ಶಿರಹಟ್ಟಿ: ಬಸ್ ಪ್ರಯಾಣ ದರ ಏರಿಕೆಯನ್ನು ಕೂಡಲೇ ತಡೆಹಿಡಿಯಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪಟ್ಟಣದಲ್ಲಿ ಸೋಮವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಹೊಸ ವರ್ಷದ ಆರಂಭಕ್ಕೇ ರಾಜ್ಯದ ಜನತೆಗೆ ಶಾಕ್ ನೀಡಿದೆ. ಹೊಸ ವರ್ಷದ ಮೊದಲ ದಿನವೇ ಶೇ. ೧೫ರಷ್ಟು ಬಸ್ ದರ ಏರಿಕೆ ಮಾಡಿದೆ. ಬಡ ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಜನತೆಗೆ ಹೊರೆಯನ್ನು ಹೇರಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅರುಣ್ಕುಮಾರ್ ಬಾರ್ಕಿ ಮಾತನಾಡಿ, ಸರ್ಕಾರಿ ಬಸ್ಗಳನ್ನೇ ಅವಲಂಬಿಸಿ ಸಾವಿರಾರು ಜನ ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಓಡಾಡುತ್ತಾರೆ. ಹೀಗಿರುವಾಗ ಸರ್ಕಾರ ಶೇ. ೧೫ರಷ್ಟು ಸಾರಿಗೆ ಪ್ರಯಾಣದರ ಹೆಚ್ಚಳ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ದೂರಿದರು.ಶಕ್ತಿ ಯೋಜನೆ ಜಾರಿಯಾದಾಗಿನಿಂದ ದಿನನಿತ್ಯ ಬಸ್ಗಳು ತುಂಬಿ ತುಳುಕುತ್ತಿವೆ. ಪುರುಷರು ನಿಂತೇ ಪ್ರಯಾಣ ಮಾಡುವಂತಾಗಿದೆ. ಎಷ್ಟೇ ತೊಂದರೆಯಾದರೂ ಬಡವರು ರಾಜ್ಯ ಸಾರಿಗೆ ಸಂಸ್ಥೆ ಬಸ್ಗಳಲ್ಲೇ ಓಡಾಡುತ್ತಾರೆ. ಆದರೆ ಏಕಾಏಕಿ ಬಸ್ ದರ ಹೆಚ್ಚಳದಿಂದ ಬಡವರಿಗೆ ಶಾಕ್ ನೀಡಿದಂತಾಗಿದೆ. ಸರ್ಕಾರಕ್ಕೆ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ತಾಲೂಕಿನ ಗ್ರಾಮೀಣ ಪ್ರದೇಶಗಳಿಂದ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ತೆರಳುತ್ತಿದ್ದು, ಸಮಯಕ್ಕೆ ಸರಿಯಾಗಿ ಬಸ್ ಓಡಿಸುವಂತೆ ವರ್ಷದಲ್ಲಿ ನಾಲ್ಕೈದು ಬಾರಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುವಂತಾಗಿದೆ. ಇದರಿಂದ ಅವರ ಓದಿಗೆ ಹಿನ್ನಡೆಯಾಗುತ್ತಿದೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ತಕ್ಷಣ ಪ್ರಯಾಣ ದರ ಏರಿಕೆ ತಡೆಯಿಡಿಯಬೇಕು, ಜತೆಯಲ್ಲಿ ಸಮರ್ಪಕ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ನಗರ ಕಾರ್ಯದರ್ಶಿ ಪರಶುರಾಮ ಕಳ್ಳಿಮನಿ, ಅಭಿಷೇಕ ಪುರಶೆಟ್ಟರ್, ಕಿರಣ್ ಮಜ್ಜಿಗುಡ್ಡ, ಪ್ರಜ್ವಲ್ ಬೇಂದ್ರೆ, ರೇಣುಕಾ ಪಾಟೀಲ್, ರಂಜಿತಾ ಚವ್ಹಾಣ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.
ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಲಕ್ಷ್ಮೇಶ್ವರ ಬಸ್ ನಿಲ್ದಾಣದ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಬಸ್ ತಡೆದು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿ ಮುಖಂಡರಾದ ಪ್ರಕಾಶ ಕುಂಬಾರ, ವಿನಯ ಸಪಡ್ಲ, ಅಭಿಷೇಕ ಉಮಚಗಿ, ಯಶ್ವಂತ ಶಿರಹಟ್ಟಿ, ಮನೋಜ ತಂಡಗೇರ, ವಿನಾಯಕ ಕುಂಬಾರ, ಅಭಿಷೇಕ ಈಶನಗೌಡರ, ವಿನಾಯಕ ಹುಂಬಿ, ಅರವಿಂದ ಇಚ್ಚಂಗಿ, ಯುವರಾಜ ದುರ್ಗದ, ಈರಣ್ಣ ಕುಂಬಾರ, ಈರಣ್ಣ ಗುಡಗೇರಿ ಇದ್ದರು.