ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಮಣ್ಣಿನ ಫಲವತ್ತತೆ ಹೆಚ್ಚಿಸಲು ಸಾವಯವ, ಜೈವಿಕ ಗೊಬ್ಬರಗಳ ಬಳಕೆ ಮಾಡುವಂತೆ ಕರೆ

KannadaprabhaNewsNetwork | Updated : Jun 12 2025, 02:17 AM IST

ಇತ್ತೀಚಿಗೆ ಹವಾಮಾನ ವೈಪರೀತ್ಯದಿಂದ ಮುಸುಕಿನಜೋಳದಲ್ಲಿ ಬೂಜು/ಕೇದಿಗೆ ರೋಗ ಉಲ್ವಣಗೊಳ್ಳುತ್ತಿದ್ದು ಇದರಿಂದ ಇಳುವರಿ ನಷ್ಟ ಸಾಧ್ಯತೆ ಇರುವುದರಿಂದ ರೈತರು ರೋಗ ಲಕ್ಷಣ ಕಂಡ ಕೂಡಲೆ ಮೆಟಲಾಕ್ಸಿಲ್ 8 ಡಬ್ಲುಪಿ ಮ್ಯಾಂಕೊಜೆಬ್ 64 ಡಬ್ಲುಪಿ ಸಂಯುಕ್ತ ಶಿಲೀಂದ್ರನಾಶಕವನ್ನು ಪ್ರತೀ 1 ಲೀಟರ್ ನೀರಿಗೆ 2 ಗ್ರಾಂನಂತೆ (ಎಕರೆಗೆ 600 ಗ್ರಾಂ.) ಮಿಶ್ರಣಮಾಡಿ ಗರಿಗಳ ತಳಭಾಗ ಹಾಗೂ ಮೇಲ್ಭಾಗಕ್ಕೂ ಸಿಂಪಡಿಸಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಮಣ್ಣಿನಲ್ಲಿರುವ ಫಲವತ್ತತೆಯನ್ನು ಹೆಚ್ಚಿಸಲು ಸಾವಯವ, ಜೈವಿಕ ಗೊಬ್ಬರಗಳ ಬಳಕೆ ಮಾಡುವಂತೆ ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕಿ ಎಸ್‌.ಬಿ.ಮಮತಾ ಕರೆ ನೀಡಿದರು.

ತರಬೇತಿ ಕೇಂದ್ರದ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನಂಜನಗೂಡು ತಾಲೂಕಿನ ಚಿಕ್ಕಯ್ಯನಛತ್ರ ಹೋಬಳಿಯ ರಾಂಪುರ ಗ್ರಾಮದಲ್ಲಿ ಭತ್ತ ಮತ್ತು ಮುಸುಕಿನಜೋಳ ಬೆಳೆಯಲ್ಲಿ ಸಮಗ್ರ ಬೇಸಾಯ ಕ್ರಮಗಳ ಕುರಿತು ಬುಧವಾರ ಆಯೋಜಿಸಿದ್ದ ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತರಬೇತಿ ಕೇಂದ್ರದಲ್ಲಿ ಆಯೋಜಿಸುತ್ತಿರುವ ವಿವಿಧ ಆನ್ ಲೈನ್ ಮತ್ತು ಸಾಂಸ್ಥಿಕ ತರಬೇತಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಅದರ ಸದುಪಯೋಗ ಪಡೆಯುವಂತೆ ರೈತರಿಗೆ ಮನವಿ ಮಾಡಿದರು.

ತರಬೇತಿಯ ಅಂಗವಾಗಿ ಈ ಭಾಗದ ಪ್ರಮುಖ ಬೆಳೆಗಳಾದ ಭತ್ತ ಹಾಗೂ ಮುಸಕಿನ ಜೋಳ ಬೆಳೆಗಳ ಸಮಗ್ರ ಬೇಸಾಯ ಕ್ರಮಗಳು , ವಿವಿಧ ಕೀಟ, ರೋಗಗಳು ಹಾಗೂ ಅವುಗಳ ನಿರ್ವಹಣ ಕ್ರಮಗಳ ಕುರಿತು ಸಸ್ಯರೋಗ ಶಾಸ್ತ್ರಜ್ಞೆ ಡಾ.ಆರ್.ಎನ್. ಪುಷ್ಪ ಮಾಹಿತಿ ನೀಡಿದರು.

ಇತ್ತೀಚಿಗೆ ಹವಾಮಾನ ವೈಪರೀತ್ಯದಿಂದ ಮುಸುಕಿನಜೋಳದಲ್ಲಿ ಬೂಜು/ಕೇದಿಗೆ ರೋಗ ಉಲ್ವಣಗೊಳ್ಳುತ್ತಿದ್ದು ಇದರಿಂದ ಇಳುವರಿ ನಷ್ಟ ಸಾಧ್ಯತೆ ಇರುವುದರಿಂದ ರೈತರು ರೋಗ ಲಕ್ಷಣ ಕಂಡ ಕೂಡಲೆ ಮೆಟಲಾಕ್ಸಿಲ್ 8 ಡಬ್ಲುಪಿ + ಮ್ಯಾಂಕೊಜೆಬ್ 64 ಡಬ್ಲುಪಿ ಸಂಯುಕ್ತ ಶಿಲೀಂದ್ರನಾಶಕವನ್ನು ಪ್ರತೀ 1 ಲೀಟರ್ ನೀರಿಗೆ 2 ಗ್ರಾಂನಂತೆ (ಎಕರೆಗೆ 600 ಗ್ರಾಂ.) ಮಿಶ್ರಣಮಾಡಿ ಗರಿಗಳ ತಳಭಾಗ ಹಾಗೂ ಮೇಲ್ಭಾಗಕ್ಕೂ ಸಿಂಪಡಿಸಬೇಕು ಎಂದು ತಿಳಿಸಿದರು.

ಮುಸುಕಿನ ಜೋಳ ಬಿತ್ತನೆಗೆ ಮೊದಲು ಪ್ರತಿ 1 ಕೆಜಿ ಬಿತ್ತನೆ ಬೀಜಕ್ಕೆ 3 ಗ್ರಾಂ ಮೆಟಲಾಕ್ಸಿಲ್ 8 ಡಬ್ಲುಪಿ + ಮ್ಯಾಂಕೊಜೆಬ್ 64 ಡಬ್ಲುಪಿ ಸಂಯುಕ್ತ ಶಿಲೀಂದ್ರನಾಶಕದಿಂದ ಬೀಜೋಪಚಾರ ಮಾಡಿ ಬಿತ್ತನೆ ಮಾಡುವುದರಿಂದ ಶೇಕಡ 30 ರಿಂದ 40 ರಷ್ಟು ರೋಗ ನಿಯಂತ್ರಣವಾಗುತ್ತದೆ. ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯ ಅಭಿವೃದ್ಧಿ ಪಡಿಸಿರುವ ಬೂಜು, ಕೇದಿಗೆ ರೋಗ ನಿರೋಧಕ ತಳಿಗಳಾದ ಎಂಎಎಚ್‌-14-5, ಎಂಎಎಚ್‌-1137 (ಹೇಮ), ಎಂಎಎಚ್‌-2049 (ನಿತ್ಯಶ್ರೀ), ಎಂಎಎಚ್‌-14-138, ಎಂಎಎಚ್‌ -15-84 ತಳಿಗಳನ್ನು ಬೆಳೆಯುವುದು ಸೂಕ್ತ ಎಂದರು.

ಕೃಷಿ ಇಲಾಖೆಯಲ್ಲಿ ಅನುಷ್ಠಾನಗೊಳಿಸುವ ವಿವಿಧದ ಯೋಜನೆಗಳಡಿ ರೈತ ಸಂಪರ್ಕ ಕೇಂದ್ರದಲ್ಲಿ ದೊರೆಯುವ ಸೌಲ್ಯಭಗಳ ಕುರಿತು ಚಿಕ್ಕಯ್ಯನಛತ್ರ ಹೋಬಳಿಯ ಕೃಷಿ ಅಧಿಕಾರಿ ರಘುವೀರ್ ಮಾಹಿತಿ ನೀಡಿದರು.

ನಂತರ ಬಸವನಪುರ ಗ್ರಾಮದ ಪ್ರಗತಿಪರ ರೈತ ಮುದ್ದರಾಮಯ್ಯ ಸಮಗ್ರ ಕೃಷಿ ಪದ್ದತಿ ಅಳವಡಿಕೆಯ ಕುರಿತು ಅನುಭವ ಹಂಚಿಕೊಂಡರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರದ, ಕೃಷಿ ಅಧಿಕಾರಿ ಜಿ.ಕೆ. ಶಿಲ್ಪಾ ಸ್ವಾಗತಿಸಿ, ನಿರೂಪಿಸಿದರು. ರೈತ ಮುಖಂಡರಾದ ಮಂಜುನಾಥ, ನಾಗರಾಜು, ಕಾಳಿಂಗಪ್ಪ, ಆತ್ಮ ಯೋಜನೆಯ ಸಿಬ್ಬಂದಿ ನಂದಿನಿ ಹಾಗೂ ರೈತರು ಭಾಗವಹಿಸಿದ್ದರು.