ಹಾವೇರಿ:ರೈತರ ವಿರೋಧದ ನಡುವೆಯೂ ಬಿಡದಿ ಟೌನ್ಶಿಪ್ ಯೋಜನೆ ಮುಂದುವರಿಸಲು ಸರ್ಕಾರದ ಆಂತರಿಕ ಕಾರ್ಯಸೂಚಿ ಕಾರಣ. ಮುಖ್ಯಮಂತ್ರಿಗೆ ಈ ಯೋಜನೆ ಮೇಲೆ ಏಕಿಷ್ಟು ಪ್ರೀತಿ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದರು.
ಕನಸಿನೊಳಗೆ ಮತ್ತೊಂದು ಕನಸಿದೆಯೇ?:ಬಿಡದಿ ಟೌನ್ಶಿಪ್ ವಿಚಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲೇ ತಾವು ಮುನ್ನಡೆಯುತ್ತಿರುವುದಾಗಿ ಮುಖ್ಯಮಂತ್ರಿ ಹೇಳಿಕೊಳ್ಳುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬೊಮ್ಮಾಯಿ, ಅಣ್ಣಾಜಿ, ಅಪ್ಪಾಜಿ ದಾರಿಯಲ್ಲೇ ಹೋಗುತ್ತಿದ್ದೇವೆ ಎನ್ನುವ ಇವರಿಗೆ ಈ ಯೋಜನೆಯಲ್ಲಿ ಹಿತಾಸಕ್ತಿ ಏನಿದೆ? ಅವರ ಕನಸನ್ನು ನನಸು ಮಾಡಲು ಹೊರಟಿರುವ ಇವರ ಉದ್ದೇಶವೇನು? ಈ ಕನಸಿನ ಹಿಂದೆ ಮತ್ತೊಂದು ಗುಪ್ತ ಕನಸಿದೆಯೇ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.
ಸರ್ಕಾರಿ ಭೂಮಿಯಲ್ಲಿ ಟೌನ್ಶಿಪ್ ಮಾಡಿ:ಬೆಂಗಳೂರಿನ ಸುತ್ತಮುತ್ತ ಸ್ಯಾಟಲೈಟ್ ಟೌನ್ಶಿಪ್ಗಳನ್ನು ಅಭಿವೃದ್ಧಿಪಡಿಸುವ ಚರ್ಚೆ ಕಳೆದ 30 ವರ್ಷಗಳಿಂದ ನಡೆಯುತ್ತಿದೆ. ರೈತರ ಫಲವತ್ತಾದ ಜಮೀನನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವ ಬದಲು, ಸರ್ಕಾರದ ಬಳಿ ಲಭ್ಯವಿರುವ ಜಮೀನಿನಲ್ಲೇ ಟೌನ್ಶಿಪ್ ನಿರ್ಮಿಸಲು ಸರ್ಕಾರ ಮುಂದಾಗಬೇಕು ಎಂದು ಸಲಹೆ ನೀಡಿದರು.ಹಾವೇರಿ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಮೊಟೇಬೆನ್ನೂರು ಬಳಿ ಜಮೀನು ಗುರುತಿಸಲಾಗಿತ್ತು. ಆದರೆ ಅಲ್ಲಿನ ರೈತರು ಬಂದು, ಇದು ನಮ್ಮ ಫಲವತ್ತಾದ ಜಮೀನು, ನಾವು ಕೊಡುವುದಿಲ್ಲ ಎಂದಾಗ ನಾವು ತಕ್ಷಣ ಆ ಯೋಜನೆಯನ್ನು ಅಲ್ಲಿಂದ ಕೈಬಿಟ್ಟೆವು. ಅಂತಹ ಪ್ರಾಮಾಣಿಕತೆಯನ್ನು ಈಗಿನ ಸರ್ಕಾರವೂ ಪ್ರದರ್ಶಿಸಬೇಕು ಎಂದರು.