಜಪಾವತಿ ಸೇತುವೆ ಹಾಗೂ ರಸ್ತೆಗಳನ್ನು ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ವೀಕ್ಷಿಸಿದರು.

30 ಕೆಸಿಕೆಎಂ 4ಮೂಡಿಗೆರೆ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದರು. ಶಾಸಕರಾದ ಎಚ್‌.ಡಿ. ತಮ್ಮಯ್ಯ, ಟಿ.ಡಿ. ರಾಜೇಗೌಡ, ನಯನಾ ಮೋಟಮ್ಮ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ