ಅನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುವಂತಿಲ್ಲ: ಗಂಗೂಬಾಯಿ ಮಾನಕರ

KannadaprabhaNewsNetwork |  
Published : Apr 06, 2024, 12:50 AM IST
ಡಿಸಿ ಗಂಗೂಬಾಯಿ ಮಾನಕರ | Kannada Prabha

ಸಾರಾಂಶ

ಎಂಸಿಎಂಸಿಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುತ್ತಿರುವುದನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಕೇಂದ್ರವನ್ನು ತೆರೆದಿದೆ.

ಕಾರವಾರ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್‌ಬುಕ್, ವಾಟ್ಸ್‌ಆ್ಯಪ್, ಇ-ಪತ್ರಿಕೆಗಳು, ಸೇರಿದಂತೆ ಎಲ್ಲ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ, ಯಾವುದೇ ರಾಜಕೀಯ ಪಕ್ಷದ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು, ಮಾಧ್ಯಮ ಪ್ರಮಾಣೀಕರಣ, ಕಣ್ಗಾವಲು ಸಮಿತಿ(ಎಂಸಿಎಂಸಿ)ಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಎಂಸಿಎಂಸಿಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುತ್ತಿರುವುದನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಕೇಂದ್ರವನ್ನು ತೆರೆದಿದೆ.

ಜಿಲ್ಲೆಯ ಕುರಿತು ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾಗುವ ಸುದ್ದಿಗಳನ್ನು ಪರಿಶೀಲಿಸಲು ನಿರಂತರವಾಗಿ ವೀಕ್ಷಿಸಲು 3 ಪಾಳಿಯಲ್ಲಿ ಸಿಬ್ಬಂದಿ ನಿಯೋಜಿಸಿದ್ದು, ಎಲ್ಲ ಪ್ರಮುಖ ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾಗುತ್ತಿರುವ ಕಾರ್ಯಕ್ರಮಗಳನ್ನು ವೀಕ್ಷಿಸಿ ಅದರಲ್ಲಿ ಬರುವ ಕಾರ್ಯಕ್ರಮಗಳ ಬಗ್ಗೆ ಪ್ರತ್ಯೇಕ ರಿಜಿಸ್ಟರ್‌ಗಳಲ್ಲಿ ದಾಖಲು ಮಾಡುತ್ತಿರುವ ಸಿಬ್ಬಂದಿ ಎಂಸಿಎಂಸಿಯಿಂದ ಪೂರ್ವಾನುಮತಿ ಪಡೆಯದೇ ಪ್ರಸಾರವಾಗುವ ಜಾಹೀರಾತುಗಳು ಮತ್ತು ನೀತಿ ಸಂಹಿತೆ ಉಲ್ಲಂಘನೆ ವ್ಯಾಪ್ತಿಗೆ ಬರುವ ಕಾರ್ಯಕ್ರಮಗಳ ಬಗ್ಗೆ ನೋಡೆಲ್ ಅಧಿಕಾರಿಗಳಿಗೆ ವರದಿ ನೀಡುತ್ತಿದ್ದಾರೆ.

ರಾಜ್ಯಮಟ್ಟದ ಮತ್ತು ಸ್ಥಳೀಯ ಎಲ್ಲ ದಿನಪತ್ರಿಕೆಗಳನ್ನೂ ವಿವರವಾಗಿ ಪ್ರತಿದಿನ ಪರಿಶೀಲನೆ ನಡೆಸುತ್ತಿದ್ದು, ಪ್ರತಿದಿನದ ಪತ್ರಿಕಾ ವರದಿಗಳಲ್ಲಿ ಪ್ರಕಟವಾಗುವ ಪೇಯ್ಡ್ ನ್ಯೂಸ್‌ಗಳ ಬಗ್ಗೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಮತ್ತು ಎಲ್ಲ ರಾಜಕೀಯ ಪ್ರಚಾರ ಕಾರ್ಯಕ್ರಮಗಳ ವರದಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದ್ದು, ಎಲ್ಲ ಪತ್ರಿಕಾ ವರದಿಗಳ ತುಣುಕುಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿದ್ದು, ಕೂಲಂಕಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ.

ಸೋಷಿಯಲ್ ಮೀಡಿಯಾಗಳಲ್ಲಿ ಜಾಹೀರಾತು ಪ್ರಕಟಣೆ ಮಾತ್ರವಲ್ಲದೇ, ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ತಮ್ಮ ಚುನಾವಣಾ ಪ್ರಚಾರದ ಕುರಿತು ಸಾರ್ವಜನಿಕರಿಗೆ ಬಲ್ಕ್ ಎಸ್ಎಂಎಸ್‌ಗಳು, ವಾಯ್ಸ್ ಮೆಸೇಜ್‌ಗಳನ್ನು ಕಳುಹಿಸಲೂ ಜಿಲ್ಲಾ ಎಂಸಿಎಂಸಿ ಸಮಿತಿಯ ಪೂರ್ವಾನುಮತಿ ಅತ್ಯಗತ್ಯವಾಗಿದೆ.

ಜಿಲ್ಲೆಯಲ್ಲಿ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗುವ ಜಾಹೀರಾತುಗಳ ಕುರಿತೂ ನಿರಂತರ ನಿಗಾ ವಹಿಸಲು ಸಾಮಾಜಿಕ ಮಾಧ್ಯಮ ನಿರ್ವಹಣಾ ಪರಿಣಿತರ ಪ್ರತ್ಯೇಕ ತಂಡವನ್ನು ರಚಿಸಲಾಗಿದೆ.

ಜಿಲ್ಲೆಯಲ್ಲಿ ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕ ಚುನಾವಣೆ ನಡೆಸಲು, ಚುನಾವಣಾ ಆಯೋಗದ ಸೂಚನೆಯಂತೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ತಮ್ಮ ಪ್ರಚಾರ ಕಾರ್ಯಕ್ರಮದ ಕುರಿತು ದೃಶ್ಯ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸುವ ಮೊದಲು ಜಿಲ್ಲಾ ಎಂಸಿಎಂಸಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...