ಕನ್ನಡಪ್ರಭ ವಾರ್ತೆ ಯಾದಗಿರಿಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಾಗಲಿ, ಗುತ್ತಿಗೆದಾರರು ಗುಣಮಟ್ಟ ಕಾಪಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೂಡ ಜವಾಬ್ಧಾರಿಯಿಂದ ಕೆಲಸ ಮಾಡಬೇಕು ಎಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.
ಜಿಲ್ಲಾ ಕೇಂದ್ರಕ್ಕೆ ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳು ಅಭ್ಯಾಸ ಮಾಡಲು ಆಗಮಿಸುತ್ತಾರೆ. ಅವರಿಗೆ ಅನುಕೂಲವಾಗಲು ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ನಿಲಯ ನಿರ್ಮಾಣ ಮಾಡುತ್ತಿದೆ. ವಿದ್ಯಾರ್ಥಿಗಳು ಇದರ ಲಾಭ ಪಡೆದು ಪರಿಶ್ರಮದಿಂದ ಅಭ್ಯಾಸ ಮಾಡಿ ಗುರಿ ತಲುಪಬೇಕು ಎಂದರು.
ಹಲವಾರು ವಸತಿ ನಿಲಯಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯಗಳನ್ನು ಸರಿಯಾಗಿ ಒದಗಿಸುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಅಧಿಕಾರಿಗಳು ವಸತಿ ನಿಲಯಗಳಿಗೆ ಭೇಟಿ ನೀಡಿ ವಾಸ್ತವಿಕ ಪರಿಸ್ಥಿತಿ ಗಮನಿಸಿ ಪರಿಹಾರಕ್ಕೆ ಗಮನ ಹರಿಸಬೇಕೆಂದು ಸೂಚಿಸಿದರು.ಲೋಕೋಪಯೊಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೈಲಾಸ್ ಅನ್ವರ್, ಎಂಜಿನೀಯರ್ ನಜಮುದ್ದೀನ್, ಶರಣಗೌಡ ಬಲಕಲ್, ಮಲ್ಲಿಕಾರ್ಜುನ್ ಈಟಿ, ರಫೀಕ್ ಸೇರಿದಂತೆ ಇತರರಿದ್ದರು.