ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಮುಖಂಡರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ತಾಲೂಕು ಜೆಡಿಎಸ್ ಅಧ್ಯಕ್ಷ ಎ.ಎನ್.ಜಾನಕೀರಾಂ, ಕ್ಷೇತ್ರದ ಕಾಂಗ್ರೆಸ್ಸಿಗರು ತಾಲೂಕಿನ ಪ್ರಗತಿಗೆ ವಿರುದ್ಧವಾಗಿದ್ದಾರೆ ಎಂದು ಕಿಡಿಕಾರಿದರು.
ಬೂಕನಕೆರೆ ಹೋಬಳಿಯಲ್ಲಿ ಸಣ್ಣ ನೀರಾವರಿ ಇಲಾಖೆ ಇರುವುದಕ್ಕೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ವಿಜಯ ಭಾಸ್ಕರ್ ಆಕ್ಷೇಪಿಸಿದ್ದಾರೆ. ಅದನ್ನೆ ನೆಪವಾಗಿರಿಸಿ ಸಚಿವ ಎನ್.ಚಲುವರಾಯಸ್ವಾಮಿ ನಮ್ಮ ತಾಲೂಕಿನ ಕಚೇರಿಯನ್ನು ತಮ್ಮ ಸ್ವ-ಕ್ಷೇತ್ರಕ್ಕೆ ಕಿತ್ತುಕೊಂಡು ಹೋಗುವ ಬದಲು ಅದನ್ನು ಕೆ.ಆರ್.ಪೇಟೆ ಪಟ್ಟಣಕ್ಕೆ ವರ್ಗಾಯಿಸಬಹುದಿತ್ತು ಎಂದರು.ಕಾಂಗ್ರೆಸ್ ಮುಖಂಡ ಬಿ.ಎಲ್.ದೇವರಾಜು ಅವರಿಗೆ ತಾಲೂಕಿನ ಬಗ್ಗೆ ಕಾಳಜಿ ಇದ್ದರೆ ನಮ್ಮ ಕ್ಷೇತ್ರದ ಕಚೇರಿಯನ್ನು ಸಚಿವರು ಕಿತ್ತುಕೊಂಡು ಹೋಗಿರುವುದನ್ನು ಸಮರ್ಥಿಸಿಕೊಳ್ಳುವ ಬದಲು ಸಚಿವರ ಮನವೊಲಿಸಿ ಅದನ್ನು ಕೆ.ಆರ್.ಪೇಟೆ ಪಟ್ಟಣಕ್ಕೆ ಸ್ಥಳಾಂತರಿಸುವಂತೆ ವ್ಯವಹರಿಸಬೇಕಾಗಿತ್ತು. ಬಿ.ಎಲ್.ದೇವರಾಜು ಅವರಿಗೆ ಕ್ಷೇತ್ರದ ಪ್ರಗತಿಗಿಂತ ಸಚಿವರನ್ನು ಮೆಚ್ಚಿಸುವುದೇ ಮುಖ್ಯವಾಗಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಮುಖಂಡ ಬಿ.ಎಲ್.ದೇವರಾಜು ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಸಣ್ಣ ನೀರಾವರಿ ಇಲಾಖೆ ತಾಲೂಕಿನಲ್ಲಿಯೇ ಉಳಿಯುವಂತೆ ಪ್ರಯತ್ನಿಸುವಂತೆ ಕಿವಿಮಾತು ಹೇಳಿದರು.
ಕಾಂಗ್ರೆಸ್ ಮುಖಂಡರು ತಾಲೂಕಿನ ಸ್ವತ್ತನ್ನು ಉಳಸಿಕೊಳ್ಳಲು ಹೋರಾಡುವ ಬದಲು ತಮ್ಮ ರಾಜಕೀಯ ಸ್ವಾರ್ಥಕ್ಕೆ ಅದನ್ನು ಸಮರ್ಥಿಸಿಕೊಂಡಿದ್ದಾರೆ. ಸಚಿವರು ಸ್ಥಳಾಂತರಗೊಂಡಿರುವ ಸಣ್ಣ ನೀರಾವರಿ ಇಲಾಖೆ ಆದೇಶವನ್ನು ಹಿಂಪಡೆದು ಅದನ್ನು ಬೂಕನಕೆರೆಯಲ್ಲಿಯೇ ಉಳಿಸಬೇಕು. ಅದು ಸಾಧ್ಯವಿಲ್ಲದಿದ್ದರೆ ಕೆ.ಆರ್.ಪೇಟೆ ಪಟ್ಟಣಕ್ಕೆ ಸ್ಥಳಾಂತರಿಸಬೇಕು. ಇಲ್ಲದಿದ್ದರೆ ಬೂಕನಕೆರೆ ಗ್ರಾಮದ ಜನ ಹೋರಾಟಕ್ಕಿಳಿಯುವುದಾಗಿ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಟಿಎಪಿಸಿಎಂಎಸ್ ನಿರ್ದೇಶಕ ಟಿ.ಬಲದೇವ್, ಜೆಡಿಎಸ್ ಯುವ ಮುಖಂಡ ಅಲೋಕ್, ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ.ಅಶೋಕ್, ಟಿಎಪಿಎಂಎಸ್ ನಿರ್ದೇಶಕ ಕೊರಟೀಗೆರೆ ದಿನೇಶ್, ಜೆಡಿಎಸ್ ವಿವಿಧ ಹೋಬಳಿ ಘಟಕಗಳ ಅಧ್ಯಕ್ಷರಾದ ವಸಂತಕುಮಾರ್, ರವಿಕುಮಾರ್ ಸೇರಿದಂತೆ ಹಲವರು ಇದ್ದರು.