ಜಾತಿಗಣತಿ ಅತ್ಯಂತ ಅವೈಜ್ಞಾನಿಕ: ಸೋಮಶೇಖರರೆಡ್ಡಿ

KannadaprabhaNewsNetwork |  
Published : Mar 02, 2024, 01:51 AM IST
ಜಿ. ಸೋಮಶೇಖರ ರೆಡ್ಡಿ | Kannada Prabha

ಸಾರಾಂಶ

ನಮ್ಮ ಮನೆಗೆ ಯಾರೂ ಬಂದು ಸಮೀಕ್ಷೆ ಮಾಡಿಲ್ಲ. ನನ್ನಂತೆ ಅನೇಕರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ: ರಾಜ್ಯ ಹಿಂದುಳಿದ ವರ್ಗಗಳ ಆಯೊಗ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಜಾತಿಗಣತಿ ಅತ್ಯಂತ ಅವೈಜ್ಞಾನಿಕವಾಗಿದ್ದು, ಈ ಬಗ್ಗೆ ಕಾಂಗ್ರೆಸ್‌ನ ಅನೇಕ ನಾಯಕರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ನಗರದ ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ನಿರ್ದಿಷ್ಟ ಸಮುದಾಯದ ಓಲೈಕೆ ಮಾಡಲು ಜಾತಿ ಸಮೀಕ್ಷೆ ನಡೆಸಿದಂತಾಗಿದೆ. ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿಲ್ಲ. ನಮ್ಮ ಮನೆಗೆ ಯಾರೂ ಬಂದು ಸಮೀಕ್ಷೆ ಮಾಡಿಲ್ಲ. ನನ್ನಂತೆ ಅನೇಕರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗಾದರೆ, ಕಾಂಗ್ರೆಸ್ ಪಕ್ಷದ ಮನೆಯಲ್ಲಿಯೇ ಕುಳಿತು ಸಮೀಕ್ಷೆ ಮಾಡಿತೇ ಎಂದು ಪ್ರಶ್ನಿಸಿದರು.

ನಾಸಿರ್ ಹುಸೇನ್ ನಡೆ ಖಂಡನೀಯ: ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಅತ್ಯಂತ ಖಂಡನೀಯ. ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸದ ನಾಸಿರ್ ಹುಸೇನ್, ಮಾಧ್ಯಮಗಳ ಮೇಲೆ ಹರಿಹಾಯ್ದಿದ್ದಾರೆ. ಅದು ಅತ್ಯಂತ ನಾಚಿಕೆಗೇಡಿನ ಸಂಗತಿ. ಪಾಕ್ ಪರ ಘೋಷಣೆ ಕೂಗಿದರೂ ಅವರ ಪರ ಧ್ವನಿ ಎತ್ತದ ನಾಸಿರ್ ಹುಸೇನ್ ಬಳ್ಳಾರಿಯ ಮರ್ಯಾದೆ ತೆಗೆದಿದ್ದಾರೆ ಎಂದು ಟೀಕಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರದ ಖಜಾನೆ ಖಾಲಿಯಾಗಿದೆ. ಸರ್ಕಾರದ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗುತ್ತಿದ್ದು, ಅಭಿವೃದ್ಧಿ ಯೋಜನೆಗಳಿಗೆ ಹಣವಿಲ್ಲದಂತಾಗಿದೆ.

ಪರಿಶಿಷ್ಟ ಜಾತಿ, ಪಂಗಡದ ಕಲ್ಯಾಣಕ್ಕೆಂದು ಮೀಸಲಾಗಿದ್ದ ಹಣವನ್ನು ಸಹ ಬಳಕೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರದ ವೈಫಲ್ಯದಿಂದ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ. ಬರಗಾಲ ನಿರ್ವಹಣೆ ಇವರಿಗೆ ಸಾಧ್ಯವಾಗಿಲ್ಲ ಎಂದು ದೂರಿದರು.

100 ಸ್ಥಾನಗಳು ಸಹ ಗೆಲ್ಲುವುದಿಲ್ಲ: ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಕೂಟ 100 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಕೇಂದ್ರದ ಮಹತ್ವದ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ದೇಶದಲ್ಲಿ 10ರಿಂದ 11 ಕೋಟಿ ಶೌಚಾಲಯಗಳ ನಿರ್ಮಾಣ, ಸೈನಿಕರಿಗೆ ಅತ್ಯಾಧುನಿಕ ಶಸ್ತ್ರಾಗಳ ಪೂರೈಕೆ, ದೇಶ ನಿವಾಸಿಗಳ ತಲಾ ವರಮಾನ ಹೆಚ್ಚಳ, ಮಹಿಳಾ ಕಲ್ಯಾಣ ಯೋಜನೆಗಳು ಸೇರಿದಂತೆ ಈವರೆಗೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತು ಜನರಿಗೆ ತಿಳಿಸಿಕೊಡಲಾಗುವುದು ಎಂದರು.

ಪಕ್ಷದ ಮುಖಂಡ ಕೆ.ಎ. ರಾಮಲಿಂಗಪ್ಪ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಜನರು ಸಹ ಬಿಜೆಪಿಗೆ ಮತ ನೀಡುತ್ತಾರೆ. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಾಥ್ ನೀಡಲಿದ್ದಾರೆ ಎಂದರು. ಪಕ್ಷದ ಮುಖಂಡರಾದ ಡಾ. ಬಿ.ಕೆ. ಸುಂದರ್, ಗುತ್ತಿಗನೂರು ವಿರುಪಾಕ್ಷಗೌಡ, ಗಾಳಿ ಶಂಕ್ರಪ್ಪ, ಉಡೇದ ಸುರೇಶ್ ತೋರಣಗಲ್, ಓಬಳೇಶ್ ಸುದ್ದಿಗೋಷ್ಠಿಯಲ್ಲಿದ್ದರು.

ಆತ್ಮಸಾಕ್ಷಿಗೆ ಮತ ಹಾಕಿದ್ದಾರಂತೆ....

ಮಾಜಿ ಸಚಿವ ಜರ್ನಾದನ ರೆಡ್ಡಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತದಾನ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿ. ಸೋಮಶೇಖರ ರೆಡ್ಡಿ, "ಆತ್ಮಸಾಕ್ಷಿಗೆ ಮತದಾನ ಮಾಡಿದ್ದಾರಂತೆ " ಆತ್ಮಸಾಕ್ಷಿ ಒಳಗೆ ಇರುತ್ತದೆ. ಹೀಗಾಗಿ ನಮಗೆ ಗೊತ್ತಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

ಜನಾರ್ದನರೆಡ್ಡಿ ಪಕ್ಷ ಸೇರ್ಪಡೆ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ವರಿಷ್ಠರು ಕೇಳಿದರೆ ಪಕ್ಷಕ್ಕೆ ಸೇರಿಸಿಕೊಂಡರೆ ಒಳ್ಳೆಯದಾಗುತ್ತದೆ ಎಂದೇ ಹೇಳುತ್ತೇನೆ. ಆದರೆ, ಪಕ್ಷ ಸೇರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದರು.

ಕಳೆದ ಚುನಾವಣೆಯಲ್ಲಿ ನಾನು ಕೆಆರ್‌ಪಿಪಿ ಅಭ್ಯರ್ಥಿ ಸ್ಪರ್ಧೆಯಿಂದಾಗಿ ಸೋತಿಲ್ಲ. ಕಾಂಗ್ರೆಸ್‌ನ ಗ್ಯಾರಂಟಿಗಳಿಂದಾಗಿ ಸೋತ್ತಿದ್ದೇನೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ