ನೆಲಮಂಗಲ/ದಾಬಸ್ಪೇಟೆ : ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರು ಪಕ್ಷದ ಭ್ರಷ್ಟಾಚಾರವನ್ನು ಜನತೆಯ ಮುಂದೆ ಬಿಚ್ಚಿಟ್ಟಿದ್ದರಿಂದ ಅವರನ್ನು ಆಡಳಿತ ಪಕ್ಷದ ನಾಯಕರು ಬೆದರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ನಿಗಮದಲ್ಲಿ ನಡೆದಿರುವ ಗೋಲ್ಮಾಲ್ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲರ ಪರ ಬ್ಯಾಟ್ ಬೀಸಿ ಮಾತನಾಡಿದರು.
ಶಾಸಕ ಬಿ.ಆರ್.ಪಾಟೀಲ್ ಅವರು ರಾಜ್ಯದ ಗಂಭೀರವಾದ ಪರಿಸ್ಥಿತಿ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಬಡವರಿಗೆ ಮನೆಗಳನ್ನು ಕೊಡಬೇಕಿತ್ತು. ಅಲ್ಲಿಯೂ ಸಹ ಭ್ರಷ್ಟಾಚಾರ ನಡೆದಿರುವುದನ್ನು ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಪಾಟೀಲರನ್ನು ಆಡಳಿತ ಪಕ್ಷದ ನಾಯಕರೇ ಬೆದರಿಸುತ್ತಿದ್ದಾರೆ ಎಂದರು.
ಯಾವುದೇ ಅನುಕೂಲವಿಲ್ಲ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲವಿಲ್ಲ. ಹಿಂದೆ ಯಡಿಯೂರಪ್ಪನವರ ಸರ್ಕಾರ ಇದ್ದಾಗ ಅನೇಕ ಬಡವರ ಪರ ಯೋಜನೆ ನೀಡಿದ್ದರು. ಈಗ ಆ ಎಲ್ಲಾ ಯೋಜನೆ ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬೀದಿಗಿಳಿದು ಹೋರಾಟ:
ಈ ಸರ್ಕಾರದಲ್ಲಿ ಬರೀ ಭ್ರಷ್ಟಾಚಾರ ನಡೆಯುತ್ತಿದೆ. ಭ್ರಷ್ಟಾಚಾರ ಬಿಟ್ಟರೆ ಬೇರೆ ಯಾವುದೇ ಯೋಜನೆ ಇಲ್ಲ. ಎಲ್ಲೋ ಒಂದು ಕಡೆ ಸ್ಟೇಟ್ ಸ್ಪಾನ್ಸರ್ ಕರಪ್ಷನ್ ಗೆ ರಾಜ್ಯ ಸರ್ಕಾರವೇ ಉತ್ತೇಜನ ನೀಡುತ್ತಿದೆ ಅನ್ನಿಸುತ್ತಿದೆ. ಇದೆಲ್ಲವೂ ಬಿ.ಆರ್.ಪಾಟೀಲ್ ಹೇಳಿಕೆಯಿಂದ ಗೊತ್ತಾಗುತ್ತಿದೆ. ಇದೆಲ್ಲದರ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಿದೆ ಎಂದರು.
ವಸತಿ ಸಚಿವರ ರಾಜೀನಾಮೆ ಪಡೆಯಲಿ: ಸಂಸದ ಕೋಟ
ಉಡುಪಿ: ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ಕೊಟ್ಟವರಿಗೆ ಮಾತ್ರ ಮನೆ ಸಿಗುತ್ತದೆ ಎಂದು ಆಡಳಿತ ಪಕ್ಷದ ಶಾಸಕ ಬಿ.ಆರ್. ಪಾಟೀಲರೇ ಹೇಳಿದ್ದಾರೆ. ರಾಜಕಾರಣ ಏನೇ ಇರಲಿ ಪಾಟೀಲರು ಕಂಡದ್ದು ಕಂಡಹಾಗೆ ಹೇಳುವವರು, ಆದ್ದರಿಂದ ಭ್ರಷ್ಟಾಚಾರ ನಡೆದಿರುವುದು ಕನ್ನಡಿಯಷ್ಟೇ ಸ್ಪಷ್ಟವಾಗಿದೆ. ತಕ್ಷಣ ಮುಖ್ಯಮಂತ್ರಿ ಅವರು ವಸತಿ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಹ ಭ್ರಷ್ಟಾಚಾರವೇ ನಡೆದಿಲ್ಲ ಎಂದು ಉಪಮುಖ್ಯಮಂತ್ರಿ ಅವರು ಹೇಳಿದ್ದಾರೆ. ಆದರೆ ಬಡವರಿಗಾದ ಅನ್ಯಾಯ ಸಹಿಸುವುದಿಲ್ಲ ಎಂದು ಸಿಎಂ ಹೇಳುತ್ತಾರೆ, ನಿಗಮದ ಅಧಿಕಾರಿಗಳನ್ನು ಅಮಾನತು ಮಾಡಿ ತನಿಖೆ ಮಾಡುತ್ತಾರೆ, ತಮ್ಮ ತಾಕತ್ತು ತೋರಿಸುತ್ತಾರೆ ಎಂದು ಭಾವಿಸಿದ್ದೆ, ಆದರೆ ಅವರು ಹಾಗೇ ಮಾಡಿಲ್ಲ, ಅವರ ಈ ನಿರ್ಲಿಪ್ತತೆ ಸರಿಯಲ್ಲ ಎಂದರು. ಈ ಹಗರಣದ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿ ಹೋರಾಟ ಕೈಗೆತ್ತಿಕೊಳ್ಳುತ್ತೇವೆ, ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಲಿದೆ ಎಂದರು.‘
ದುಡ್ಡು ಕೊಡಿ, ಮನೆ ಪಡಿ’ ಕಾಂಗ್ರೆಸ್ ಹೊಸ ಘೋಷವಾಕ್ಯ: ಜೋಶಿ ಟೀಕೆಹುಬ್ಬಳ್ಳಿ: ದುಡ್ಡು ಕೊಡಿ, ಮನೆ ಪಡಿ-ಇದು ಕಾಂಗ್ರೆಸ್ ಹೊಸ ಘೋಷವಾಕ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.
ಶಾಸಕ ಬಿ.ಆರ್.ಪಾಟೀಲ ಅವರು ವಸತಿ ಇಲಾಖೆಯಲ್ಲಿ ದುಡ್ಡು ಕೊಟ್ಟವರಿಗೆ ಮಾತ್ರ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂಬ ಹೇಳಿಕೆ ಕುರಿತಂತೆ ಭಾನುವಾರ ಪ್ರತಿಕ್ರಿಯಿಸಿದ ಅವರು, ಶಾಸಕ ಬಿ.ಆರ್.ಪಾಟೀಲ, ಬಸವರಾಜ ರಾಯರಡ್ಡಿ ಅವರು ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಪಾಟೀಲ ಅವರ ಬಳಿ ಅದಕ್ಕೆ ಸಂಬಂಧಿಸಿದ ದಾಖಲೆಗಳು ಇರುವುದರಿಂದ ಅವರ ಮೇಲೆ ಕ್ರಮ ಕೈಗೊಳ್ಳುವ ತಾಕತ್ತು ಆ ಪಕ್ಷದವರಿಗಿಲ್ಲ ಎಂದು ವ್ಯಂಗ್ಯವಾಡಿದರು.
6 ತಿಂಗಳ ನಂತರ ಮುಖ್ಯಮಂತ್ರಿ ಸ್ಥಾನದಲ್ಲಿ ತಾವು ಇರುವುದಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಅನಿಸಿದೆ. ಹೀಗಾಗಿ ಅವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದ ಮೇಲೆ ಸಿದ್ದರಮಯ್ಯ ಅವರಿಗೆ ಹಿಡಿತ ಇಲ್ಲ ಎಂದು ಟೀಕಿಸಿದರು.ವಸತಿ ಯೋಜನೆ ಮನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವಂತೆ ಕೇಂದ್ರ ಸರ್ಕಾರ 2019ರಲ್ಲಿ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಈ ಆದೇಶ ಇದ್ದರೆ ಸಿಎಂ ಕೂಡಲೇ ಬಿಡುಗಡೆ ಮಾಡಲಿ ಎಂದು ಸಿಎಂಗೆ ಸವಾಲು ಹಾಕಿದರು.
ಸಾರ್ವಜನಿಕ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡಬಾರದು ಎಂದು ಕುಂದಾಪುರ ಪೊಲೀಸರು ಚಕ್ರವರ್ತಿ ಸೂಲಿಬೆಲೆ ಅವರಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ನೀಡಿದ ಪೊಲೀಸ್ ಅಧಿಕಾರಿಗೆ ಬುದ್ಧಿ ಇಲ್ಲವೇ? ಇದು ಅಸಹಿಷ್ಣುತೆಯ ಪರಮಾವಧಿ ಎಂದರು.
ಲಾಡ್ ಅವರದ್ದು ಬಾಲಿಶ ಮಾತು:
ಸಚಿವ ಸಂತೋಷ ಲಾಡ್ ಮಾತೆತ್ತಿದರೆ ಬರೀ ಒಬಾಮಾ, ಟ್ರಂಪ್ ಬಗ್ಗೆ ಮಾತನಾಡುತ್ತಾರೆ. ಆಧಾರವಿಲ್ಲದೆ ಮಾತನಾಡುತ್ತಾರೆ. ಅವರ ಇಲಾಖೆ ಹಗರಣ ಹೊರ ಬಂದ ಮೇಲೆ, ಮಂತ್ರಿ ಪದವಿ ಉಳಿಸಿಕೊಳ್ಳಲು ಮೋದಿ ಅವರಿಗೆ ಬೈಯುತ್ತಿದ್ದಾರೆ. ಬಾಲಿಶವಾಗಿ ಮಾತನಾಡುತ್ತಿದ್ದು, ಅವರ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದರು.
2019ರ ಅಧಿಸೂಚನೆಯಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ, ಚಾಲಕ ಕಂ ನಿರ್ವಾಹಕ ಸೇರಿ 2814 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಆದರೆ, ಒಂದು ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿರುವುದು ತಪ್ಪು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕರೆ ಮಾಡಿ ಸಮಸ್ಯೆ ಸರಿಪಡಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರ ಕರ್ಮಕಾಂಡ ಬಯಲು: ಶೆಟ್ಟರ್ ಟೀಕೆಹೂವಿನಹಡಗಲಿ: ವಸತಿ ನಿಗಮದಲ್ಲಿನ ಭ್ರಷ್ಟಾಚಾರದ ಕರ್ಮಕಾಂಡವನ್ನು ಕೈ ಶಾಸಕರೇ ಬಯಲು ಮಾಡಿರುವ ಕಾರಣ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಒತ್ತಾಯಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ ಅವರು ಸಮಾಜವಾದಿ ಹಿನ್ನೆಲೆಯಲ್ಲಿ ಬೆಳೆದಿದ್ದಾರೆ.
ಶಾಸಕರ ಕೆಲಸ ಆಗುತ್ತಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ತಹಸೀಲ್ದಾರ್ ಕಚೇರಿಯಲ್ಲಿ ತಾಂಡವವಾಡುತ್ತಿರುವ ಲಂಚಾವತಾರವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೇ ಅನಾವರಣಗೊಳಿಸಿ, ರೇಟ್ ಬೋರ್ಡ್ ಹಾಕಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ.
ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎನ್ನುವುದಕ್ಕೆ ಇನ್ನೆಂಥ ಪುರಾವೆ ಬೇಕು? ಎಂದು ಅವರು ಪ್ರಶ್ನಿಸಿದರು. ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ಬಿ.ಆರ್.ಪಾಟೀಲ್, ಬಸವರಾಜ ರಾಯರೆಡ್ಡಿ ಅವರ ಹೇಳಿಕೆಗಳೇ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಸಾಬೀತು ಮಾಡುತ್ತಿವೆ ಎಂದು ಅವರು ದೂರಿದರು.