ಕನ್ನಡಪ್ರಭ ವಾರ್ತೆ ಬೆಂಗಳೂರು
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕರ್ನಾಟಕ ನೀರಾವರಿ ನಿಗಮ, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್, ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜಂಗಲ್ ಲಾಡ್ಜಸ್ ಆ್ಯಂಡ್ ರೇಸಾರ್ಟ್ನ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಭದ್ರಾ ಜಲಾಯಶಯದ ಹಿನ್ನೀರಿನ ವ್ಯಾಪ್ತಿಯಲ್ಲಿ ಅರ್ಜಿದಾರ ಸಂಘದ ಸದಸ್ಯರು ಅನೇಕ ವರ್ಷಗಳಿಂದ ತೆಪ್ಪಗಳನ್ನು ಬಳಸಿ ಹರಿಗೋಲು ಗಿಲ್ನೆಟ್ ಮೂಲಕ ಮೀನುಗಾರಿಕೆ ನಡೆಸುತ್ತಿದ್ದಾರೆ. ಆದರೆ, ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಲಿಮಿಟೆಡ್ 2022ರಿಂದ ವಾಟರ್ ಬೋಟಿಂಗ್ ಚಟುವಟಿಕೆ ನಡೆಸುತ್ತಿದ್ದಾರೆ. ಇದರಿಂದ ಸ್ಥಳೀಯ ಮೀನುಗಾರಿಕೆಗೆ ಸಮಸ್ಯೆ ಉಂಟಾಗುತ್ತಿದ್ದು, ಅರ್ಜಿದಾರ ಸಂಘದ ಸದಸ್ಯರ ಬದುಕಿನ ಪ್ರಶ್ನೆಯಾಗಿದೆ. ಈ ಭಾಗದಲ್ಲಿ ಬೋಟಿಂಗ್ ಚಟುವಟಿಕೆ ನಡೆಸುವುದರಿಂದ ಪರಿಸರ, ಕುಡಿಯುವ ನೀರಿನ ವಲಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ವಿವರಿಸಿದರು.ಹೀಗಾಗಿ ಕರ್ನಾಟಕ ನೀರಾವರಿ ನಿಗಮ ಭದ್ರಾ ಜಲಾಶಯದ ಹಿನ್ನೀರಿನಲ್ಲಿ ಬೋಟಿಂಗ್ ಚಟುವಟಿಕೆ ನಡೆಸಲು ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ಗೆ ಅನುಮತಿ ನೀಡಿ 2022ರ ಮೇ 18ರಂದು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ತಮ್ಮ ಅರ್ಜಿಯ ವಿಚಾರಣೆ ಮುಗಿಯುವ ತನಕ ಬೋಟಿಂಗ್ ಚಟುವಟಿಕೆ ನಡೆಸದಂತೆ ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಲಿಮಿಟೆಡ್ಗೆ ನಿರ್ಬಂಧ ಹೇರಬೇಕು ಎಂದು ಕೋರಿದರು.