ಕನ್ನಡಪ್ರಭ ವಾರ್ತೆ ಮಂಡ್ಯ
ಮಂಗಳವಾರ ನಗರದ ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ತಿಂಗಳು ಮಾಲಿನ್ಯ ನಿಯಂತ್ರಣ ಮಂಡಳಿ ಕಾವೇರಿ ನದಿ ಮತ್ತು ಅದರ ಉಪ ನದಿಗಳ ನೀರಿನ ಗುಣಮಟ್ಟವನ್ನು ೪೭ ಸ್ಥಳಗಳಲ್ಲಿ ಮಾಪನ ಮಾಡಿ ನೀರಿನ ಗುಣಮಟ್ಟವನ್ನು ಪ್ರಾದೇಶಿಕ ಪ್ರಯೋಗಾಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಆ ಪ್ರಕಾರ ನದಿ ನೀರು ಕುಡಿಯುವುದಕ್ಕೂ ಯೋಗ್ಯವಾಗಿಲ್ಲದಷ್ಟು ಹಾಳಾಗಿದೆ ಎಂದರು.
ಜಿಲ್ಲೆಯ ಆಲೆಮನೆಗಳಲ್ಲಿ ಹಿಂದೆ ಕಬ್ಬಿನ ಸಿಪ್ಪೆಯನ್ನು ಉರುವಲಾಗಿ ಬಳಸಲಾಗುತ್ತಿತ್ತು. ಈಗ ಹಳೆಯ ಟೈರ್ಗಳು, ರಬ್ಬರ್ಗಳು ಮತ್ತಿತರ ಅಪಾಯಕಾರಿ ಹೊಗೆ ಹೊರಸೂಸುವ ವಸ್ತುಗಳನ್ನು ಬಳಸಲಾಗುತ್ತಿದೆ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಈ ಬಗ್ಗೆ ಬೆಲ್ಲ ಉತ್ಪಾದಕರು, ರೈತರು ಜಾಗೃತರಾಗಬೇಕು ಎಂದು ಸಲಹೆ ನೀಡಿದರು.ಮಂಡ್ಯ ಜಿಲ್ಲೆಯಲ್ಲಿ ೩೧ ಬೃಹತ್, ೧೪ ಮಧ್ಯಮ ಮತ್ತು ೬೫೨ ಸಣ್ಣ ಕಾರ್ಖಾನೆಗಳಿದ್ದು, ಅವುಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಸಂಸ್ಕರಿಸಲು ಶುದ್ಧೀಕರಣ ಘಟಕವನ್ನು ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಸಂಸ್ಕರಿಸಿದ ನೀರನ್ನು ಕಾರ್ಖಾನೆಯ ಆವರಣದಲ್ಲಿ ಹಾಗೂ ಕೈಗಾರಿಕೆ ಚಟುವಟಿಕೆಗೆ ಉಪಯೋಗಿಸಿಕೊಳ್ಳಲಾಗುತ್ತಿದೆ. ಕಾರ್ಖಾನೆಯ ಅವರಣದಿಂದ ತ್ಯಾಜ್ಯ ನೀರು ಹೊರಹೊಗದಂತೆ ನಿರ್ಬಂಧನೆಯನ್ನು ವಿಧಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಇಂದಿರಾ ಗಾಂಧಿ ಅವರು ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪನೆ ಮಾಡಿರುವುದು ಮಾತ್ರವಲ್ಲ, ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹಲವು ಕಾಯಿದೆಗಳನ್ನು ಜಾರಿಗೆ ತಂದರು. ೧೯೭೨ರಲ್ಲಿ ರಾಷ್ಟ್ರೀಯ ಪರಿಸರ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಿದರು. ಅದೇ ವರ್ಷ ಅಳಿವಿನಂಚಿನಲ್ಲಿರುವ ಪ್ರಾಣಿ-ಪಕ್ಷಿಗಳ ಪ್ರಭೇದಗಳನ್ನು ರಕ್ಷಿಸಲು ವನ್ಯಜೀವಿ ಸಂರಕ್ಷಣಾ ಕಾಯ್ದೆ - ೧೯೭೨ನ್ನು ಜಾರಿಗೆ ತಂದರು. ೧೯೭೩ರಲ್ಲಿ ಅಳಿವಿನಂಚಿನಲ್ಲಿರುವ ಹುಲಿಗಳನ್ನು ಮತ್ತು ಅವುಗಳ ಆವಾಸಸ್ಥಾನಗಳನ್ನು ರಕ್ಷಿಸಲು ಪ್ರಾಜೆಕ್ಟ್ ಟೈಗರ್ ಎಂಬ ವನ್ಯಜೀವಿ ಸಂರಕ್ಷಣಾ ಯೋಜನೆಯನ್ನು ರೂಪಿಸಿದರು. ಅದೇ ವರ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧೀನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿದರು. ೧೯೮೧ರಲ್ಲಿ ವಾಯು (ಮಾಲಿನ್ಯ ತಡೆ ಮತ್ತು ನಿಯಂತ್ರಣ) ಕಾಯ್ದೆ ಜಾರಿಗೆ ತಂದರು. ಸುವರ್ಣ ಮಹೋತ್ಸವದ ವೇಳೆ ಈ ಕಾಯಿದೆಗಳನ್ನು ಹಾಗೂ ಕಾಯಿದೆಗಳನ್ನು ಜಾರಿಗೆ ತಂದ ಇಂದಿರಾ ಗಾಂಧಿ ಅವರನ್ನು ಸ್ಮರಿಸುವುದು ಮಂಡಳಿಯ ಉದ್ದೇಶ ಎಂದು ವಿವರಿಸಿದರು.