ಎಸ್ಸೆಸ್ಸೆಲ್ಸಿಯನ್ನು ಮಂಡ್ಯವನ್ನು ಪ್ರಥಮ ಸ್ಥಾನಕ್ಕೆ ತನ್ನಿ: ಚಲುವರಾಯಸ್ವಾಮಿ

KannadaprabhaNewsNetwork |  
Published : Sep 12, 2026, 01:30 AM IST
೧೧ಕೆಎಂಎನ್‌ಡಿ-೪ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರನ್ನು ಅಭಿನಂದಿಸಲಾಯಿತು. | Kannada Prabha

ಸಾರಾಂಶ

ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಕರನ್ನು ಜಾತಿ ಗಣತಿ, ಎಸ್‌ಐಆರ್, ಜನಗಣತಿ ಸೇರಿದಂತೆ ಅನ್ಯ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಿಗೂ ನಿಯೋಜಿಸಲಾಗುತ್ತಿದೆ. ಪರಿಣಾಮ ಶಿಕ್ಷಕರ ಮೇಲೆ ಕೆಲಸದ ಹೊರೆ ಹೆಚ್ಚಿದೆ. ಇದರ ಜೊತೆಗೆ ಶಾಲೆಯಲ್ಲಿ ಮಕ್ಕಳಿಗೆ ಪಾಠವನ್ನೂ ಕಲಿಸಬೇಕಿದೆ. ಹಾಗಾಗಿ ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸದಂತೆ ಜಿಲ್ಲಾಧಿಕಾರಿ, ಸಿಇಓ ಅವರಲ್ಲಿ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ ತಂದುಕೊಟ್ಟರೆ ಶಿಕ್ಷಕರಿಗೆ ವಿಶೇಷ ಉಡುಗೊರೆ ನೀಡುವುದಾಗಿ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು.

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಶಿಕ್ಷಣ ಇಲಾಖೆ, ಅಧಿಕಾರಿಗಳು, ಶಿಕ್ಷಕರು ಹಾಗೂ ಪೋಷಕರ ಸಮನ್ವಯದ ಪ್ರಯತ್ನದಿಂದ ಮಂಡ್ಯ ಜಿಲ್ಲೆ ರಾಜ್ಯದಲ್ಲಿ ಐದನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ. ಶೇ.೦.೭ ಫಲಿತಾಂಶದ ವ್ಯತ್ಯಾಸದಲ್ಲಿ ಮೊದಲ ಸ್ಥಾನ ಕೈತಪ್ಪಿದೆ. ಮುಂದಿನ ದಿನಗಳಲ್ಲಿ ಶಿಕ್ಷಕರು ಹಾಗೂ ಇಲಾಖೆಯ ಅಧಿಕಾರಿಗಳು ಇನ್ನಷ್ಟು ಶ್ರಮ ವಹಿಸಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯನ್ನು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಬೇಕು. ಜಿಲ್ಲೆ ಉತ್ತಮ ಫಲಿತಾಂಶದೊಂದಿಗೆ ಮೊದಲ ಸ್ಥಾನ ಗಳಿಸಿದರೆ ಶಿಕ್ಷಕರಿಗೆ ವಿಶೇಷ ಉಡುಗೊರೆ ನೀಡಿ ಗೌರವಿಸಲಾಗುವುದು ಎಂದು ಘೋಷಿಸಿದರು.

ಶಾಸಕ ಪಿ.ರವಿಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಸುಮಾರು ೧,೮೦೦ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಲಾಗಿದೆ. ಮಂಡ್ಯ ತಾಲೂಕಿನಲ್ಲಿ ಈಗಾಗಲೇ ೬೦ ಶಾಲೆಗಳನ್ನು ದುರಸ್ಥಿ ಮಾಡಲಾಗಿದ್ದು, ಮುಂದಿನ ಹಂತದಲ್ಲಿ ೪೦ ಶಾಲೆಗಳ ದುರಸ್ಥಿಗೆ ಅನುದಾನ ಒದಗಿಸಲಾಗಿದೆ. ಶೀಘ್ರದಲ್ಲೇ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಶಿಕ್ಷಕರ ಬೇಡಿಕೆಗಳಿಗೆ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಶಿಕ್ಷಕರು ಪಾರದರ್ಶಕವಾಗಿ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಕುಮಾರ್, ಜಿಪಂ ಸಿಇಒ ಕೆ.ಆರ್.ನಂದಿನಿ, ಮೈಷುಗರ್ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್, ಮುಡಾ ಅಧ್ಯಕ್ಷ ಬಿ.ಪಿ. ಪ್ರಕಾಶ್, ಸೀಕ್ ಫೌಂಡೇಶನ್ ಅಧ್ಯಕ್ಷ ಪ್ರೊ. ರಘೋತ್ತಮ್‌ರಾವ್ ಕಾಶಿ ಇತರರಿದ್ದರು.

---

ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸಬೇಡಿ: ಕೆ.ವಿವೇಕಾನಂದ

ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸಬಾರದು. ಇದರಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಳ್ಳಲಿದೆ ಎಂದು ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ಹೇಳಿದರು.

ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಕರನ್ನು ಜಾತಿ ಗಣತಿ, ಎಸ್‌ಐಆರ್, ಜನಗಣತಿ ಸೇರಿದಂತೆ ಅನ್ಯ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಿಗೂ ನಿಯೋಜಿಸಲಾಗುತ್ತಿದೆ. ಪರಿಣಾಮ ಶಿಕ್ಷಕರ ಮೇಲೆ ಕೆಲಸದ ಹೊರೆ ಹೆಚ್ಚಿದೆ. ಇದರ ಜೊತೆಗೆ ಶಾಲೆಯಲ್ಲಿ ಮಕ್ಕಳಿಗೆ ಪಾಠವನ್ನೂ ಕಲಿಸಬೇಕಿದೆ. ಹಾಗಾಗಿ ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸದಂತೆ ಜಿಲ್ಲಾಧಿಕಾರಿ, ಸಿಇಓ ಅವರಲ್ಲಿ ಮನವಿ ಮಾಡಿದರು.

ಶಾಲೆಗಳು ಪ್ರಾರಂಭವಾಗಿ ನಾಲ್ಕು ತಿಂಗಳಾದರೂ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ನೀಡಿಲ್ಲ. ಈಗಷ್ಟೇ ಕೆಲವು ಶಾಲೆಗಳಿಗೆ ನೀಡಲಾಗುತ್ತಿದೆ. ಶೂ-ಸಾಕ್ಸ್‌ಗಳನ್ನೂ ನೀಡಿಲ್ಲ. ಮುಂದಿನ ತಿಂಗಳು ವಿದ್ಯಾರ್ಥಿಗಳಿಗೆ ಮಧ್ಯಂತರ ಪರೀಕ್ಷೆ ಎದುರಾಗಲಿದೆ. ಪಠ್ಯಪುಸ್ತಕಗಳನ್ನು ನೀಡಲು ಇಷ್ಟು ವಿಳಂಬ ಮಾಡಿದರೆ ಮಕ್ಕಳ ಓದಿನ ಗತಿ ಏನು ಎಂದು ಪ್ರಶ್ನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ಸಾರಿಗೆ ಬಸ್‌ ಸಮಯ ಬದಲಿಸಲು ಆಗ್ರಹಿಸಿ ಧರಣಿ
ಹುತಾತ್ಮ ಅರಣ್ಯ ಅಧಿಕಾರಿಗಳ ತ್ಯಾಗ ಅಮೋಘ