ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

KannadaprabhaNewsNetwork |  
Published : Feb 27, 2026, 02:45 AM IST
ಜಿಲ್ಲಾಧಿಕಾರಿ ಉದ್ಘಾಟಿಸಿದರು | Kannada Prabha

ಸಾರಾಂಶ

ಈ ಬಾರಿಯ ಜನಗಣತಿಯು ಸ್ವಾತಂತ್ರ್ಯಾನಂತರ ನಡೆಯುತ್ತಿರುವ 8ನೇ ಜನಗಣತಿಯಾಗಿದ್ದು, ಡಿಜಿಟಲ್ ಮೋಡ್‌ನಲ್ಲಿ ನಡೆಯುತ್ತಿರುವ ಮೊದಲ ಗಣತಿಯಾಗಿದೆ.

ಜನಗಣತಿ ಕಾರ್ಯದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ

ಕನ್ನಡಪ್ರಭ ವಾರ್ತೆ ಕಾರವಾರ

ಜನಗಣತಿ ಕಾರ್ಯವು ರಾಷ್ಟ್ರದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ದೇಶದ ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನಗಣತಿ ಕಾರ್ಯದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಈ ಬಾರಿಯ ಜನಗಣತಿಯು ಸ್ವಾತಂತ್ರ್ಯಾನಂತರ ನಡೆಯುತ್ತಿರುವ 8ನೇ ಜನಗಣತಿಯಾಗಿದ್ದು, ಡಿಜಿಟಲ್ ಮೋಡ್‌ನಲ್ಲಿ ನಡೆಯುತ್ತಿರುವ ಮೊದಲ ಗಣತಿಯಾಗಿದೆ. ಸ್ಮಾರ್ಟ್ ಪೋನ್‌ಗಳ ಮೂಲಕ ನಡೆಯುವ ಈ ಜನಗಣತಿಗೆ ಪ್ರತ್ಯೇಕ ಆ್ಯಪ್ ರಚಿಸಲಾಗಿದ್ದು, ಆ್ಯಪ್‌ನಲ್ಲಿಯೇ ಪ್ರತೀ ಮನೆಯ ಸುಮಾರು 30 ಪ್ರಶ್ನೆಗಳಿಗೆ ಉತ್ತರಗಳನ್ನು ದಾಖಲಿಸಬೇಕಾಗುತ್ತದೆ. ಜನಗಣತಿಯು 2 ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಏ. 1ರಿಂದ 15ರವರೆಗೆ ಸ್ವಯಂ ಗಣತಿಗೆ ಅವಕಾಶ ನೀಡಿದ್ದು, ಏ. 16ರಿಂದ ಮೇ 16ರವರೆಗೆ ಮನೆ ಪಟ್ಟಿ ಕ್ಷೇತ್ರ ಕಾರ್ಯ ನಡೆಯಲಿದೆ ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಜೋಯಿಡಾ ತಾಲೂಕಿನಲ್ಲಿ ಪ್ರಾಯೋಗಿಕವಾಗಿ, ಡಿಜಿಟಲ್ ಮೋಡ್‌ನಲ್ಲಿ ಜನಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈ ಅವಧಿಯಲ್ಲಿ ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲವಾಗಿದ್ದು, ಜನಗಣತಿ ಕಾರ್ಯಕ್ಕೆ ನಿಯೋಜಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗದಿತ ಅವಧಿಯೊಳಗೆ ಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ಮಾತನಾಡಿ, ದೇಶದ ಜನಗಣತಿ ಕಾರ್ಯದಲ್ಲಿ ಭಾಗವಹಿಸುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ದೊರೆತ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಂಡು ತಮ್ಮ ಅಧೀನದ ಸಿಬ್ಬಂದಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡುವಂತೆ ತಿಳಿಸಿದರು.

ಜನಗಣತಿ ನಿರ್ದೇಶನಾಲಯದ ಜಂಟಿ ನಿರ್ದೇಶಕ ಶಕ್ತಿ ಕುಮಾರ್, ಜನಗಣತಿಯು ದೇಶದ ಅತಿದೊಡ್ಡ ಸಾರ್ವಜನಿಕ ಅಭ್ಯಾಸ ಚಟುವಟಿಕೆಯಾಗಿದ್ದು, ಗಣತಿದಾರರು ಅತ್ಯಂತ ಎಚ್ಚರಿಕೆಯಿಂದ ದಾಖಲೆಗಳನ್ನು ನಮೂದಿಸಬೇಕು. ದೇಶದಲ್ಲಿ ಅತ್ಯಂತ ತಳಮಟ್ಟದಿಂದ ಮಾಹಿತಿ ಸಂಗ್ರಹಿಸುವ ಏಕೈಕ ಕಾರ್ಯಕ್ರಮ ಇದಾಗಿದ್ದು, ಮುಂದಿನ 10 ವರ್ಷಗಳ ಕಾಲ ದೇಶದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಈ ದಾಖಲೆ ಬಳಕೆಯಾಗಲಿದ್ದು, ಗಣತಿ ಕಾರ್ಯದಲ್ಲಿ ತೊಡಗಿರುವ ಪ್ರತಿಯೊಬ್ಬರೂ ಅತ್ಯಂತ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಸ್ವಾಗತಿಸಿದರು. ಜಿಲ್ಲೆಯ ನೋಡೆಲ್ ಅಧಿಕಾರಿ ರಾಮ್ ಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ ಶಿವಾಜಿ ಜಯಂತ್ಯುತ್ಸವ ಪ್ರಯುಕ್ತ ಬೃಹತ್ ಮೆರವಣಿಗೆ
ಫೆ. 28ಕ್ಕೆಶೈಕ್ಷಣಿಕ ಸಮ್ಮೇಳನ: ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ