ವಿಶ್ವನಾಥ ಮಲೇಬೆನ್ನೂರು
ಕಳೆದ ಬೇಸಿಗೆ ಅವಧಿಯಲ್ಲಿ ಭೀಕರ ಕುಡಿಯುವ ನೀರಿನ ಸಮಸ್ಯೆ ಎದುರಿಸಿದ 110 ಹಳ್ಳಿಗಳಿಗೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಕಾವೇರಿ ನೀರು ಸಿಗುವ ನಿರೀಕ್ಷೆ ಇದೆ.
ಸದ್ಯ ನಗರಕ್ಕೆ ದಿನನಿತ್ಯ 1,450 ಎಂಎಲ್ಡಿ ಕಾವೇರಿ ನೀರು ಪೂರೈಸುತ್ತಿರುವ ಜಲಮಂಡಳಿಯು, ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಕೊಡುವ ಉದ್ದೇಶದಿಂದ ಹೆಚ್ಚುವರಿ 775 ಎಂಎಲ್ಡಿ ನೀರು ಪೂರೈಕೆಗೆ ಕಾವೇರಿ 5ನೇ ಹಂತದ ಯೋಜನೆ ಆರಂಭಿಸಿ ಕಾಮಗಾರಿ ನಡೆಸುತ್ತಿದ್ದು, ಬಹುತೇಕ ಪೂರ್ಣಗೊಂಡಿದೆ. ಆದರೆ, ಪ್ರಾಯೋಗಿಕವಾಗಿ ನೀರು ಹರಿಸುವುದು ಸೇರಿದಂತೆ ಮೊದಲಾದ ಕೆಲಸ ಬಾಕಿ ಇದ್ದು, ಆಗಸ್ಟ್ 15ರ ವೇಳೆಗೆ ನೀರು ಪೂರೈಕೆ ಆರಂಭಗೊಳ್ಳಲಿದೆ ಎಂದು ಬೆಂಗಳೂರು ಜಲಮಂಡಳಿಯ ಉನ್ನತ ಮೂಲಗಳು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿವೆ.ಈಗಾಗಲೇ ಕಾವೇರಿ 5ನೇ ಹಂತದ ನೀರು ಟಿ.ಕೆ.ಹಳ್ಳಿ ವರೆಗೆ ಬಂದಿದೆ. ಪಂಪ್ ಹೌಸ್ ಗಳಿಗೆ ವಿದ್ಯುತ್ ಸಂಪರ್ಕ ಹಾಗೂ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಲವು ಕಾಮಗಾರಿ ಬಾಕಿ ಇದೆ. ಹೆದ್ದಾರಿ ಪ್ರಾಧಿಕಾರದಿಂದ ಈ ಕಾಮಗಾರಿ ನಡೆಯಬೇಕಿದೆ. ಕಾಮಗಾರಿಗೆ ಸಂಬಂಧಿಸಿದಂತೆ ಹಣವನ್ನು ಜಲಮಂಡಳಿಯೂ ಈಗಾಗಲೇ ಪಾವತಿ ಮಾಡಿದೆ. ಮಳೆ ಹಾಗೂ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಮಿಕರ ಕೊರತೆ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದೆ.
ಈಗಾಗಲೇ 110 ಹಳ್ಳಿ ವ್ಯಾಪ್ತಿಯಲ್ಲಿ ಕಾವೇರಿ ನೀರು ಪೂರೈಕೆಯ ಕೊಳವೆ ಹಾಗೂ ಒಳಚರಂಡಿ ಕೊಳವೆ ಅಳವಡಿಕೆ ಮಾಡಲಾಗಿದೆ. ಹೈಡ್ರೋ ಪರೀಕ್ಷೆ ಮೂಲಕ ಕೊಳವೆ ಪರಿಶೀಲನೆ ಸಹ ಮುಕ್ತಾಯಗೊಂಡಿದೆ. ಜುಲೈ 3ನೇ ವಾರದಿಂದ ಪ್ರಾಯೋಗಿಕವಾಗಿ 110 ಹಳ್ಳಿಗಳಿಗೆ ನೀರು ಪೂರೈಕೆ ಆರಂಭಿಸಲಾಗುತ್ತದೆ. ಯಶಸ್ವಿಯಾದರೆ ಆಗಸ್ಟ್ 2ನೇ ವಾರದಲ್ಲಿ 110 ಹಳ್ಳಿ ಜನರಿಗೆ ಕಾವೇರಿ ನೀರು ಲಭ್ಯವಾಗಲಿದೆ.
110 ಹಳ್ಳಿ ವ್ಯಾಪ್ತಿಯಲ್ಲಿ ಒಟ್ಟು 4 ಲಕ್ಷ ಮನೆಗಳಿವೆ. ಈಗಾಗಲೇ 4ನೇ ಹಂತದಲ್ಲಿ ಉಳಿತಾಯ ಮಾಡುವ ಕಾವೇರಿ ನೀರನ್ನು 110 ಹಳ್ಳಿ ವ್ಯಾಪ್ತಿಯಲ್ಲಿ ಜಲಮಂಡಳಿಯ ಸಂಪರ್ಕ ಪಡೆದವರಿಗೆ ವಾರದಲ್ಲಿ ಒಂದೆರಡು ದಿನ ಪೂರೈಕೆ ಮಾಡಲಾಗುತ್ತಿದೆ. ಇನ್ನೊಂದು ತಿಂಗಳಲ್ಲಿ ಕಾವೇರಿ ನೀರು ಸಂಪೂರ್ಣವಾಗಿ ಪೂರೈಕೆ ಆಗಲಿದೆ.
===
ಮಂಡಳಿಗೆ ಆರ್ಥಿಕ ಹೊರೆ!
==
110 ಹಳ್ಳಿ ವ್ಯಾಪ್ತಿಯಲ್ಲಿ ಕಾವೇರಿ ನೀರಿನ ಪೂರೈಕೆಗೆ ಚಾಲನೆ ದೊರೆತ ಬಳಿಕ ವಾರ್ಡ್ ಮಟ್ಟದಲ್ಲಿ ಜಲಮಂಡಳಿಗಳಿಂದ ಶಿಬಿರಗಳನ್ನು ಆಯೋಜಿಸಿ ನೀರು ಪೂರೈಕೆ ಸಂಪರ್ಕದ ಶಿಬಿರಗಳನ್ನು ನಡೆಸಲಾಗುವುದು. ಆಗ ಹೆಚ್ಚಿನ ಸಂಖ್ಯೆಯಲ್ಲಿ ನೀರಿನ ಸಂಪರ್ಕ ಪಡೆಯುವುದಕ್ಕೆ ಜನ ಮುಂದೆ ಬರಲಿದ್ದಾರೆ. ಈ ಹಿಂದೆ 4ನೇ ಹಂತದ ಕಾವೇರಿ ನೀರು ಪೂರೈಕೆ ಮಾಡಿದ ಸಂದರ್ಭದಲ್ಲಿಯೂ ಇದೇ ರೀತಿ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.