ಜೆಜೆಎಂ ಅರೆಬರೆ ಕಾಮಗಾರಿ: ಗುತ್ತಿಗೆದಾರರ ವಿರುದ್ಧ ಕೇಸ್‌ ದಾಖಲು

KannadaprabhaNewsNetwork |  
Published : May 31, 2025, 12:26 AM ISTUpdated : May 31, 2025, 12:27 AM IST
ಹೂವಿನಹಡಗಲಿಯ ತಾಪಂ ಸಭಾಂಗಣದಲ್ಲಿ ಜರುಗಿದ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಜಿಪಂ ಯೋಜನಾ ನಿರ್ದೇಶಕ ಭೀಮಪ್ಪ ಲಾಳಿ.  | Kannada Prabha

ಸಾರಾಂಶ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿಯಲ್ಲಿ ಪ್ರತಿ ಮನೆಗೂ ನಳ ಹಾಕುವ ಕಾಮಗಾರಿ ಅರೆಬರೆ ಮಾಡಿರುವ ಗುತ್ತಿಗೆದಾರರ ವಿರುದ್ಧ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೂವಿನಹಡಗಲಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಅಂಬೇಡ್ಕರ್‌ ಸನಗುಂದ ತಿಳಿಸಿದ್ದಾರೆ.

ಹೂವಿನಹಡಗಲಿ: ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿಯಲ್ಲಿ ಪ್ರತಿ ಮನೆಗೂ ನಳ ಹಾಕುವ ಕಾಮಗಾರಿ ಅರೆಬರೆ ಮಾಡಿರುವ ಗುತ್ತಿಗೆದಾರರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಅಂಬೇಡ್ಕರ್‌ ಸನಗುಂದ ತಿಳಿಸಿದ್ದಾರೆ.

ಇಲ್ಲಿನ ತಾಲೂಕು ಪಂಚಾಯಿತಿ ರಾಜೀವ್‌ ಗಾಂಧಿ ಸಭಾಂಗಣದಲ್ಲಿ ಜಿಪಂ ಯೋಜನಾ ನಿರ್ದೇಶಕ ಭೀಮಪ್ಪ ಲಾಳಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಹಳ್ಳಿಗಳಲ್ಲಿನ ಮನೆಗಳಿಗೆ ನಳ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ನಿಗದಿಯಾಗಿರುವ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಅರೆಬರೆ ಕಾಮಗಾರಿ ಮಾಡಿದ್ದು, ಬೇಕಾಬಿಟ್ಟಿಯಾಗಿ ರಸ್ತೆ ಕಿತ್ತು ಹಾಕಿದ್ದಾರೆ. ಅದನ್ನು ಕೂಡಲೇ ದುರಸ್ತಿ ಮಾಡಬೇಕು ಎಂದು ಗುತ್ತಿಗೆದಾರರಿಗೆ ತಿಳಿಸಿದ್ದರೂ ನಿರ್ಲಕ್ಷಿಸಿದ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಸಭೆಗೆ ತಿಳಿಸಿದರು.

ತಾಲೂಕಿನ ದುಂಗಾವತಿ ತಾಂಡಾದಲ್ಲಿ ಜೆಜೆಎಂ ಕಾಮಗಾರಿ ಕಳೆದ ಒಂದು ವರ್ಷದಿಂದ ನಡೆಯುತ್ತಿತ್ತು. ಈ ಕುರಿತು ಗುತ್ತಿಗೆದಾರರಿಗೆ 7 ಬಾರಿ ನೋಟಿಸ್‌ ನೀಡಿದ್ದರೂ ಕಾಮಗಾರಿ ಸ್ಥಳಕ್ಕೆ ಬಂದಿಲ್ಲ. ಆದ್ದರಿಂದ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ತಾಲೂಕಿನ ವಿವಿಧ ಕಡೆಗಳಲ್ಲಿ ಮುಖ್ಯ ರಸ್ತೆ ಹಾಗೂ ಸಿಸಿ ರಸ್ತೆ ಕಿತ್ತು ಹಾಕಿದ್ದಾರೆ. ಅವುಗಳನ್ನು ಸರಿಯಾಗಿ ದುರಸ್ತಿ ಮಾಡಲು ಸೂಚಿಸಲಾಗಿದೆ. ಗುತ್ತಿಗೆದಾರರು ಸರಿಯಾಗಿ ಕಾಮಗಾರಿ ಮಾಡದಿದ್ದರೆ ಅವರ ವಿರುದ್ಧ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದರು.

ಬಿಸಿಎಂ ಇಲಾಖೆ ವಿಸ್ತರಣಾಧಿಕಾರಿ ಎಂ.ಪಿ.ಎಂ. ಅಶೋಕ ಮಾತನಾಡಿ, ಮಾಗಳ, ಬೂದನೂರು ವಸತಿ ನಿಲಯಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಕೊಳವೆಬಾವಿ ಕೊರೆಸಿ ನೀರಿನ ವ್ಯವಸ್ಥೆ ಮಾಡಬೇಕಿದೆ. ಜತೆಗೆ ಮಾಗಳ, ಬೂದನೂರು, ಕತ್ತೆಬೆನ್ನೂರು ಗ್ರಾಮಗಳ ವಸತಿ ನಿಲಯಗಳಿಗೆ ಕಾಂಪೌಂಡ್‌ ವ್ಯವಸ್ಥೆ ಮಾಡಬೇಕಿದೆ. ಜತೆಗೆ ಕೆಲವು ಕಡೆಗಳಲ್ಲಿ ಶೌಚಾಲಯ ವ್ಯವಸ್ಥೆ ಬೇಕಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ಇಲಾಖೆಗೆ ವಹಿಸಿರುವ ನರೇಗಾ ಕಾಮಗಾರಿ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ನಿಮ್ಮ ವಿರುದ್ಧ ನರೇಗಾ ಆಯುಕ್ತರಿಗೆ ದೂರು ಸಲ್ಲಿಸಬೇಕಾಗುತ್ತದೆ ಎಂದು ಜಿಪಂ ಯೋಜನಾಧಿಕಾರಿ ಭೀಮಪ್ಪ ಲಾಳಿ ಅಧಿಕಾರಿಗೆ ಎಚ್ಚರಿಕೆ ನೀಡಿದರು.

ಸರ್ಕಾರಿ ಶಾಲೆಗಳ ಆಸ್ತಿಗಳನ್ನು ಕಡ್ಡಾಯವಾಗಿ ಇ-ಸ್ವತ್ತು ಮಾಡಬೇಕಿದೆ. ಬಾಕಿ ಉಳಿದಿರುವ ಆಸ್ತಿಗಳ ಸೂಕ್ತ ದಾಖಲೆಗಳನ್ನು ಸಲ್ಲಿಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಭೀಮಪ್ಪ ಹೇಳಿದರು.

ಸಭೆಯಲ್ಲಿ ತಾಪಂ ಇಒ ಎಂ. ಉಮೇಶ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ