ನಾಳೆ ಮಸಣ ಕಾರ್ಮಿಕರಿಂದ ಹೂತುಕೊಂಡು ಪ್ರತಿಭಟನೆ

KannadaprabhaNewsNetwork | Published : Feb 13, 2024 12:51 AM

ಸಾರಾಂಶ

ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದ ವತಿಯಿಂದ ಕಳೆದ 4 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ರಾಯಚೂರು

ಇದೇ ರಾಜ್ಯ ಬಜೆಟ್ ನಲ್ಲಿ ಸ್ಮಶಾನ ಕಾರ್ಮಿಕರನ್ನು ಸ್ಥಳೀಯ ಸಂಸ್ಥೆಗಳ ನೌಕರರೆಂದು ಪರಿಗಣಿಸುವುದು. ಸೇರಿ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಫೆ.14 ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸ್ಮಶಾನ ಭೂಮಿಯಲ್ಲಿ ಕುತ್ತಿಗೆವರೆಗೆ ಕುಣಿ (ಗುಂಡಿ) ತೋಡಿ, ಹೂತುಕೊಂಡು ಪ್ರತಿಭಟಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಜಿಲ್ಲಾ ಘಟಕದ ಸಂಚಾಲಕ ಕೆ.ಜಿ.ವೀರೇಶ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದ ವತಿಯಿಂದ ಕಳೆದ 4 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಲಾಗಿದೆ. ಪ್ರತಿ ಸ್ಮಶಾನದಲ್ಲಿ ಒಬ್ಬರಂತೆ ಕಾರ್ಮಿಕರನ್ನು ನೌಕರರೆಂದು ನೇಮಕ ಮಾಡಿಕೊಳ್ಳಬೇಕು. ಕುಣಿ ಅಗೆಯಲು ಪರಿಕರಗಳನ್ನು ನೀಡಬೇಕು ಹಾಗೂ ನರೇಗಾ ಯೋಜನೆಯಡಿ ಪರಿಗಣಿಸಿ ಕೂಲಿ ನಿಗದಿ ಮಾಡಬೇಕು ಎಂದು ಹಕ್ಕೊತ್ತಾಯ ಸಲ್ಲಿಸಲಾಗುವುದು ಎಂದು ಹೇಳಿದರು. ಕಳೆದ ಡಿ.21 ರಿಂದ 23ರ ವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿದ್ದ ಸಮಾಜ ಕಲ್ಯಾಣ ಆಯುಕ್ತರು ಫೆ.2 ರಂದು ನಗರಾಭಿವೃದ್ಧಿ ಇಲಾಖೆಯ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ, ಹೆಣ್ಣು ಮಕ್ಕಳ ವಿವಾಹಕ್ಕೆ ಪ್ರೋತ್ಸಾಹ ಧನ,ಪಿಂಚಣಿ, ನಿವೇಶನ, ಮನೆ ನಿರ್ಮಾಣದ ಭರವಸೆ ನೀಡಿದ್ದರು.

ಅದರಂತೆ ಫೆ.16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಲಿರುವ ರಾಜ್ಯ ಬಜೆಟ್ ನಲ್ಲಿ ಬೇಡಿಕೆಗಳ ಈಡೇರಿಕಗೆ ಖಾತ್ರಿ ಪಡಿಸಬೇಕು ಎಂದು ಆಗ್ರಹಿಸಿ, ಸ್ಥಳೀಯ ಜಲಾಲ್‌ನಗರ ಸಾರ್ವಜನಿಕ ಸ್ಮಶಾನ ಭೂಮಿಯಲ್ಲಿ ಹೋರಾಟವನ್ನು ನಡೆಸಲಾಗುತ್ತಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಚಂದಪ್ಪ, ನರಸಿಂಹ,ಕರಿಯಪ್ಪ, ಜಂಬಯ್ಯ ಇದ್ದರು.

Share this article