ಕನ್ನಡಪ್ರಭ ವಾರ್ತೆ ಮಂಡ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು- ಕಾರ್ಯಕರ್ತರು ರಾಜ್ಯಪಾಲರು, ಮೈತ್ರಿ ಪಕ್ಷಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರ ಹಿಂದೆ ರಾಜಕೀಯ ದ್ವೇಷ ಅಡಗಿದೆ. ಅವರು ಮುಖ್ಯಮಂತ್ರಿಯಾಗಿರುವುದನ್ನು ಸಹಿಸದೆ ಮೈತ್ರಿ ಪಕ್ಷಗಳು ನಡೆಸಿರುವ ಷಡ್ಯಂತ್ರ ಎಂದು ಕಿಡಿಕಾರಿದರು.ಕಾಂಗ್ರೆಸ್ ಸರ್ಕಾರವನ್ನು ಉರುಳಿಸುವ ಸಲುವಾಗಿ ಬಿಜೆಪಿ- ಜೆಡಿಎಸ್ ಪಕ್ಷಗಳ ವರಿಷ್ಠರು ರಾಜ್ಯಪಾಲರ ಮೇಲೆ ಪ್ರಭಾವ ಬೀರಿ ಪ್ರಾಸಿಕ್ಯೂಷನ್ಗೆ ಅನುಮತಿ ಕೊಡಿಸಿದ್ದಾರೆ. ಸಿದ್ದರಾಮಯ್ಯನವರ ಮೇಲೆ ಕಳಂಕ ಹೊರಿಸಿ, ತೇಜೋವಧೆ ಮಾಡುವುದಕ್ಕೆ ಎರಡೂ ಪಕ್ಷಗಳು ಸಂಚು ನಡೆಸಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ಉತ್ತಮ ಹಾಗೂ ಜನಪರವಾಗಿ ಆಡಳಿತ ನಡೆಸುತ್ತಿರುವ ಸರ್ಕಾರವನ್ನು ಉರುಳಿಸಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಮೈತ್ರಿಪಕ್ಷಗಳ ದ್ವೇಷದ ರಾಜಕಾರಣಕ್ಕೆ ರಾಜ್ಯಪಾಲರು ಬೆಂಬಲವಾಗಿ ನಿಂತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನೀಯ ಎಂದು ದೂರಿದರು.ಮೈಸೂರಿನ ೫೦:೫೦ರ ಅನುಪಾತವನ್ನು ಮುಡಾ ಹಗರಣವೆಂದು ರಾಜ್ಯಪಾಲರು ಒಪ್ಪಿಕೊಳ್ಳುವುದಾದರೆ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.
ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆಯ ಅಧ್ಯಕ್ಷ ಎಲ್.ಸಂದೇಶ್ ಮಾತನಾಡಿ, ರಾಜ್ಯಪಾಲರ ನಡೆ ರಾಜಕೀಯ ಪ್ರೇರಿತವಾಗಿದೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಕಗ್ಗೊಲೆ ಮಾಡುವಂತಹ ಕರಾಳ ಕೃತ್ಯವನ್ನು ನಡೆಸಿದ್ದಾರೆ, ಜನರಿಂದ ಆಯ್ಕೆಯಾದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ವಿವಿಧ ಸಂಘಟನೆಯ ಮುಖಂಡರಾದ ಸುರೇಶ್, ಸಿ.ಎಂ.ದ್ಯಾವಪ್ಪ, ನಾಗರಾಜು, ಶ್ರೀಧರ್, ಶಿವಪ್ರಕಾಶ್, ವಿಜಯಲಕ್ಷ್ಮೀ ರಘುನಂದನ್, ಮಂಜುನಾಥ್, ಅಮ್ಜದ್ ಪಾಷಾ, ಅಂಜನಾ ಶ್ರೀಕಾಂತ್, ರುದ್ರಪ್ಪ, ದೊಡ್ಡಯ್ಯ, ಸೋಮಣ್ಣ, ಇತರರು ಭಾಗವಹಿಸಿದ್ದರು.