ಮಂಜುನಾಥ ಕೆ.ಎಂ.
ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದಾಗಿರುವ ಈ ರಸ್ತೆ ದಿನದ ಬಹುತೇಕ ಸಮಯ ವಾಹನ ದಟ್ಟಣೆ, ಜನಸಂದಣಿ ಹಾಗೂ ಅವ್ಯವಸ್ಥೆಯಿಂದ ಕಿಕ್ಕಿರಿದಿರುತ್ತದೆ. ಈ ರಸ್ತೆ ಅಗಲೀಕರಣದ ಮಾತು ಹಲವು ವರ್ಷಗಳಿಂದ ಕೇಳಿ ಬರುತ್ತಿದ್ದರೂ, ಈ ವರೆಗೆ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಬ್ರಾಹ್ಮಣ ಬೀದಿ ಎರಡೂ ಬದಿಗಳಲ್ಲಿ ಸಾವಿರಕ್ಕೂ ಅಧಿಕ ವ್ಯಾಪಾರ ಮಳಿಗೆಗಳು ಕಾರ್ಯನಿರ್ವಹಿಸುತ್ತಿವೆ. ನಿತ್ಯ ಸಾವಿರಾರು ಗ್ರಾಹಕರು, ವ್ಯಾಪಾರಿಗಳು ಹಾಗೂ ವಾಹನ ಸವಾರರು ಈ ರಸ್ತೆ ಅವಲಂಬಿಸಿದ್ದಾರೆ. ಆದರೆ, ರಸ್ತೆ ಅಗಲ ಕಡಿಮೆ ಇರುವುದರಿಂದ ಎರಡು ವಾಹನಗಳು ಎದುರುಬದುರಾದರೆ ಸಂಚಾರವೇ ಸ್ಥಗಿತಗೊಳ್ಳುವ ಪರಿಸ್ಥಿತಿ. ಅದರಲ್ಲೂ ಪೀಕ್ ಅವಧಿಯಲ್ಲಿ ಈ ರಸ್ತೆಯಲ್ಲಿ ಸಂಚರಿಸುವುದು ದೊಡ್ಡ ಸಾಹಸ. ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು ಈ ರಸ್ತೆಯಲ್ಲಿ ಓಡಾಡಲು ಸರ್ಕಸ್ ಮಾಡದೆ ವಿಧಿಯಿಲ್ಲ.ಈ ರಸ್ತೆ ಹಲವೆಡೆಗಳಲ್ಲಿ ಗುಂಡಿಗಳಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಲಿಸದಿದ್ದರೆ ಅಪಘಾತ ಗ್ಯಾರಂಟಿ. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಂತು ರಸ್ತೆಯ ಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಅನೇಕ ಬಾರಿ ವಾಹನ ಸವಾರರು ಜಾರಿ ಬಿದ್ದು, ಗಾಯಗೊಂಡಿರುವ ಘಟನೆಗಳೂ ನಡೆದಿವೆ.
ಬ್ರಾಹ್ಮಣ ಬೀದಿ ಅಗಲೀಕರಣದ ಕುರಿತು ಹಲವು ಬಾರಿ ಚರ್ಚೆಗಳು ನಡೆದಿವೆ. ವಿವಿಧ ಸಂಘಟನೆಗಳು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿದ್ದಾರೆ. ಆದರೆ, ಅತಿಕ್ರಮಣ ತೆರವು, ಕಟ್ಟಡ ಸ್ವಾಧೀನ ಸೇರಿದಂತೆ ವಿವಿಧ ಕಾರಣಗಳಿಂದ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಪರಿಣಾಮವಾಗಿ ಸಮಸ್ಯೆ ವರ್ಷದಿಂದ ವರ್ಷಕ್ಕೆ ಗಂಭೀರವಾಗುತ್ತಿದೆ. ನಗರದ ಆರ್ಥಿಕ ಚಟುವಟಿಕೆಯಲ್ಲಿ ಪ್ರಮುಖ ಪಾತ್ರ ವಹಿಸುವ ಈ ರಸ್ತೆಯ ಅಭಿವೃದ್ಧಿ ಈಗ ಅನಿವಾರ್ಯವಾಗಿದೆ. ರಸ್ತೆ ಅಗಲೀಕರಣದೊಂದಿಗೆ ಗುಣಮಟ್ಟದ ರಸ್ತೆ ನಿರ್ಮಾಣ, ಸಮರ್ಪಕ ಚರಂಡಿ ವ್ಯವಸ್ಥೆ, ಪಾದಚಾರಿ ಮಾರ್ಗ ಹಾಗೂ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ. ಇದರಿಂದ ವ್ಯಾಪಾರ ಚಟುವಟಿಕೆಗೂ ಉತ್ತೇಜನ ದೊರೆಯುವುದರ ಜೊತೆಗೆ ಸಾರ್ವಜನಿಕರ ಸಂಚಾರವೂ ಸುಗಮವಾಗಲಿದೆ. ಜನಪ್ರತಿನಿಧಿಗಳು, ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲಿಯೇ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕಿದೆ. ಹಲವು ವರ್ಷಗಳಿಂದ ಕೇವಲ ಚರ್ಚೆಯ ಮಟ್ಟದಲ್ಲೇ ಉಳಿದಿರುವ ಬ್ರಾಹ್ಮಣ ಬೀದಿ ಅಗಲೀಕರಣಕ್ಕೆ ಈಗಾದರೂ ಚಾಲನೆ ಸಿಗಬೇಕಿದೆ. ಬ್ರಾಹ್ಮಣ ಬೀದಿ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ತೊಂದರೆ ತಂದೊಡ್ಡಿರುವ ಇಕ್ಕಟ್ಟಾದ ರಸ್ತೆಗಳ ಅಗಲೀಕರಣಕ್ಕೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಗಮನ ಹರಿಸಬೇಕಿದೆ.