ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಬಾರಿ ಅಲ್ಪ ಪ್ರಮಾಣದಲ್ಲಿ ರಸಗೊಬ್ಬರ ಕೊರತೆ ಉಂಟಾಗಿತ್ತು. ಕೂಡಲೇ ಹೆಚ್ಚುವರಿ ರಸಗೊಬ್ಬರ ತರಿಸಿ ವಿತರಿಸಲಾಯಿತು. ಅಂತಹ ಪರಿಸ್ಥಿತಿ ಈ ಬಾರಿ ತಲೆದೋರಬಾರದು. ಅಗತ್ಯಕ್ಕಿಂತ ಶೇ.25ರಷ್ಟು ಹೆಚ್ಚಿನ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರಗಳ ದಾಸ್ತಾನು ಇರಿಸಲು ಅಧಿಕಾರಿಗಳು ಹಾಗೂ ಮಾರಾಟಗಾರರು ಕ್ರಮ ಕೈಗೊಳ್ಳಬೇಕು ಎಂದರು.
ಸಗಟು ಹಾಗೂ ಚಿಲ್ಲೆರೆ ವ್ಯಾಪಾರಿಗಳು ರಸಗೊಬ್ಬರ ಮಾರಾಟದ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಲಭ್ಯವಿರುವ ದಾಸ್ತಾನು ವಿವರಗಳನ್ನು ಪ್ರತಿ ಅಂಗಡಿಗಳ ಮುಂದೆ ಸೂಚನಾ ಫಲಕಗಳಲ್ಲಿ ನಮೂದಿಸಬೇಕು. ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು. ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಒದಗಿಸುವುದು ಕೃಷಿ ಇಲಾಖೆ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ಕಾಯ್ದೆ ಅನುಸಾರ ಕೃಷಿ ಇಲಾಖೆ ಅಧಿಕಾರಿಗಳು ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಂದ ವಿಶ್ಲೇಷಣೆಗೆ ಒಳಪಡಿಸಬೇಕು. ಒಂದು ವೇಳೆ ವಿಶ್ಲೇಷಣೆ ವರದಿಯಲ್ಲಿ ಕಳಪೆ ಗುಣಮಟ್ಟ ಕಂಡು ಬಂದರೆ ಕಾನೂನು ರಿತ್ಯ ಕ್ರಮ ಕೈಗೊಳ್ಳಬೇಕು. ಬಿತ್ತನೆ ಬೀಜ ಸರಬರಾಜು ಮಾಡುವ ಕಂಪನಿ, ಮಾರಾಟಗಾರರ ಸಂಪೂರ್ಣ ವಿವರಗಳನ್ನು ದಾಖಲೆ ಸಹಿತ ಸಂಗ್ರಹಿಸಿಡಬೇಕು. ರೈತರು ಬಿತ್ತನೆ ಬೀಜದ ಗುಣಮಟ್ಟದ ಕುರಿತು ದೂರು ಸಲ್ಲಿಸಿದರೆ, ಕೂಡಲೇ ಕ್ರಮ ಕೈಗೊಳ್ಳಬೇಕು. ಯಾವ ಕಾರಣಕ್ಕಾಗಿ, ಯಾವ ಹಂತದಲ್ಲಿ ಬೆಳವಣಿಗೆ, ಇಳುವರಿ ಕಡಿಮೆಯಾಗಿದೆ ಎಂಬುದನ್ನು ತಾಂತ್ರಿಕವಾಗಿ ಪತ್ತೆ ಹಚ್ಚಬೇಕು. ಪತ್ತೆಯಾದ ಅಂಶಗಳನ್ನು ರೈತರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಈಗಾಗಲೇ ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಮಿತಿ ಮೀರಿದೆ. ಇದಕ್ಕೆ ಕಡಿವಾಣ ಹಾಕದಿದ್ದರೆ, ಮುಂದಿನ ದಿನಗಳಲ್ಲಿ ತೊಂದರೆ ಎದುರಾಗಲಿದೆ. ಆದರೆ ರೈತರು ಹೆಚ್ಚಿನ ನೀರು ಬೇಡುವ ಅಡಿಕೆ ಬೆಳೆ ಬೆಳೆಯಲು ಮುಂದಾಗುತ್ತಿದ್ದಾರೆ. ಇದನ್ನು ತಪ್ಪಿಸಿ ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ರೈತರನ್ನು ಪ್ರೇರೆಪಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಜಿಲ್ಲೆಯಲ್ಲಿ 23 ಖಾಸಗಿ ಹಾಗೂ 6 ಸಹಕಾರಿ ಸಂಘ ಸೇರಿ 29 ಸಗಟು ರಸಗೊಬ್ಬರ ಮಾರಾಟಗಾರರು, 405 ಖಾಸಗಿ, 64 ಸಹಕಾರಿ ಸಂಘ, 30 ಎಫ್ಪಿಒ ಸೇರಿ 499 ಚಿಲ್ಲರೆ ರಸಗೊಬ್ಬರ ಮಾರಾಟಗಾರರು ಇದ್ದಾರೆ.