ಹಣ ಹೊಂದಿಸಲು ಬಿಪಿಎಲ್‌ ಕಾರ್ಡ್‌ ರದ್ದತಿ ಹುನ್ನಾರ: ಕೋಟಾ ಶ್ರೀನಿವಾಸ್ ಪೂಜಾರಿ

KannadaprabhaNewsNetwork |  
Published : Sep 22, 2024, 01:51 AM IST
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಸದಸ್ಯತ್ವ ಅಭಿಯಾನ ಸಂಬಂಧ ನಡೆದ ಪ್ರಮುಖರ ಸಭೆಯಲ್ಲಿ ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ಅವರು ಮಾತನಾಡಿದರು. ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ್‌ ಶೆಟ್ಟಿ, ಪುಷ್ಪರಾಜ್‌ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಗೃಹಲಕ್ಷ್ಮಿ ಯೋಜನೆಗೆ ಹಣ ಹೊಂದಿಸಲು ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಗೊಳಿಸುವ ಹುನ್ನಾರ ನಡೆಸಿರುವ ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಕರೆ ನೀಡಿದರು.

ಗೃಹ ಲಕ್ಷ್ಮಿ ಯೋಜನೆ ಹಣ ಹೊಂದಿಸಲು ಈ ಕ್ರಮ । ಪಕ್ಷದ ಕಾರ್ಯಕರ್ತರು ಡಿಸಿಗೆ ದೂರು ಸಲ್ಲಿಸಬೇಕು । ಬಿಜೆಪಿ ಸದಸ್ಯತ್ವ ಅಭಿಯಾನ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಗೃಹಲಕ್ಷ್ಮಿ ಯೋಜನೆಗೆ ಹಣ ಹೊಂದಿಸಲು ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಗೊಳಿಸುವ ಹುನ್ನಾರ ನಡೆಸಿರುವ ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಕರೆ ನೀಡಿದರು.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಸದಸ್ಯತ್ವ ಅಭಿಯಾನ ಸಂಬಂಧ ನಡೆದ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 50 ಸಾವಿರ ಬಿಪಿಎಲ್‌ ಕಾರ್ಡ್‌ಗಳು ರದ್ದಾಗುವ ಸಾಧ್ಯತೆ ಇದೆ. ಈ ಸಂಬಂಧ ರಾಜ್ಯ ಸರ್ಕಾರ ಸಮೀಕ್ಷೆ ಸಹ ನಡೆಸುತ್ತಿದೆ. ಸಾವಿರಾರು ಬಡ ಜನರಿಗೆ ತೊಂದರೆ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮಹಿಳಾ ಮೋರ್ಚಾ ಅಥವಾ ಬೇರೆ ಯಾವುದಾದರೂ ಘಟಕದಿಂದ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿ ಬಡವರ ಪಡಿತರ ಚೀಟಿಗಳನ್ನು ರದ್ದು ಪಡಿಸಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಬೇಕು. ಇದರಿಂದ ಬಿಪಿಎಲ್‌ ಕಾರ್ಡ್‌ಗಳಿಗೆ ಸ್ವಲ್ಪ ಮಟ್ಟಿನ ರಿಯಾಯ್ತಿಯಾದರೂ ಸಿಗಬಹುದು, ಬಡವರಿಗೆ ಅನುಕೂಲ ವಾಗಬಹುದು ಎಂದರು.

ಇಡೀ ದೇಶದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ನಮ್ಮ ನಮ್ಮ ಬೂತ್‌ಗಳಲ್ಲಿ ಅಭಿಯಾನಕ್ಕೆ ವೇಗ ನೀಡಬೇಕು. ಕೆಲವೆಡೆ ತುಂಬಾ ಚೆನ್ನಾಗಿ ನಡೆದಿದೆ. ಪ್ರಮುಖವಾಗಿ ಮಹಾಶಕ್ತಿ ಕೇಂದ್ರಗಳು, ಮಂಡಲಗಳಲ್ಲಿ ಇನ್ನಷ್ಟು ಚುರುಕಾಗಿ ಸದಸ್ಯತ್ವ ಅಭಿಯಾನ ನಡೆಯಬೇಕಿದೆ ಎಂದು ಕರೆ ನೀಡಿದರು.ಮಂಡಲಗಳು ಮತ್ತು ಶಕ್ತಿ ಕೇಂದ್ರದ ನಿಜವಾದ ಶಕ್ತಿ ಅರಿವಿಗೆ ಬರುವುದೇ ಸದಸ್ಯತ್ವ ನೋಂದಣಿ ಆಧಾರದ ಮೇಲೆ. ಈ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಮೋರ್ಚಾಗಳು ಜವಾಬ್ದಾರಿಯನ್ನುತೆಗೆದುಕೊಂಡು ಆಯಾ ಬೂತ್, ಶಕ್ತಿಕೇಂದ್ರ ಹಾಗೂ ಮಂಡಲಗಳ ಪ್ರಮುಖರನ್ನು ಜೋಡಿಸಿಕೊಂಡು ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಮಾತನಾಡಿ, ಸದಸ್ಯತ್ವ ಅಭಿಯಾನ ಕೇವಲ ಸಂಖ್ಯಾತ್ಮಕವಾಗಿಯಾದರೆ ಸಾಲದು, ಅದು, ಗುಣಾತ್ಮಕ ವಾಗಿರಬೇಕು. ಕೇವಲ ತಾಂತ್ರಿಕವಾಗಿ ಸದಸ್ಯರಾದರೆ ಸಾಕಾಗುವುದಿಲ್ಲ. ಪಕ್ಷದೊಂದಿಗೆ ನೂತನ ಸದಸ್ಯರನ್ನು ಭಾವನಾತ್ಮಕವಾಗಿ ಬೆರೆತು ಕೊಳ್ಳುವಂತೆ ಮಾಡಬೇಕು. ಅಂತವರನ್ನೇ ಸದಸ್ಯರನ್ನಾಗಿ ನೋಂದಾಯಿಸಬೇಕು. ಯಾವ ಕಾರಣಕ್ಕೆ ಸದಸ್ಯತ್ವ ತೆಗೆದುಕೊಂಡಿದ್ದೇನೆ ಎನ್ನುವುದು ಅವರಿಗೆ ಗೊತ್ತಾಗಬೇಕು. ಈ ಹಿನ್ನೆಲೆಯಲ್ಲಿ ನೂತನವಾಗಿ ಸದಸ್ಯತ್ವ ಪಡೆಯುವವರಿಗೆ ಕೇಂದ್ರದ ನಾಯಕತ್ವ, ಪಕ್ಷದ ತತ್ವ, ಸಿದ್ಧಾಂತದ ಬಗ್ಗೆ ಮನವರಿಕೆ ಮಾಡಬೇಕು ಎಂದರು.

ಪಕ್ಷದ ಕಾರ್ಯ ವಿಸ್ತಾರವಾಗಬೇಕಾದರೆ ಅದಕ್ಕೆ ಸದಸ್ಯತ್ವ ಒಂದು ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಕೊಳಗೇರಿಯಿಂದ ಹಿಡಿದು ಮೇಲ್ಮಟ್ಟದ ವರನ್ನು ಸದಸ್ಯರನ್ನಾಗಿ ಮಾಡಿ ಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಮತದಾನದ ಅಧಿಕಾರ ಸಮಾನವಾಗಿದೆ. ಜಾತಿ ಭೇದ, ಬಡವ ಶ್ರೀಮಂತ, ದಡ್ಡ ಬುದ್ಧಿವಂತ ಎನ್ನುವುದು ಇರುವುದಿಲ್ಲ. ಹಾಗೆಯೇ ನಾವು ಸದಸ್ಯತ್ವ ಅಭಿಯಾನದ ವೇಳೆ ಎಲ್ಲರಿಗೂ ಅವಕಾಶ ಕೊಡಬೇಕು ಎಂದು ಕರೆ ನೀಡಿದರು.ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದ ಪರಿಣಾಮ ನಗರದಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ಭಾರತೀಯ ಜನತಾ ಪಕ್ಷ ಇಂದು ಮೊದಲನೇ ಸ್ಥಾನಕ್ಕೆ ಏರಿದೆ. ಜನಪರ ಹೋರಾಟದ ಮೂಲಕ ಪಕ್ಷವನ್ನು ಸಾರ್ವಜನಿಕರ ಹೃದಯದಲ್ಲಿ ಪ್ರತಿಷ್ಠಾಪನೆ ಮಾಡ ಬೇಕಾಗುತ್ತದೆ. ಪಕ್ಷದ ಸಕ್ರಿಯ ಸದಸ್ಯರಾಗಲು ಕನಿಷ್ಠ 100 ಜನರನ್ನು ಸದಸ್ಯರನ್ನಾಗಿ ಮಾಡಿಸಬೇಕಾಗುತ್ತದೆ. ಅಂತವರು ಪಕ್ಷದಲ್ಲಿ ಜವಾಬ್ದಾರಿ ಗಳನ್ನು ಪಡೆಯಲು ಅರ್ಹತೆ ಪಡೆಯುತ್ತಾರೆ ಎಂದರು.ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್‌ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್‌. ದೇವರಾಜ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಡಾ. ನರೇಂದ್ರ, ಬೆಳವಾಡಿ ರವೀಂದ್ರ, ಮುಖಂಡರಾದ ಪ್ರೇಮ್‌ ಕುಮಾರ್‌, ಬಿ. ರಾಜಪ್ಪ, ಜಸಂತಾ ಅನಿಲ್ ಕುಮಾರ್, ಪವಿತ್ರ, ಸಂತೋಷ್‌ ಕೋಟ್ಯಾನ್, ಬಸವರಾಜ್, ಜಿ.ಶಂಕರ್‌ ಉಪಸ್ಥಿತರಿದ್ದರು.

21 ಕೆಸಿಕೆಎಂ 2ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಸದಸ್ಯತ್ವ ಅಭಿಯಾನ ಸಂಬಂಧ ನಡೆದ ಪ್ರಮುಖರ ಸಭೆಯಲ್ಲಿ ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ಮಾತನಾಡಿದರು. ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ್‌ ಶೆಟ್ಟಿ, ಪುಷ್ಪರಾಜ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ