ಹೂವಿನಹಡಗಲಿ: ಗ್ರಾಮೀಣ ಪ್ರದೇಶದ ಜನರ ದೈನಂದಿನ ಜೀವನ ಚಿತ್ರಣ ಅರಿಯಲು, ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಸೇವಾ ಶಿಬಿರಗಳು ಸಹಕಾರಿಯಾಗಿವೆ ಎಂದು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ. ಮೋಹನ ರೆಡ್ಡಿ ಹೇಳಿದರು.
ಶಾಲೆಯ ಮುಖ್ಯ ಗುರು ಡಿ. ವಿರೂಪಣ್ಣ ಮಾತನಾಡಿ, ಗ್ರಾಮೀಣ ಭಾಗದ ಸಾವಿರಾರು ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚರಾಗಬಾರದೆಂಬ ಕಾರಣಕ್ಕಾಗಿ ಬಳ್ಳಾರಿ ವೀರಶೈವ ವಿದ್ಯಾವರ್ಧಕ ಸಂಘವು ಗ್ರಾಮೀಣ ಪ್ರದೇಶದಲ್ಲಿ ಕಾಲೇಜು ಆರಂಭಿಸಿ ಲಕ್ಷಾಂತರ ವಿದ್ಯಾರ್ಥಿಗಳ ಬದುಕಿಗೆ ಆಸರೆಯಾಗಿದೆ. ಆದರಿಂದ ಈ ಕಾಲೇಜು ವಿದ್ಯಾರ್ಥಿಗಳೊಂದಿಗೆ ಭಾವನಾತ್ಮಕ ಸಂಬಂಧಗಳನ್ನು ಹೊಂದಿದೆ ಎಂದರು.
ಕಾಲೇಜು ಪ್ರಾಚಾರ್ಯ ಎಸ್.ಎಸ್. ಪಾಟೀಲ್ ಮಾತನಾಡಿ, ಕಾಲೇಜನಿಂದ ಸೇವಾ ಶಿಬಿರಗಳನ್ನು 50 ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರಲಾಗಿದೆ. ಈ ಸೇವಾ ಶಿಬಿರದಲ್ಲಿ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಬಿರಾರ್ಥಿಗಳಾಗಿ ಆಗಮಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.ಸಾನ್ನಿಧ್ಯ ವಹಿಸಿದ್ದ ಅಂಗೂರೇಶ್ವರ ಹಿರೇಮಠದ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ, ನಿಷ್ಠೆಯಿಂದ ಸೇವಾ ಮನೋಭಾವನೆ ಇಟ್ಟುಕೊಂಡು, ದೇಶಿ ಸಂಸ್ಕೃತಿ ಉಳಿಸಿ-ಬೆಳೆಸಬೇಕು ಎಂದು ಹೇಳಿದರು.
ಶಿಬಿರಾಧಿಕಾರಿ ಡಾ. ಶರಣಪ್ಪ ಜಕ್ಕಲಿ ಸ್ವಾಗತಿಸಿದರು, ಎಸ್.ಬಿ. ಸಂಜಯ ಕುಮಾರ, ಆಶಾ ಬಾರಿಕರ ಕಾರ್ಯಕ್ರಮ ನಿರೂಪಿಸಿದರು. ಮಾಬುಸಾಬ್ ವಂದಿಸಿದರು.
ಆನಂತರದಲ್ಲಿ ಅಂತಾರಾಷ್ಟ್ರೀಯ ಜನಪದ ಕಲಾವಿದ ಜೀವನಸಾಬ್ ವಾಲಿಕಾರ್ ಅವರಿಂದ ಜನಪದ ಸಂಗಮ ಕಾರ್ಯಕ್ರಮ ಜನಮನ ಸೆಳೆಯಿತು.