ಮುಂಗಾರು ಮಳೆ ಮುನ್ನ ಬೀಜ, ಗೊಬ್ಬರದ ಕಾಳಜಿ

KannadaprabhaNewsNetwork |  
Published : Mar 26, 2025, 01:38 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್   | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಬಿರು ಬೇಸಗೆ ಎಲ್ಲರ ನೆತ್ತಿ ಸುಡುತ್ತಿರುವಾಗಲೇ ಜಿಲ್ಲಾಡಳಿತ ಭವಿಷ್ಯದ ಮುಂಗಾರು ಮಳೆ ನೆನಪು ಮಾಡಿಕೊಂಡಿದ್ದು ರೈತರ ನೆರವಿಗೆ ಧಾವಿಸಿದೆ. ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ರೈತರಿಗೆ ಯಾವುದೇ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಉಂಟಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಬಾರಿ ಅಲ್ಪ ಪ್ರಮಾಣದಲ್ಲಿ ರಸಗೊಬ್ಬರ ಕೊರತೆ ಉಂಟಾಗಿತ್ತು. ಕೂಡಲೇ ಹೆಚ್ಚುವರಿ ರಸಗೊಬ್ಬರ ತರಿಸಿ ವಿತರಿಸಲಾಯಿತು. ಅಂತಹ ಪರಿಸ್ಥಿತಿ ಈ ಬಾರಿ ತಲೆದೋರಬಾರದು. ಅಗತ್ಯಕ್ಕಿಂತ ಶೇ.25ರಷ್ಟು ಹೆಚ್ಚಿನ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರಗಳ ದಾಸ್ತಾನು ಇರಿಸಲು ಅಧಿಕಾರಿಗಳು ಹಾಗೂ ಮಾರಾಟಗಾರರು ಕ್ರಮ ಕೈಗೊಳ್ಳಬೇಕು ಎಂದರು.

ಸಗಟು ಹಾಗೂ ಚಿಲ್ಲೆರೆ ವ್ಯಾಪಾರಿಗಳು ರಸಗೊಬ್ಬರ ಮಾರಾಟದ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಲಭ್ಯವಿರುವ ದಾಸ್ತಾನು ವಿವರಗಳನ್ನು ಪ್ರತಿ ಅಂಗಡಿಗಳ ಮುಂದೆ ಸೂಚನಾ ಫಲಕಗಳಲ್ಲಿ ನಮೂದಿಸಬೇಕು. ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು. ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಒದಗಿಸುವುದು ಕೃಷಿ ಇಲಾಖೆ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಕಾಯ್ದೆ ಅನುಸಾರ ಕೃಷಿ ಇಲಾಖೆ ಅಧಿಕಾರಿಗಳು ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಂದ ವಿಶ್ಲೇಷಣೆಗೆ ಒಳಪಡಿಸಬೇಕು. ಒಂದು ವೇಳೆ ವಿಶ್ಲೇಷಣೆ ವರದಿಯಲ್ಲಿ ಕಳಪೆ ಗುಣಮಟ್ಟ ಕಂಡು ಬಂದರೆ ಕಾನೂನು ರಿತ್ಯ ಕ್ರಮ ಕೈಗೊಳ್ಳಬೇಕು. ಬಿತ್ತನೆ ಬೀಜ ಸರಬರಾಜು ಮಾಡುವ ಕಂಪನಿ, ಮಾರಾಟಗಾರರ ಸಂಪೂರ್ಣ ವಿವರಗಳನ್ನು ದಾಖಲೆ ಸಹಿತ ಸಂಗ್ರಹಿಸಿಡಬೇಕು. ರೈತರು ಬಿತ್ತನೆ ಬೀಜದ ಗುಣಮಟ್ಟದ ಕುರಿತು ದೂರು ಸಲ್ಲಿಸಿದರೆ, ಕೂಡಲೇ ಕ್ರಮ ಕೈಗೊಳ್ಳಬೇಕು. ಯಾವ ಕಾರಣಕ್ಕಾಗಿ, ಯಾವ ಹಂತದಲ್ಲಿ ಬೆಳವಣಿಗೆ, ಇಳುವರಿ ಕಡಿಮೆಯಾಗಿದೆ ಎಂಬುದನ್ನು ತಾಂತ್ರಿಕವಾಗಿ ಪತ್ತೆ ಹಚ್ಚಬೇಕು. ಪತ್ತೆಯಾದ ಅಂಶಗಳನ್ನು ರೈತರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಪ್ರಕೃತಿ ಸ್ನೇಹಿ ಕೃಷಿ ಪದ್ದತಿಗಳ ಕುರಿತು ಜಿಲ್ಲೆಯ ರೈತರಿಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಅರಿವು ಮೂಡಿಸುವ ಕೆಲಸವನ್ನು ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಅಧಿಕಾರಿಗಳು ಕೈಗೊಳ್ಳಬೇಕು. ಜಿಲ್ಲೆಯ ನೈಸರ್ಗಿಕ ಹವಾಮಾನ, ಮಳೆ ಪ್ರಮಾಣ, ಭೂಮಿಯ ಫಲವತ್ತತೆ, ನೀರಿನ ಲಭ್ಯತೆ ಆಧರಿಸಿ ಕೃಷಿ ಬೆಳೆ ಬೆಳೆಯಲು ತಿಳಿ ಹೇಳಬೇಕು. ಅತಿ ಕಡಿಮೆ ಮಳೆ ಬೀಳುವ, ಅಧಿಕ ಉಷ್ಣಾಂಶ ಇರುವ ಜಿಲ್ಲೆಯ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕುಗಳಲ್ಲಿ ರೈತರು ಅಡಿಕೆ ತೋಟ ಮಾಡಲು ಮುಂದಾಗುತ್ತಿದ್ದಾರೆ. ಇದು ಅವೈಜ್ಞಾನಿಕ ಹಾಗೂ ನಿಸರ್ಗಕ್ಕೆ ವಿರುದ್ಧವಾದ ಕ್ರಿಯೆಯಾಗಿದೆ ಎಂದರು.

ಈಗಾಗಲೇ ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಮಿತಿ ಮೀರಿದೆ. ಇದಕ್ಕೆ ಕಡಿವಾಣ ಹಾಕದಿದ್ದರೆ, ಮುಂದಿನ ದಿನಗಳಲ್ಲಿ ತೊಂದರೆ ಎದುರಾಗಲಿದೆ. ಆದರೆ ರೈತರು ಹೆಚ್ಚಿನ ನೀರು ಬೇಡುವ ಅಡಿಕೆ ಬೆಳೆ ಬೆಳೆಯಲು ಮುಂದಾಗುತ್ತಿದ್ದಾರೆ. ಇದನ್ನು ತಪ್ಪಿಸಿ ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ರೈತರನ್ನು ಪ್ರೇರೆಪಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನ್ ಖುರೇಶಿ, ಕೃಷಿ ಇಲಾಖೆ ಉಪನಿರ್ದೇಶಕರಾದ ಶಿವಕುಮಾರ್, ಪ್ರಭಾಕರ್ ಸೇರಿ ರಸಗೊಬ್ಬರ ಮಾರಾಟಗಾರರು ಉಪಸ್ಥಿತರಿದ್ದರು.

2,385 ಮೆಟ್ರಿಕ್ ಟನ್ ಡಿಎಪಿ ದಾಸ್ತಾನು

ಜಿಲ್ಲೆಯಲ್ಲಿ 23 ಖಾಸಗಿ ಹಾಗೂ 6 ಸಹಕಾರಿ ಸಂಘ ಸೇರಿ 29 ಸಗಟು ರಸಗೊಬ್ಬರ ಮಾರಾಟಗಾರರು, 405 ಖಾಸಗಿ, 64 ಸಹಕಾರಿ ಸಂಘ, 30 ಎಫ್‌ಪಿಒ ಸೇರಿ 499 ಚಿಲ್ಲರೆ ರಸಗೊಬ್ಬರ ಮಾರಾಟಗಾರರು ಇದ್ದಾರೆ.

ಜೂನ್, ಜುಲೈ ಮತ್ತು ಆಗಸ್ಟ್ ನಲ್ಲಿ ಡಿಎಪಿ ಮತ್ತು ಕಾಂಪ್ಲೇಕ್ಸ್ ರಸಗೊಬ್ಬರ ಹಾಗೂ ಜುಲೈ, ಅಗಸ್ಟ್, ಸೆಪ್ಟಂಬರ್ ನಲ್ಲಿ ಯೂರಿಯಾ ರಸಗೊಬ್ಬರಕ್ಕೆ ಹೆಚ್ಚು ಬೇಡಿಕೆ ಉಂಟಾಗುತ್ತದೆ. ದಾವಣಗೆರೆ, ಶಿವಮೊಗ್ಗ ಮತ್ತು ಹಾವೇರಿ ರೈಲ್ವೇ ರೇಕ್ ಪಾಯಿಂಟ್‍ಗಳಿಂದ ಜಿಲ್ಲೆಯ ರಸಗೊಬ್ಬರಗಳನ್ನು ಸರಬರಾಜು ಸಂಸ್ಥೆಗಳು ಪಡೆದುಕೊಳ್ಳುತ್ತಿವೆ. ಸದ್ಯ ಜಿಲ್ಲೆಯಲ್ಲಿ ಮಾ. 10ನೇ ತಾರೀಖಿನ ಅಂತ್ಯಕ್ಕೆ 5,615 ಮೆಟ್ರಿಕ್ ಟನ್ ಯೂರಿಯಾ, 2,385 ಮೆಟ್ರಿಕ್ ಟನ್ ಡಿಎಪಿ, 887 ಮೆಟ್ರಿಕ್ ಟನ್ ಎಂಒಪಿ, 7,981 ಮೆಟ್ರಿಕ್ ಟನ್ ಕಾಂಪ್ಲೆಕ್ಸ್ ಹಾಗೂ 265 ಮೆಟ್ರಿಕ್ ಟನ್ ಎಸ್ಎಸ್‌ಪಿ ರಸಗೊಬ್ಬದ ದಾಸ್ತಾನು ಲಭ್ಯವಿದೆ ಎಂದು ಜಿಂಟಿ ಕೃಷಿ ನಿರ್ದೇಶಕ ಮಂಜುನಾಥ ಸಭೆಯಲ್ಲಿ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ