ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ವಿಶ್ವ ವಿಖ್ಯಾತ ನಂದಿ ಗಿರಿಧಾಮದಲ್ಲಿ ಜೂ. 19 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲ್ಲಿದ್ದು ಈ ಸಭೆಯ ಸುಗಮ ಹಾಗೂ ಸಮರ್ಪಕ ನಿರ್ವಹಣೆಗೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೂ. 19 ರಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಮಯೂರ ಸಭಾಂಗಣದಲ್ಲಿ ರಾಜ್ಯ ಸಚಿವ ಸಂಪುಟದ ಸಭೆಯನ್ನು ಕರೆಯಲಾಗಿದೆ ಎಂದರು.
ಅಗತ್ಯ ವ್ಯವಸ್ಥೆ ಕೈಗೊಳ್ಳಿಈ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರುಗಳು, ರಾಜ್ಯ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಂಪುಟ ಸಭೆ ನಡೆಯುವ ಜಾಗದಲ್ಲಿ ಸಭಾ ವೇದಿಕೆಯನ್ನು ಸಿದ್ಧಪಡಿಸಬೇಕು. ಸಭೆಯ ನಂತರ ಪತ್ರಿಕಾಗೋಷ್ಠಿ ಏರ್ಪಡಿಸಲು ಕ್ರಮ ವಹಿಸಬೇಕು, ಸಭೆಯಲ್ಲಿ ಭಾಗವಹಿಸುವ ಗಣ್ಯರಿಗೆ ವ್ಯಾಸ್ತವ್ಯ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಊಟ ತಿಂಡಿ ವ್ಯವಸ್ಥೆಯಾಗಬೇಕು. ನಂದಿ ಗಿರಿಧಾಮದ ಪ್ರವೇಶ ದ್ವಾರದಿಂದ ಮೇಲ್ಬಾಗದ ಸಭಾ ವೇದಿಕೆಯವರೆಗಿನ ರಸ್ತೆಯ ಬದಿಯಲ್ಲಿ ಸ್ವಚ್ಛತೆ ಕೈಗೊಳ್ಳುವಂತೆ ಅವರು ಸೂಚಿಸಿದರು. ಈ ಎಲ್ಲಾ ಕಾರ್ಯಗಳನ್ನು ನಿರ್ವಹಿಸಲು ಒಟ್ಟು 19 ಸಮಿತಿಗಳನ್ನು ರಚಿಸಲಾಗಿದೆ ಎಂದರು.ಕೇಂದ್ರ ಸ್ಥಾನದಲ್ಲಿರಲು ಸೂಚನೆಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿ ತಮ್ಮ ಕಾರ್ಯ ನಿರ್ವಹಣೆಯ ಕೇಂದ್ರ ಸ್ಥಾನದಲ್ಲಿಯೇ ಇದ್ದು ತಮ್ಮ ಕಾರ್ಯ ಕಲಾಪಗಳನ್ನು ತ್ವರಿತವಾಗಿ ನಿರ್ವಹಿಸಬೇಕು, ಕೇಂದ್ರ ಸ್ಥಾನದಲ್ಲಿ ವಾಸ್ತವ್ಯವಿರುವ ಬಗ್ಗೆ ಮನೆ ವಿಳಾಸ, ಜಿ.ಪಿ.ಆರ್.ಎಸ್ ಸಹಿತ ಛಾಯಾಚಿತ್ರವನ್ನು ನೀಡಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ಹಾಗೂ ಸೇವೆಗಳನ್ನು ಫಲಾನುಭವಿಗಳಿಗೆ ಸುಗಮವಾಗಿ ತಲುಪಿಸುವ ವ್ಯವಸ್ಥೆಯಾಗಬೇಕು ಎಂದು ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಎಸ್ಪಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು..