ಮತ ಎಣಿಕೆ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

KannadaprabhaNewsNetwork | Published : May 23, 2024 1:03 AM

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತಎಣಿಕೆಗೆ ನಿಯೋಜಿತ ಸಿಬ್ಬಂದಿಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಜಬಾಬ್ದಾರಿಯ ಕುರಿತು ಪ್ರಜ್ಞಾಪೂರ್ವಕವಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಚಿತ್ರದುರ್ಗ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂ.4ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಎಣಿಕೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂದಿಗಳು ತಮ್ಮ ಜಬಾಬ್ದಾರಿಯರಿತು ಪ್ರಜ್ಞಾಪೂರ್ವಕವಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಲ್ಲಾ ತಾಲೂಕುಗಳ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಮತ ಎಣಕೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳಿಗೆ ಚುನಾವಣಾ ಕಾರ್ಯನಿರ್ವಹಣೆ ಕುರಿತು ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಎಲ್ಲಾ ತಹಸೀಲ್ದಾರರು ತಮ್ಮ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಗಳ ಮತಎಣಿಕೆ ಕಾರ್ಯಕ್ಕೆ ಅಗತ್ಯವಿರುವ ಸಿಬ್ಬಂದಿಗಳನ್ನು ಮಾತ್ರ ಬಳಸಿಕೊಳ್ಳಬೇಕು. ಅಗತ್ಯಕ್ಕಿಂತ ಹೆಚ್ಚಿನ ಸಿಬ್ಭಂದಿ ಯನ್ನು ನಿಯೋಜಿಸುವುದು ಸರಿಯಲ್ಲ. ನಿಯೋಜಿತ ಅಧಿಕಾರಿ-ಸಿಬ್ಬಂದಿ ಮತ ಎಣಿಕೆ ದಿನದಂದು ಸಕಾಲದಲ್ಲಿ ಮತ ಎಣಿಕೆ ಕೇಂದ್ರದಲ್ಲಿ ತಮಗೆ ಸೂಚಿಸಿದ ಸ್ಥಳದಲ್ಲಿ ಹಾಜರಿದ್ದು, ಅನವಶ್ಯಕ ಚರ್ಚೆಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸಲು ಸೂಚಿಸಿದರು.

ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತಿ ತಾಲೂಕುವಾರು ಪ್ರತ್ಯೇಕವಾಗಿ ಮತಎಣಿಕೆ ನಡೆಯಲಿದೆ. ಪ್ರತಿ ಸುತ್ತಿನ ಮತಎಣಿಕೆಯ ದಾಖಲೆಗಳನ್ನು ನಿರ್ವಹಿಸಿ, ಸಕ್ಷಮ ಅಧಿಕಾರಿಗಳಿಗೆ ನೀಡಿ ಸಹಿ ಪಡೆದುಕೊಳ್ಳಬೇಕು. ಅದರ ಸಂಪೂರ್ಣ ಜವಾಬ್ದಾರಿಯನ್ನು ಆಯಾ ತಾಲೂಕುಗಳ ತಹಶೀಲ್ದಾರರೆ ನೋಡಿಕೊಳ್ಳಬೇಕು. ಈ ಎಲ್ಲಾ ಚುನಾವಣಾ ಕಾರ್ಯದ ಉಸ್ತುವಾರಿ ಹಾಗೂ ಅಗತ್ಯತೆಗಳನ್ನು ಚುನಾವಣಾ ವೀಕ್ಷಕರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಗಮನಿಸಲಿದ್ದಾರೆ ಎಂದರು.

ಚುನಾವಣಾ ಕಾರ್ಯದ ವ್ಯವಸ್ಥಿತ ನಿರ್ವಹಣೆಗೆ ನಿಯೋಜಿತ ಅಧಿಕಾರಿ-ಸಿಬ್ಬಂದಿಗಳಿಗೆ ಅಗತ್ಯ ತರಬೇತಿಯನ್ನು ನೀಡಲು ಈಗಾಗಲೇ ದಿನಾಂಕವನ್ನು ನಿಗಧಿಪಡಿಸಲಾಗಿದೆ. ಮತಎಣಿಕೆ ಕಾರ್ಯವು ಯಾವುದೇ ಅಡತಡೆಗಳಿಲ್ಲದೆ ಸುಗಮವಾಗಿ ನಡೆಸಲು ಹಾಗೂ ಈ ಎಲ್ಲಾ ವಿದ್ಯಮಾನಗಳನ್ನು ಸಕಾಲದಲ್ಲಿ ಜನರಿಗೆ ತಲುಪಿಸುವುದರ ಜೊತೆಗೆ ವ್ಯವಸ್ಥಿತವಾಗಿ ದಾಖಲೆ ಗಳನ್ನು ನಿರ್ವಹಿಸಲು ಗಣಕ ಯಂತ್ರ, ಮುದ್ರಣ ಯಂತ್ರ, ಝೆರಾಕ್ಸ್, ಇಂಟರ್ ನೆಟ್ ಸಂಪರ್ಕ ಮತ್ತಿತರ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಜವಾಬ್ದಾರಿಯುತ ಅಧಿಕಾರಿಗಳಿಗೆ ಹೊಣೆಗಾರಿಕೆ ವಹಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪ ವಿಭಾಗಾಧಿಕಾರಿ ಕಾರ್ತೀಕ್ ಸೇರಿದಂತೆ ಶಿರಾ ಮತ್ತು ಪಾವಗಡ ಸೇರಿದಂತೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ನಿಯೋಜಿತ ಅಧಿಕಾರಿ-ಸಿಬ್ಬಂದಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this article