ಕಂಪ್ಲಿ: ಕಂಪ್ಲಿ ಉತ್ಸವದಲ್ಲಿ ತಾಲೂಕಿನ ಸಮಸ್ತ ಜನತೆ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಆಹ್ವಾನಿಸುವ ಉದ್ದೇಶದಿಂದ ಪ್ರಚಾರ ವಾಹನವನ್ನು ಹೊರಡಿಸಲಾಗಿದೆ ಎಂದು ಶಾಸಕ ಜೆ.ಎನ್. ಗಣೇಶ್ ಹೇಳಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಉತ್ಸವದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರಚಾರ ವಾಹನದ ಮೂಲಕ ಮಾಹಿತಿ ನೀಡಲಾಗುತ್ತಿದ್ದು, ಶಾಲಾ ಮಕ್ಕಳ ಜಾಗೃತಿ ಜಾಥಾ ಸೇರಿದಂತೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕಂಪ್ಲಿ ಉತ್ಸವವನ್ನು ಕೇವಲ ಒಂದು ಕಾರ್ಯಕ್ರಮವಲ್ಲದೆ, ಜನೋತ್ಸವವಾಗಿ ರೂಪಿಸುವ ಸಂಕಲ್ಪ ಹೊಂದಿದ್ದು, ಈ ನಿಟ್ಟಿನಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಮಕ್ಕಳು, ಮಹಿಳೆಯರು ಹಾಗೂ ಯುವಜನತೆಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಉತ್ಸವದಲ್ಲಿ ತಾಲೂಕಿನ ಇತಿಹಾಸ, ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಸಾಮಾಜಿಕ ಹಿನ್ನೆಲೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಲಾಗುವುದು. ಕಳೆದ ಬಾರಿಗಿಂತಲೂ ಈ ಬಾರಿ ಉತ್ಸವವನ್ನು ಇನ್ನಷ್ಟು ವೈವಿಧ್ಯಮಯವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.ಉತ್ಸವದ ಹಿನ್ನಲೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳು ಹಾಗೂ ಐತಿಹಾಸಿಕ ಸೋಮಪ್ಪ ಕೆರೆಯನ್ನು ವಿದ್ಯುತ್ ದೀಪಗಳು, ಕಮಾನುಗಳ ಮೂಲಕ ಆಕರ್ಷಕವಾಗಿ ಅಲಂಕರಿಸಲಾಗುವುದು. ತಾಲೂಕಿನ ಎಲ್ಲಾ ಗ್ರಾಮೀಣ ಪ್ರದೇಶಗಳ ಜನತೆ ಹಾಗೂ ಪಟ್ಟಣದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಸ್ವಯಂಪ್ರೇರಿತವಾಗಿ ಭಾಗವಹಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ತಹಸೀಲ್ದಾರ್ ಜೂಗಲ ಮಂಜುನಾಯಕ ಮಾತನಾಡಿ, ಕಂಪ್ಲಿ ಉತ್ಸವದ ಯಶಸ್ಸಿಗಾಗಿ ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ಸಮನ್ವಯದಿಂದ ಸಹಕರಿಸುವಂತೆ ಸೂಚನೆ ನೀಡಲಾಗಿದೆ. ಉತ್ಸವದ ಎಲ್ಲಾ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿ ಸಿದ್ಧಗೊಳ್ಳುವ ಹಂತದಲ್ಲಿದ್ದು, ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಎಪಿಎಂಸಿ ಅಧ್ಯಕ್ಷ ಎನ್. ಹಬೀಬ್ರೆಹಮಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಪ್ರಮುಖರಾದ ಬಿ. ಸಿದ್ದಪ್ಪ, ಆರ್.ಪಿ. ಶಶಿಕುಮಾರ್, ಲಡ್ಡು ಹೊನ್ನೂರವಲಿ, ಬಿ. ಜಾಫರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.