- ಚನ್ನಗಿರಿ ಬಿಜೆಪಿ ಕಚೇರಿಯಲ್ಲಿ ಬಿಎಲ್ಎ-2 ಕಾರ್ಯಾಗಾರದಲ್ಲಿ ಪಿ.ರಾಜೀವ್ ಸಲಹೆ
ಕನ್ನಡಪ್ರಭ ವಾರ್ತೆ ಚನ್ನಗಿರಿ
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯದಲ್ಲಿರುವ ಮತದಾರರ ಪಟ್ಟಿ ಪರಿಷ್ಕರಿಸಿ ನಿಜವಾದ ಮತದಾರರು ಮಾತ್ರ ಮತದಾನ ಮಾಡುವಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಬೂತ್ ಏಜೆಂಟರ ಕರ್ತವ್ಯ ಎಂದು ಕುಡುಚಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಿ.ರಾಜೀವ್ ಹೇಳಿದರು.ಶನಿವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತಾಲೂಕು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಬಿಎಲ್ಎ-2 ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ನಿರ್ಣಾಯಕವಾಗಿದ್ದಾರೆ. ನಮ್ಮನ್ನಾಳುವ ನಾಯಕರನ್ನು ನಾವೇ ಆಯ್ಕೆ ಮಾಡಿಕೊಳ್ಳಲು ಇರುವ ಏಕೈಕ ಅಸ್ತ್ರ ಮತದಾನವಾಗಿದೆ. ಆದ್ದರಿಂದ ಬಿಜೆಪಿ ಬೂತ್ ಏಜೆಂಟರು ನಿಜವಾದ ಮತದಾರರು ಮತದಾರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳುವಂತೆ ಮಾಡಬೇಕು. ನಕಲಿ ಮತದಾರರಿಗೆ ಕಡಿವಾಣ ಹಾಕುವ ಜವಾಬ್ದಾರಿ ನಿಮ್ಮಗಳ ಮೇಲಿದೆ ಎಂದರು.
ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಮಾತನಾಡಿ, ಬಿಜೆಪಿ ಸೈದ್ಧಾಂತಿಕ ಹಿನ್ನೆಲೆ ಹೊಂದಿರುವ ಪಕ್ಷವಾಗಿದೆ. ದೇಶದಲ್ಲಿ ಬಿಜೆಪಿ ಸತತವಾಗಿ ಅಧಿಕಾರ ಹಿಡಿದಿದೆ ಎಂದರೆ ಅದಕ್ಕೆ ಬೂತ್ ಏಜೆಂಟರೇ ಕಾರಣವಾಗಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಅಸ್ಥಿರಗೊಳ್ಳುತ್ತಿದೆ. ಯಾವ ಸಂದರ್ಭದಲ್ಲಿ ಬೇಕಾದರೂ ಚುನಾವಣೆ ಬರಬಹುದಾಗಿದೆ. ಬಿಜೆಪಿ ಕಾರ್ಯಕರ್ತರು ಚುನಾವಣೆ ಎದುರಿಸಲು ಸಿದ್ಧರಾಗುತ್ತಿದ್ದು, ಮೊದಲ ಹಂತದಲ್ಲಿ ಸರಿಯಾದ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿದ್ದೇವೆ ಎಂದರು.
- - -
ಚನ್ನಗಿರಿಯಲ್ಲಿ ತಾಲೂಕು ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಎಲ್ಎ-2 ಕಾರ್ಯಾಗಾರದಲ್ಲಿ ಕುಡಚಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಿ.ರಾಜೀವ್ ಮಾತನಾಡಿದರು.