ರೋಣ: ದೇಹ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಚಟವನ್ನು ವ್ಯಸನ ಎನ್ನಲಾಗುತ್ತದೆ. ಇಂತಹ ವ್ಯಸನಗಳಿಂದ ದೂರವಿರುವ ಮೂಲಕ ಸಮಾಜವನ್ನು ವ್ಯಸನ ಮುಕ್ತವಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.ಪಟ್ಟಣದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ಡಾ. ಮಹಾಂತ ಶಿವಯೋಗಿಯವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಹಾಯಕ ಆರೋಗ್ಯ ಅಧಿಕಾರಿ ಕೆ.ಎ. ಹಾದಿಮನಿ ಮಾತನಾಡಿ, ವ್ಯಸನ ಮುಕ್ತ ಸಮಾಜವು ಕೇವಲ ಕನಸಲ್ಲ, ಅದನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಸಾಧಿಸಬಹುದು. ಇದಕ್ಕಾಗಿ ಯುವಕರು ಮುಂಚೂಣಿಯಲ್ಲಿ ನಿಲ್ಲಬೇಕು ಎಂದರು.
ಈ ವೇಳೆ ತಾಲೂಕು ಆರೋಗ್ಯ ಇಲಾಖೆಯ ಅಧಿಕಾರಿ ಡಾ. ಬಸವರಾಜ ಭಜಂತ್ರಿ, ಸಹಾಯಕ ಅರೋಗ್ಯ ಅಧಿಕಾರಿ ಕೆ.ಎ. ಹಾದಿಮನಿ, ಉಪ ತಹಸೀಲ್ದಾರ್ ಗಣೇಶ ಕೊಪ್ಪದ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ ಆಲೂರ ಸೇರಿದಂತೆ ಹಲವು ಗಣ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.