
ಶಿರಹಟ್ಟಿ: ಸರ್ಕಾರ ಹೊಸದಾಗಿ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆ ಅಡಿಯಲ್ಲಿ ರಕ್ತದ ಒತ್ತಡ, ಶುಗರ್, ಕಿಡ್ನಿ, ಹೃದಯಾಘಾತ, ಮಹಿಳೆಯರಲ್ಲಿ ಕಾಣಿಸುವ ಸ್ತನ ಕ್ಯಾನ್ಸರ್ ಸೇರಿದಂತೆ ವಿವಿಧ ಬಗೆಯ ಕಾಯಿಲೆ ತಪಾಸಣೆ ಮಾಡಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಮಹತ್ವದ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಇದರಲ್ಲಿ ಯಾವುದೇ ಪಕ್ಷಪಾತ, ಭೇದಭಾವವಿಲ್ಲ. ಸರ್ಕಾರದ ಮಾನ್ಯತೆಯಂತೆ ರಾಜ್ಯದ ಹಳೆ ತಾಲೂಕುಗಳಲ್ಲಿ ಎಲ್ಲಿ ೧೦೦ ಹಾಸಿಗೆಯ ಆಸ್ಪತ್ರೆಗಳಿಲ್ಲವೋ ಅಲ್ಲಿ ಮೊದಲ ಆದ್ಯತೆ ನೀಡಿ ಒಟ್ಟು ೭,೧೦೦ ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ೩೦ ರಿಂದ ೪೦ ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಇದರಲ್ಲಿ ಸುಸಜ್ಜಿತ ಕಟ್ಟಡ, ಸಲಕರಣೆಗಳು, ಸಿಬ್ಬಂದಿ ವಸತಿಗೃಹಗಳು ಸೇರಿ ಇನ್ನೂ ಅನೇಕ ಸೌಕರ್ಯಗಳು ಲಭಿಸಲಿವೆ ಎಂದರು. ರಾಜ್ಯದಲ್ಲಿ ೯ ಹೊಸ ತಾಲೂಕು ಆಸ್ಪತ್ರೆಗಳನ್ನು ನಿರ್ಮಿಸಲು ಈಗಾಗಲೇ ಅನುಮೋದನೆಯನ್ನು ಪಡೆಯಲಾಗಿದೆ. ₹೮೮೦ ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ನಿಜವಾಗಲು ಬಡ ಜನರ ಬಗ್ಗೆ ಕಾಳಜಿ ಇದ್ದಾಗ ಮಾತ್ರ ಇಂತಹ ಜನಪರ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯ. ಅಂತಹ ಮಹತ್ತರ ಕಾರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದರು.ಜಿಲ್ಲಾ ಆಸ್ಪತ್ರೆಯಲ್ಲಿ ದೊರೆಯುವ ಎಲ್ಲ ಚಿಕಿತ್ಸಾ ಸೌಲಭ್ಯಗಳು ಇನ್ನು ಮುಂದೆ ತಾಲೂಕು ಆಸ್ಪತ್ರೆಯಲ್ಲಿಯೂ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು. ೨೪ ತಾಸು ಸೇವೆ ದೊರೆಯಲು ೨, ೩ ತಿಂಗಳಲ್ಲಿ ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು ಸೇರಿದಂತೆ ವಿವಿಧ ಕಾಯಿಲೆಯ ತಜ್ಞ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಾನೂನು ಹಾಗೂ ಪ್ರವಾಸೋದ್ಯಮ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕಳೆದ ಎರಡು ವರ್ಷಗಳಿಂದ ಜನಪರ ಆಡಳಿತ ನೀಡುತ್ತಿದೆ. ಚುನಾವಣೆ ಪೂರ್ವದಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುತ್ತಿದೆ. ವಿಶೇಷವಾಗಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಮಹಿಳಾ ಸಬಲೀಕರಣವಾಗಿದೆ ಎಂದರು.ಗೊಂದಲ ಸೃಷ್ಟಿ ಮಾಡುವ ಕೆಲಸ ನಮ್ಮ ಸರ್ಕಾರದಲ್ಲಿ ಇಲ್ಲ. ರಾಷ್ಟ್ರದಲ್ಲಿಯೇ ಮೊದಲಬಾರಿಗೆ ಬಡತನ ಕಿತ್ತೊಗೆದ ಸರ್ಕಾರ ನಮ್ಮದು. ಶೇ. ೯೯ರಷ್ಟು ಅರ್ಹ ಬಡವರಿಗೆ ಕಾಂಗ್ರೆಸ್ ಸರ್ಕಾರದ ಯೋಜನೆಗಳು ತಲುಪಿವೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನಮ್ಮ ಸರ್ಕಾರದ ಯೋಜನೆ ತಲುಪಿಸುವ ಕಾರ್ಯ ನಡೆದಿದೆ ಎಂದು ತಿಳಿಸಿದರು.