ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಪ್ರಬಂಧ ಸ್ಪರ್ಧೆ, ಭಿತ್ತಿ ಚಿತ್ರ ಸ್ಪರ್ಧೆ, ಮತ್ತು ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಕರ್ನಾಟಕ ಸರ್ಕಾರ ಚುನಾವಣಾ ಆಯೋಗ, ಸ್ವೀಪ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ, ಶಕ್ತಿ ಪದವಿ ಪೂರ್ವ ಕಾಲೇಜು ಶಕ್ತಿನಗರ ಸಂಯುಕ್ತ ಆಶ್ರಯದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ರಾಷ್ಟ್ರೀಯ ಮತದಾನ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು ನಡೆದವು. ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮಾತನಾಡಿ, ಒಂದು ಸಾವಿರ ರು. ಕೊಟ್ಟು ಒಬ್ಬ ಮತದಾರನನ್ನು ಕೊಂಡುಕೊಳ್ಳುತ್ತಾನೆ ಎಂದಾದರೆ ಒಂದು ದಿನಕ್ಕೆ ಆ ಮತದಾರನ ಬೆಲೆ 50 ಪೈಸೆಯಷ್ಟಾಗುತ್ತದೆ. ಹೀಗಿರುವಾಗ ಪ್ರಜಾಪ್ರಭುತ್ವದಲ್ಲಿ ಒಬ್ಬ ಪ್ರಜೆಯ ಬೆಲೆ ಕೇವಲ 50 ಪೈಸೆಗೆ ಅಳತೆ ಮಾಡಿ ತೂಗುವಂತಹ ಪ್ರತಿನಿಧಿಗಳು ಉತ್ತಮವಾದ ಆಡಳಿತ ನೀಡಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಯುವ ಜನತೆ ಜಾಗೃತವಾಗಬೇಕು ಎಂದು ಹೇಳಿದರು.ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬಿ.ಆರ್. ಮಾತನಾಡಿ, ವಿದ್ಯಾರ್ಥಿಗಳು ತಟಸ್ಥ ಮನಸ್ಥಿತಿಯಿಂದ ದೇಶದ ವಿದ್ಯಮಾನಗಳನ್ನು ಗಮನಿಸಬೇಕು. ಯಾವುದೇ ಆಮಿಷಗಳಿಗೆ ಬಲಿಯಾಗದೆ, ಉದ್ವೇಗಗಳಿಗೆ ಒಳಗಾಗದೆ ಮತದಾನದ ಮೂಲಕ ಅರ್ಹ ವ್ಯಕ್ತಿಯನ್ನೇ ಆಯ್ಕೆ ಮಾಡಬೇಕು. ಆಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಡಾ.ಕೆ.ಸಿ. ನಾಯ್ಕ್ ವಹಿಸಿದ್ದರು. ಸ್ವೀಪ್ನ ನೋಡಲ್ ಅಧಿಕಾರಿ ಚಂದ್ರನಾಥ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಡಿ. ಜಯಣ್ಣ, ಸಂಸ್ಥೆಯ ಸಲಹೆಗಾರ ರಮೇಶ್ ಕೆ, ಪ್ರಾಂಶುಪಾಲ ವೆಂಕಟೇಶಮೂರ್ತಿ ಎಚ್., ಪ್ರಾಂಶುಪಾಲೆ ಬಬಿತ ಸೂರಜ್ ಮತ್ತಿತರರು ಇದ್ದರು.ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಪ್ರಬಂಧ ಸ್ಪರ್ಧೆ, ಭಿತ್ತಿ ಚಿತ್ರ ಸ್ಪರ್ಧೆ, ಮತ್ತು ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.