ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ನಡೆಯಿತು. ಕಾಪು ಶಾಸಕ ಸುರೇಶ್ ಶೆಟ್ಟಿ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಸುಂದರ ಸಮಾಜ ನಿರ್ಮಾಣ ಮಾಡುವಲ್ಲಿ ವಿಶ್ವಕರ್ಮರ ಪಾತ್ರ ಮಹತ್ತರವಾದುದು ಎಂದು ಕಾಪು ಶಾಸಕ ಸುರೇಶ್ ಶೆಟ್ಟಿ ಹೇಳಿದರು.ಅವರು ಮಂಗಳವಾರ ಇಲ್ಲಿನ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಆಯೋಜಿಸಲಾದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪಂಚ ವೃತ್ತಿಗಳಾದ ಮರ, ಕಬ್ಬಿಣ, ಚಿನ್ನ ಬೆಳ್ಳಿ, ಶಿಲೆ, ಕಂಚು ಹಿತ್ತಾಳೆ ಕೆಲಸ ಮಾಡುವ ವಿಶ್ವಕರ್ಮ ಸಮುದಾಯದವರನ್ನು ಸಮಾಜ ಸದಾ ನೆನೆಪಿನಲ್ಲಿಟ್ಟುಕೊಳ್ಳುತ್ತದೆ. ಕೇಂದ್ರ ಸರ್ಕಾರವು ವಿಶ್ವಕರ್ಮರ ಹೆಸರಿನಲ್ಲಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದು ಕೋಟ್ಯಾಂತರ ಜನರ ಜೀವನಕ್ಕೆ ದಾರಿದೀಪವಾಗಿದೆ. ಈ ಬಗ್ಗೆ ಹೆಚ್ಚು ಪ್ರಚಾರ ಮೂಡಿಸಿ ಸಮುದಾಯದ ಜನರನ್ನು ಹೆಚ್ಚು ಫಲಾನುಭವಿಗಳಾನ್ನಿಸಬೇಕು ಎಂದರು.ಮಾಹೆಯ ಡಾ.ಪ್ರತಿಮಾ ಜಯಪ್ರಕಾಶ್ ಉಪನ್ಯಾಸ ನೀಡಿ, ವಿಶ್ವಕರ್ಮ ಸಮುದಾಯದ ಜನರು ಕುಲಕಸುಬುಗಳ ಮೂಲಕ ಸಮಾಜಕ್ಕೆ ಬೆಳಕಾದವರು. ವಿಶ್ವಕರ್ಮ ಎಂಬುವುದು ವ್ಯಕ್ತಿಯಲ್ಲ. ಒಂದು ಅದ್ವಿತೀಯ ಶಕ್ತಿ ಎಂದರು.
ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಇತ್ತೀಚಿನ ದಿನಗಳಲ್ಲಿ ಅನೇಕ ಸವಾಲುಗಳನ್ನು ವಿಶ್ವಕರ್ಮ ಸಮಾಜದವರು ಎದುರಿಸುತ್ತಿದ್ದಾರೆ. ವಿಶ್ವಕರ್ಮ ಸಮುದಾಯದ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು. ಮುಖ್ಯವಾಗಿ ಹೆಣ್ಣುಮಕ್ಕಳು ಸಹ ಉನ್ನತ ಶಿಕ್ಷಣ ಪಡೆಯಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವೃತ್ತಿ ಸಾಧನೆಗೈದ ವಿಶ್ವಕರ್ಮ ಸಮಾಜದ ಐವರು ಹಿರಿಯರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ, ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಕೆ.ವೆಂಕಟೇಶ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಅನಂತಯ್ಯ ಆಚಾರ್ಯ ನಿರೂಪಿಸಿದರು. ರತ್ನಾಕರ ಆಚಾರ್ಯ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.