ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶಿವಮೊಗ್ಗ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಇಡಲಾಗಿದೆ ಎಂದು ಅಜ್ಮಲ್ ಕಸಬ್ ಎಂಬಾತನ ಇ-ಮೇಲ್ ಮೂಲಕ ಬೆದರಿಕೆ ಬಂದ ತಕ್ಷಣ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆಯು, ಶ್ವಾನದಳ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸಿದರು.
ಮಂಗಳವಾರ ಮಧ್ಯರಾತ್ರಿ 1.37 ಗಂಟೆಗೆ ನ್ಯಾಯಾಲಯದ ಇ ಮೇಲ್ ಗೆ ಬಂದಿದ್ದ ಬೆದರಿಕೆ ಸಂದೇಶದಿಂದ ಬುಧವಾರ ಬೆಳಗ್ಗೆಯಿಂದಲೇ ನ್ಯಾಯಾಲಯದ ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರಲ್ಲಿ ಆತಂಕಕ್ಕೆ ಒಳಗಾಗುವಂತಾದರು.ತಕ್ಷಣ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಹಿರಿಯ ಶಿರಸ್ತೇದಾರರು ಮತ್ತು ಆಡಳಿತಾಽಕಾರಿಗಳು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ,ರಕ್ಷಣೆ ನೀಡುವಂತೆ ಕೋರಿದರು.
ಆನಂತರ ಶ್ವಾನದಳ ಹಾಗೂ ವಿಧ್ವಂಸಕ ಕೃತ್ಯಗಳ ವಿರೋಽ ತಪಾಸಣಾದ ತಂಡವನ್ನು ಸ್ಥಳಕ್ಕೆ ಕರೆಸಿ ನ್ಯಾಯಾಲಯದ ಕಟ್ಟಡ, ನ್ಯಾಯಾಂಗ ಕೊಠಡಿಗಳು, ವಾಹನ ನಿಲುಗಡೆ ಪ್ರದೇಶ, ಕ್ಯಾಂಟೀನ್ ಗಳು ಹಾಗೂ ಸಾರ್ವಜನಿಕರು ಸಂಚರಿಸುವ ಸ್ಥಳಗಳಲ್ಲಿ ಸಮಗ್ರ ತಪಾಸಣೆ ನಡೆಸಿದರು. ತಪಾಸಣೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಸ್ಪೋಟಕ ಪತ್ತೆಯಾಗಲಿಲ್ಲ. ಹಾಗಾಗಿ ಇದೊಂದು ಹುಸಿಬಾಂಬ್ ಬೆದರಿಕೆ ಎನ್ನುವುದು ಮೆಲ್ನೋಟಕ್ಕೆ ತಿಳಿದು ಬಂದಿದೆ.
ವಿವಿಧ ಜಿಲ್ಲೆಗಳ ನ್ಯಾಯಾಧೀಶರೇ ಗುರಿ
ಶಿವಮೊಗ್ಗ ಕೋರ್ಟ್ ಗೆ ಬಾಂಬ್ ಬೆದರಿಕೆ ಮೇಲ್ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಹಲವು ಜಿಲ್ಲಾ ನ್ಯಾಯಾಧೀಶರ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು ನಕಲಿ ಮೊಬೈಲ್ ಸಂಖ್ಯೆಗಳ ಮೂಲಕ ವಕೀಲರು, ನ್ಯಾಯಾಲಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಹಣದ ಸಹಾಯ ಕೇಳುವ ಸಂದೇಶಗಳನ್ನು ಕಳುಹಿಸಲಾಗುತ್ತಿದೆ. ಬ್ಯಾಂಕ್ ಸಮಸ್ಯೆ ಇದೆ ಎಂದು ಹೇಳಿ 50 ಸಾವಿರ ಹಣ ರು. ಕಳುಹಿಸುವಂತೆ ಮನವಿ ಮಾಡಲಾಗುತ್ತಿದೆ. ಈ ರೀತಿಯ ಪ್ರಕರಣಗಳು ಮೊದಲು ಚಿಕ್ಕಬಳ್ಳಾಪುರದಲ್ಲಿ ಆರಂಭವಾಗಿ, ಬಳಿಕ ಹಾಸನ, ಗದಗ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರದಿಯಾಗಿವೆ ಎಂದು ತಿಳಿಸಿದರು.
ಇನ್ನು, ಬೆದರಿಕೆ ಹಾಕಿ ಬಂದಿರುವ ಇ ಮೇಲ್ನಲ್ಲಿ ತಮಿಳುನಾಡು ಮಾಜಿ ಸಿಎಂ ಪುತ್ರ ಉದಯನಿಧಿ ಸ್ಟಾಲಿನ್ ಅವರ ಹೆಸರು ಉಲ್ಲೇಖವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ತಿಳಿಸಿದ್ದಾರೆ.
ಯಾವ ಪ್ರಕರಣ ಎಂಬುದರ ಕುರಿತಾಗಿ ನಮಗೆ ಯಾವುದೇ ರೀತಿಯಲ್ಲೂ ಸಹ ಮಾಹಿತಿಯಿಲ್ಲ. ಚೆನ್ನೈ ನಗರದಲ್ಲಿನ ಪ್ರಕರಣವನ್ನು ಇಲ್ಲಿಗೆ ಲಿಂಕ್ ಮಾಡಲಾಗಿದೆ. ಹೀಗಾಗಿ, ತಮಿಳುನಾಡು ಪೊಲೀಸರೊಂದಿಗೆ ಚರ್ಚಿಸಿ, ಮುಂದಿನ ತನಿಖೆಯನ್ನು ಚುರುಕುಗೊಳಿಸಲಾಗುವುದು ಎಂದರು.
ಹುಸಿ ಬಾಂಬ್ ಕರೆ:
ಜಿಲ್ಲಾ ನ್ಯಾಯಾಲಯವನ್ನು ಬಾಂಬ್ ಮೂಲಕ ಉಡಾಯಿಸುವುದಾಗಿ ಬಂದ ಇ ಮೇಲ್ ಒಂದು ಹುಸಿ ಬಾಂಬ್ ಬೆದರಿಕೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ ಎಂದು ಹೇಳಿದ್ದಾರೆ.ಬುಧವಾರ ಮಧ್ಯರಾತ್ರಿ 1.37ಕ್ಕೆ ಇ ಮೇಲ್ ಮೂಲಕ ಬೆದರಿಕೆ ಬಂದಿದ್ದು, ಮೊದಲ ಸಾಲಿನಲ್ಲೇ ಶಿವಮೊಗ್ಗ ಜಿಲ್ಲಾ ನ್ಯಾಯಾಲಯವನ್ನು ಉಡಾಯಿಸುವುದಾಗಿ ಹೇಳಲಾಗಿದೆ. ಈ ವಿಚಾರ ತಿಳಿದಾಕ್ಷಣ ಎಸಿ ತಂಡ, ಅಧಿಕಾರಿ ಹಾಗೂ ಸಿಬ್ಬಂದಿಗಳು, ಎಂಎಫ್ಎಂಡಿ, ಎಚ್ಎಚ್ಎಡಿ ಹಾಕಲಾಗಿದ್ದು, ನ್ಯಾಯಾಲಯ ಕಟ್ಟಡಕ್ಕೆ ತೆರಳಿ ಸಂಪೂರ್ಣ ತಪಾಸಣೆ ನಡೆಸುತ್ತಿದೆ ಎಂದರು.