ಭದ್ರಾವತಿ ನಗರದಲ್ಲಿ ಗೌರಿ-ಗಣೇಶ ಹಬ್ಬ ಈ ಬಾರಿ ಒಟ್ಟಿಗೆ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಖರೀದಿ ಭರಾಟೆ ಹೆಚ್ಚಾಗಿರುವುದು ಕಂಡು ಬಂದಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಆದರೂ ಹಬ್ಬದ ಹಿನ್ನೆಲೆಯಲ್ಲಿ ವಿಧಿ ಇಲ್ಲದೆ ವ್ಯಾಪಾರಸ್ಥರು ಕೇಳಿದಷ್ಟು ನೀಡಿ ತಮಗೆ ಬೇಕಾದ ವಸ್ತುಗಳನ್ನು ಖರೀದಿಸುವುದು ಸಾಮಾನ್ಯವಾಗಿತ್ತು.
ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಈ ಬಾರಿ ಸಹ ವಿಜೃಂಭಣೆಯಿಂದ ನಡೆಯುತ್ತಿದ್ದು, ಈಗಾಗಲೇ ಸಿದ್ದತೆಗಳು ಪೂರ್ಣಗೊಂಡಿವೆ. ಉಳಿದಂತೆ ರಸ್ತೆಗಳಲ್ಲಿ, ಓಣಿಗಳಲ್ಲಿ, ಸಂಘ-ಸಂಸ್ಥೆಗಳ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ನಡೆಯುತ್ತಿದೆ. ಹಬ್ಬಕ್ಕಾಗಿ ದೂರದ ಊರುಗಳಿಂದ ನಗರಕ್ಕೆ ಆಗಮಿಸುತ್ತಿರುವವ ಹಾಗು ಬೇರೆ ಊರುಗಳಿಗೆ ತೆರಳುತ್ತಿರುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಹಬ್ಬದ ಹಿನ್ನಲೆಯಲ್ಲಿ ಖಾಸಗಿ ಬಸ್ಗಳಲ್ಲಿ ಪ್ರಯಾಣ ದರ ಸಹ ಹೆಚ್ಚಿಸಲಾಗಿದೆ.