ಆವರ್ತನಿಧಿಯಿಂದ ಮೆಕ್ಕೆಜೋಳ ಖರೀದಿಸಿ: ಬಸವರಾಜ ಬೊಮ್ಮಾಯಿ ಆಗ್ರಹ

KannadaprabhaNewsNetwork |  
Published : Nov 23, 2025, 02:45 AM IST
ಪೊಟೋ-ಸಂಸದ ಬಸವರಾಜ ಬೊಮ್ಮಾಯಿ ಲಕ್ಷ್ಮೇಶ್ವರ  ಪಟ್ಟಣದಲ್ಲಿ ಗೋವಿನ ಜೋಳದ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ರೈತರು ನಡೆಸುತ್ತಿರುವ ಧರಣ ಸ್ಥಳಕ್ಕೆ ಗಮಿಸಿ ಮಾತನಾಡಿದರು.  | Kannada Prabha

ಸಾರಾಂಶ

ಬೆಂಬಲ ಬೆಲೆ ಯೋಜನೆ ಪರಿಣಾಮ ರೈತರಿಗೂ ಅನುಕೂಲವಾಗುತ್ತದೆ.‌ ಖರೀದಿ ಮಾಡಿದ ಸರ್ಕಾರಕ್ಕೂ ನಷ್ಟವಾಗುವುದಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಘರ್ಷ ಮಾಡಿದರೆ ಇಬ್ಬರ ನಡುವೆ ಕೂಸು ಬಡವಾದಂತೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಲಕ್ಷ್ಮೇಶ್ವರ: ರಾಜ್ಯ ಸರ್ಕಾರ ಕೇವಲ 10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸುವ ಭರವಸೆ ನೀಡಿ ಕೇಂದ್ರ ಸರ್ಕಾರದ ಕಡೆಗೆ ಕೈ ತೋರಿಸುವ ಬದಲು ರಾಜ್ಯ ಸರ್ಕಾರದ ಆವರ್ತ ನಿಧಿಯಿಂದ ಖರೀದಿಗೆ ಅವಕಾಶ ಇದೆ‌. ಸುಮಾರು ₹300 ಕೋಟಿ ಖರ್ಚು ಮಾಡಿ ಮೆಕ್ಕೆಜೋಳ ಖರೀದಿಸಿ ರೈತರ ರಕ್ಷಣೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಶನಿವಾರ ಪಟ್ಟಣದ ಶಿಗ್ಲಿ ಕ್ರಾಸ್‌ನಲ್ಲಿ ಸಮಗ್ರ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ಬೆಂಬಲ ಬೆಲೆ ಯೋಜನೆ ಪರಿಣಾಮ ರೈತರಿಗೂ ಅನುಕೂಲವಾಗುತ್ತದೆ.‌ ಖರೀದಿ ಮಾಡಿದ ಸರ್ಕಾರಕ್ಕೂ ನಷ್ಟವಾಗುವುದಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಘರ್ಷ ಮಾಡಿದರೆ ಇಬ್ಬರ ನಡುವೆ ಕೂಸು ಬಡವಾದಂತೆ. ರೈತರು ಯಾವುದೇ ಪಕ್ಷಕ್ಕೆ ಸೇರಿಲ್ಲ. ಎಲ್ಲ ಪಕ್ಷಗಳು ರೈತರಿಗೆ ಸೇರಿವೆ ಎಂದರು.

ರಾಜ್ಯದ ರೈತರಿಗೆ ನ್ಯಾಯ: ಕಳೆದ ವರ್ಷ ರಾಜ್ಯದಲ್ಲಿ 15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಟನ್ ಮೆಕ್ಕೆಜೋಳ ಬೆಳೆದಿತ್ತು. ಈ ವರ್ಷ 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದರೂ 54 ಲಕ್ಷ ಮೆಟ್ರಿಕ್ ಟನ್ ಬೆಳೆಯಲಾಗಿದೆ. ಈ ವರ್ಷ 2 ಲಕ್ಷ ಮೆಟ್ರಿಕ್ ಟನ್ ನಷ್ಟ ಆಗಿದೆ. ಇಂತಹ ಸಂದರ್ಭದಲ್ಲಿ ರೈತರನ್ನು ಉಳಿಸಲು ಏನು ಮಾಡಬೇಕು ಎಂಬುದನ್ನು ಯೋಚಿಸಬೇಕು. ಲಕ್ಷ್ಮೇಶ್ವರ ರೈತರ ಹೋರಾಟದಿಂದ ಇಡೀ ರಾಜ್ಯದ ರೈತರಿಗೆ ನ್ಯಾಯ ಸಿಗುವಂತಾಗಿದೆ. ರೈತರ ಒಗ್ಗಟ್ಟಿನ ಶಕ್ತಿ ಸರ್ಕಾರದ ಕಣ್ಣು ತೆರೆಸಿದೆ ಎಂದರು.

ಮಾರುಕಟ್ಟೆಗೆ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬರುತ್ತದೆ. ಆಗ ಮತ್ತೂ ಬೆಲೆ ಏರುವುದಿಲ್ಲ. ಹೀಗಾಗಿ ಹೆಚ್ಚಿಗೆ ಖರೀದಿಗೆ ಆದೇಶ ಮಾಡಬೇಕು. ಕೆಎಂಎಫ್‌ನಿಂದ ನೇರ ಖರೀದಿಸಲು ಸೂಚಿಸಬೇಕು‌. ಎಥೆನಾಲ್ ಕಂಪನಿಗಳು ಗೋವಿನಜೋಳ ಖರೀದಿಸುತ್ತಿವೆ. ಅವರು ಏಜೆಂಟರಿಂದ ಖರಿದಿಸುತ್ತಾರೆ. ಅದನ್ನು ತಪ್ಪಿಸಿ ನೇರವಾಗಿ ರೈತರಿಂದ ಖರೀದಿಸುವ ವ್ಯವಸ್ಥೆ ಮಾಡಬೇಕು ಎಂದರು.

ವರದಿ ಜಾರಿ ಮಾಡಲಿ: ಸರ್ಕಾರ ಖರೀದಿಸುವಲ್ಲಿ ಗ್ರೇಡಿಂಗ್ ಸಮಸ್ಯೆ ಇದೆ. ರಾಜ್ಯ ಸರ್ಕಾರ ರೈತರ ಮಾಲನ್ನು ವಾಪಸ್ ಕಳುಹಿಸದೇ ಕೇಂದ್ರ ಸರ್ಕಾರ ₹2400 ದರ ನಿಗದಿ ಮಾಡಿದ್ದು, ಅದಕ್ಕೆ ರಾಜ್ಯ ಸರ್ಕಾರ ₹500 ಸೇರಿಸಿ ಖರೀದಿಸಬೇಕು. ರಾಜ್ಯ ಸರ್ಕಾರ ಆವರ್ತ ನಿಧಿನಿಂದ ಖರೀದಿ ಮಾಡಲಿ. ಅದಕ್ಕೆ ಅವಕಾಶ ಇದೆ‌. ಸುಮಾರು ₹300 ಕೋಟಿ ಖರ್ಚು ಮಾಡಲಿ ಎಂದರು.

ಈ ಸಂದರ್ಭದಲ್ಲಿ ಮಂಜುನಾಥ ಮಾಗಡಿ, ಎಂ.ಎಸ್. ದೊಡ್ಡಗೌಡರ, ನಾಗರಾಜ ಚಿಂಚಲಿ, ಶರಣು ಗೋಡಿ, ಹೊನ್ನಪ್ಪ ವಡ್ಡರ, ಗುರುಪ್ಪ ಮುಳಗುಂದ, ಪೂರ್ಣಾಜಿ ಕರಾಟೆ, ಬಸವರಾಜ ಬೆಂಡಿಗೇರಿ, ನೀಲಪ್ಪ ಶೆರಸೂರಿ, ನಿಂಬಣ್ಣ ಮಡಿವಾಳರ, ರವಿಕಾಂತ ಅಂಗಡಿ, ಶಂಕ್ರಣ್ಣ ಕಾಳೆ, ಸುರೇಶ ಹಟ್ಟಿ, ಟಾಕಪ್ಪ ಸಾತಪೂತೆ, ದಾದಾಪೀರ್ ಮುಚ್ಚಾಲೆ, ಪ್ರಕಾಶ ಕೊಂಚಿಗೇರಿಮಠ, ಪ್ರವೀಣ ಬಾಳಿಕಾಯಿ, ಕಾಶಿನಾಥ ಬೊಮಲೆ, ಬಸವರಾಜ ಜಾಲಗಾರ ಸೇರಿದಂತೆ ಅನೇಕ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ನಿಂದ ಅರ್ಹರಿಗೆ ಅನ್ಯಾಯ ಆಗಬಾರ್ದು: ಸಿಎಂ
ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ