ಸಿಬಿಐನಿಂದ ಶೀಘ್ರದಲ್ಲೇ ನಾಗೇಂದ್ರ ವಿಚಾರಣೆ?

KannadaprabhaNewsNetwork | Updated : Jul 04 2024, 11:58 AM IST

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತು ಸಿಬಿಐ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

 ಬೆಂಗಳೂರು :  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತು ಸಿಬಿಐ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಪೂರ್ವ ವಲಯದ ಉಪಪ್ರಧಾನ ವ್ಯವಸ್ಥಾಪಕ ಜೆ.ಮಹೇಶ್‌ ನೀಡಿದ ದೂರಿನನ್ವಯ ಎಂ.ಜಿ.ರಸ್ತೆ ಶಾಖೆಯ ಮುಖ್ಯ ವ್ಯವಸ್ಥಾಪಕಿ ಸುಚಿಸ್ಮಿತಾ ರಾವಲ್‌, ಉಪ ವ್ಯವಸ್ಥಾಪಕಿ ಡಿ.ದೀಪಾ, ಅಧಿಕಾರಿ ವಿ.ಕೃಷ್ಣಮೂರ್ತಿ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ಈಗಾಗಲೇ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಕೈಗೊಂಡಿದೆ. ಆರೋಪಿಗಳ ವಿರುದ್ಧ ವಂಚನೆ, ಒಳಸಂಚು, ನಕಲಿ ದಾಖಲೆ ಸೃಷ್ಟಿ, ಅವ್ಯವಹಾರ ಆರೋಪಗಳ ಅನ್ವಯ ತನಿಖೆ ನಡೆಸಲಾಗುತ್ತಿದೆ.

ನಾಗೇಂದ್ರ ಅವರು ಹೊಣೆ ಹೊತ್ತಿದ್ದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿ ಅಡಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಬರುವುದರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸುವ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ಅವರನ್ನೂ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸದ್ಯಕ್ಕೆ ಪ್ರಕರಣಕ್ಕೆ ಸಂಬಂಧಪಟ್ಟವರ ವಿಚಾರಣೆ ನಡೆಸಿ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮತ್ತಷ್ಟು ಮಾಹಿತಿ ಪಡೆದ ಬಳಿಕ ನಾಗೇಂದ್ರ ಅವರನ್ನು ವಿಚಾರಣೆಗೊಳಪಡಿಸಲಾಗುತ್ತದೆ. ಅಲ್ಲದೇ, ನಿಗಮದ ಅಧ್ಯಕ್ಷರಾಗಿರುವ ಶಾಸಕ ಬಸನಗೌಡ ದದ್ದಲ್ ಅವರನ್ನು ಸಹ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26ರಂದು ಶಿವಮೊಗ್ಗದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ ನೋಟ್‌ನಲ್ಲಿ ಬ್ಯಾಂಕ್‌ನ ಅಧಿಕಾರಿಗಳ ಹೆಸರು ಮತ್ತು ಸಚಿವರು ಎಂದು ಉಲ್ಲೇಖಿಸಿದ್ದರು. ಚಂದ್ರಶೇಖರನ್ ಆತ್ಮಹತ್ಯೆ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾದ ಬಳಿಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ಬಿ.ನಾಗೇಂದ್ರ ಜೂ.6 ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Share this article