ಯುವ ಕರ್ನಾಟಕದಿಂದ ಮಾತ್ರ ನವಭಾರತ ನಿರ್ಮಾಣ: ಮಾನೆ

KannadaprabhaNewsNetwork |  
Published : Sep 20, 2026, 03:45 AM IST
ಅಕ್ಕಿಆಲೂರಿನ ಸಿ.ಜಿ.ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವಜನರ ಭವಿಷ್ಯಕ್ಕಾಗಿ ಉದ್ಯೋಗ ಅರಿವು ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಮಾತನಾಡಿದರು. | Kannada Prabha

ಸಾರಾಂಶ

ಯುವ ಕರ್ನಾಟಕದಿಂದ ಮಾತ್ರ ನವಭಾರತ ನಿರ್ಮಾಣ ಸಾಧ್ಯ ಎನ್ನುವುದನ್ನು ಪ್ರಜಾಸೇವಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಲವಾಗಿ ಪ್ರತಿಪಾದಿಸುವ ಮೂಲಕ ಯುವಜನರಿಗೆ ಸಾಕಷ್ಟು ಅವಕಾಶಗಳನ್ನು ಒದಗಿಸುವಲ್ಲಿ ದೃಢಹೆಜ್ಜೆ ಇಟ್ಟಿದ್ದಾರೆ ಎಂದು ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಹೇಳಿದರು.

ಹಾನಗಲ್ಲ: ಯುವ ಕರ್ನಾಟಕದಿಂದ ಮಾತ್ರ ನವಭಾರತ ನಿರ್ಮಾಣ ಸಾಧ್ಯ ಎನ್ನುವುದನ್ನು ಪ್ರಜಾಸೇವಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಲವಾಗಿ ಪ್ರತಿಪಾದಿಸುವ ಮೂಲಕ ಯುವಜನರಿಗೆ ಸಾಕಷ್ಟು ಅವಕಾಶಗಳನ್ನು ಒದಗಿಸುವಲ್ಲಿ ದೃಢಹೆಜ್ಜೆ ಇಟ್ಟಿದ್ದಾರೆ ಎಂದು ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಹೇಳಿದರು.

ತಾಲೂಕಿನ ಅಕ್ಕಿಆಲೂರಿನ ಸಿ.ಜಿ. ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್, ಐಕ್ಯೂಎಸಿ ಹಾಗೂ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಆಯೋಜಿಸಿದ್ದ ಯುವಜನರ ಭವಿಷ್ಯಕ್ಕಾಗಿ ಉದ್ಯೋಗ ಅರಿವು ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದಾರೆ. ೭೨ ಸಾವಿರಕ್ಕೂ ಅಧಿಕ ಸರಕಾರಿ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಂಡಿದ್ದಾರೆ. ಖಾಸಗಿ ಕ್ಷೇತ್ರಗಳಲ್ಲಿ ಸಹ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಸೇತು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಪ್ರತಿ ಗ್ರಾಪಂಗೆ ಒಂದರಂತೆ ಇಡೀ ರಾಜ್ಯದಲ್ಲಿ ಒಟ್ಟು ೧೦ ಸಾವಿರ ಭಾರತ್ ಜೋಡೋ ಯುವ ಸಂಘಗಳ ಮೂಲಕ ಇತಿಹಾಸ, ಪರಂಪರೆಯ ಸಂರಕ್ಷಣೆಗೆ ಗಮನ ನೀಡಿದ್ದಾರೆ ಎಂದು ಹೇಳಿದ ಅವರು ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು ಕೇವಲ ಪದವಿ ಶಿಕ್ಷಣಕ್ಕೆ ಮಾತ್ರ ಸೀಮಿತರಾಗದೇ ಅಗತ್ಯ ಕೌಶಲ್ಯ ಬೆಳೆಸಿಕೊಳ್ಳಬೇಕಿದೆ. ಪದವಿ ಪೂರ್ಣಗೊಂಡ ನಂತರ ಉದ್ಯೋಗಕ್ಕೆ ಕಾಯದೇ ಉದ್ಯೋಗ ಕ್ಷೇತ್ರದ ಅಗತ್ಯತೆಗಳನ್ನು ಅರಿಯುವ ಪ್ರಯತ್ನ ಮಾಡಬೇಕಿದೆ. ಸರ್ಕಾರಿ ನೌಕರಿಗೆ ಮಹತ್ವ ನೀಡದೇ ಖಾಸಗಿ ಕ್ಷೇತ್ರಗಳಲ್ಲಿನ ಅವಕಾಶಗಳನ್ನು ಸಹ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ವೀರೇಶ ಕುಮ್ಮೂರ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಜನತೆ ಉದ್ಯೋಗಾವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಅಗತ್ಯ ಮಾಹಿತಿ, ಮಾರ್ಗದರ್ಶನ ಪಡೆಯಬೇಕಿದೆ. ಯುವಜನತೆ ಉದ್ಯೋಗಕ್ಕೆ ಅಲೆದಾಡುವ ಪರಿಸ್ಥಿತಿ ಕಡಿಮೆಯಾಗಬೇಕು. ಈ ನಿಟ್ಟಿನಲ್ಲಿ ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ಧಿ, ವೃತ್ತಿಪರ ತರಬೇತಿ ಹಾಗೂ ಉದ್ಯೋಗದ ಮಾರುಕಟ್ಟೆಯ ಅಗತ್ಯತೆಗಳನ್ನು ತಿಳಿಯುವ ಪ್ರಯತ್ನ ಮಾಡಬೇಕಿದೆ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಮರಗಡಿ, ತಾಲೂಕಾಧ್ಯಕ್ಷ ವೀರಪ್ಪ ಬೈಲವಾಳ, ಕೆಎಂಎಫ್ ನಿರ್ದೇಶಕ ಚಂದ್ರಪ್ಪ ಜಾಲಗಾರ, ತಾಪಂ ಮಾಜಿ ಅಧ್ಯಕ್ಷ ಎಲ್.ಕೆ. ಶೇಷಗಿರಿ, ಮಾಜಿ ಸದಸ್ಯ ಮೆಹಬೂಬಅಲಿ ಬ್ಯಾಡಗಿ, ಜಿಲ್ಲಾ ಉದ್ಯೋಗ ಅಧಿಕಾರಿ ಚೈತನ್ಯಕುಮಾರ ಮೋಹಿತೆ, ಮುಖಂಡರಾದ ಸತ್ತಾರಸಾಬ ಅರಳೇಶ್ವರ, ಗೀತಾ ಪೂಜಾರ, ಖ್ವಾಜಾಮೊಹಿದ್ದೀನ್ ಅಣ್ಣಿಗೇರಿ, ಫಕ್ಕೀರಗೌಡ ಪಾಟೀಲ, ಇಂದೂಧರ ಸಾಲಿಮಠ, ಗುತ್ತೆಪ್ಪ ಸೈದಣ್ಣನವರ, ಎ.ಬಿ. ಶೇಖಬಾಯಿ, ಅಲ್ತಾಹಿರ್ ಕಛವಿ, ಅಜ್ಜನಗೌಡ ಪಾಟೀಲ, ಉಡುಚಪ್ಪ ಕರಬಣ್ಣನವರ, ಉಪನ್ಯಾಸಕ ಪ್ರವೀಣ ಎಸ್. ಇದ್ದರು.

ಯುವ ಸಮೂಹದ ಭವಿಷ್ಯಕ್ಕೆ ಉತ್ತಮ ಅವಕಾಶಗಳನ್ನು ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಪ್ರತಿಯೊಬ್ಬ ಯುವಕ, ಯುವತಿಯರಲ್ಲಿಯೂ ಸಹ ಅಪಾರ ಪ್ರತಿಭೆ, ಸಾಮರ್ಥ್ಯ ಇರಲಿದೆ. ಅದಕ್ಕೆ ಸೂಕ್ತ ಮಾರ್ಗದರ್ಶನ ಸಿಕ್ಕರೆ ಯಶಸ್ಸಿನ ಹಾದಿ ಸುಗಮವಾಗಲಿದೆ. ಈ ನಿಟ್ಟಿನಲ್ಲಿ ಹಾನಗಲ್‌ನಲ್ಲಿ ಪರಿವರ್ತನ ಕಲಿಕಾ ಕೇಂದ್ರ ಅಗತ್ಯ ತರಬೇತಿ, ಮಾರ್ಗದರ್ಶನ ನೀಡುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಡುಬಿದಿರೆ ಆಳ್ವಾಸ್ ಮೆಡಿಕಲ್ ಕಾಲೇಜು ನಾಳೆ ಉದ್ಘಾಟನೆ
ಡೋಂಗಿ ಪರಿಸರವಾದಿ ಹೇಳಿಕೆಗೆ ಮುತ್ತಣ ಖಂಡನೆ