ಸಿಬಿಎಸ್‌ಇ: ಜ್ಞಾನಸುಧಾ ಶಾಲೆ 118 ಮಕ್ಕಳು ಅಗ್ರಶ್ರೇಣಿ

KannadaprabhaNewsNetwork | Published : May 15, 2024 1:38 AM

ಸಾರಾಂಶ

ಬೀದರ್‌ನ ಮಾಮನಕೇರಿಯಲ್ಲಿರುವ ಜ್ಞಾನಸುಧಾ ವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಬೀದರ್‌

ಪ್ರಸಕ್ತ ಸಾಲಿನ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆಯಲ್ಲಿ ಬೀದರ್ ಜಿಲ್ಲೆಯ ಪ್ರತಿಷ್ಠಿತ ಶಾಲೆ ಜ್ಞಾನಸುಧಾ ವಿದ್ಯಾಲಯ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದಿದ್ದು, ವಿದ್ಯಾಲಯದ ವಿದ್ಯಾರ್ಥಿನಿಯಾದ ಸೃಷ್ಟಿ ಶಿವಾನಂದ ಶೇ. 98ರಷ್ಟು ಫಲಿತಾಂಶ ಗಳಿಸುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆಗೈದಿದ್ದಾರೆ.

ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಗೆ ಜ್ಞಾನಸುಧಾ ವಿದ್ಯಾಲಯದ ಒಟ್ಟು 183 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರಲ್ಲಿ 118 ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿ ಅಮೋಘ ಸಾಧನೆ ಮಾಡಿದ್ದಾರೆ. 59 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಜ್ಞಾನಸುಧಾ ವಿದ್ಯಾಲಯದ ವಿದ್ಯಾರ್ಥಿನಿಯಾದ ಸೃಷ್ಟಿ ಶಿವಾನಂದ ಶೇ. 98ರಷ್ಟು ಫಲಿತಾಂಶ ಪಡೆದು ಜಿಲ್ಲೆಯಲ್ಲೇ ಟಾಪರ್ ಆಗಿ ಹೊರಹೊಮ್ಮಿದ್ದು, ಈ ವಿದ್ಯಾರ್ಥಿನಿ ಕನ್ನಡದಲ್ಲಿ 100ಕ್ಕೆ 100ರಷ್ಟು ಅಂಕ ಪಡೆದರೆ, ವಿಜ್ಞಾನ ಮತ್ತು ಸಮಾಜವಿಜ್ಞಾನದಲ್ಲಿ 99, ಗಣಿತ ಮತ್ತು ಇಂಗ್ಲಿಷ್ ವಿಷಯದಲ್ಲಿ 95 ಅಂಕ ಪಡೆದು ಶಾಲೆಗೆ ಅಷ್ಟೇ ಅಲ್ಲದೇ ಜಿಲ್ಲೆಗೆ ಪ್ರಥಮ ಸ್ಥಾನ ಬಂದು ಜಿಲ್ಲೆಯಾದ್ಯಂತ ಜ್ಞಾನಸುಧಾ ವಿದ್ಯಾಲಯದ ಕೀರ್ತಿ ಇನ್ನಷ್ಟು ಇಮ್ಮಡಿಗೊಳಿಸಿದ್ದಾರೆ.

ವಿದ್ಯಾಲಯದ 30 ವಿದ್ಯಾರ್ಥಿಗಳು ಶೇ.90ಕ್ಕೂ ಅಧಿಕ ಫಲಿತಾಂಶ ಪಡೆದರೆ, 36 ವಿದ್ಯಾರ್ಥಿಗಳು ಶೇ.85 ರಿಂದ ಶೇ.89ರ ವರೆಗೆ, 52 ವಿದ್ಯಾರ್ಥಿಗಳು ಶೇ. 75 ರಿಂದ ಶೇ. 84 ರಷ್ಟು, 59 ವಿದ್ಯಾರ್ಥಿಗಳು ಶೇ 60 ರಿಂದ ಶೇ 74 ರಷ್ಟು ಫಲಿತಾಂಶ ಗಳಿಸಿ ಎಲ್ಲರ ಗಮನಸೆಳೆದಿದ್ದಾರೆ.

ಗಣಿತ ಮತ್ತು ಕನ್ನಡ ವಿಷಯದಲ್ಲಿ ಒಬ್ಬ ವಿದ್ಯಾರ್ಥಿ ಪೂರ್ಣಾಂಕ ಗಳಿಸಿದರೆ, ಸಮಾಜವಿಜ್ಞಾನದಲ್ಲಿ 8 ವಿದ್ಯಾರ್ಥಿಗಳು, ಕನ್ನಡದಲ್ಲಿ ಐವರು, ಇಂಗ್ಲಿಷ್ ಮತ್ತು ಗಣಿತದಲ್ಲಿ ಓರ್ವ ವಿದ್ಯಾರ್ಥಿ 100ರ ಪೈಕಿ 99 ಅಂಕ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ:

ಮಾಮನಕೇರಿಯಲ್ಲಿರುವ ಜ್ಞಾನಸುಧಾ ವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ ಸಮಾರಂಭದಲ್ಲಿ ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸನ್ಮಾನ ಸಮಾರಂಭದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಪೂರ್ಣಿಮಾ ಜಿ. ಮಾತನಾಡಿ, ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ನಮ್ಮ ವಿದ್ಯಾಲಯದ ವಿದ್ಯಾರ್ಥಿನಿ ಸೃಷ್ಟಿ ಶಿವಾನಂದ ಶೇ.98ರಷ್ಟು ಫಲಿತಾಂಶ ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಬಂದು ಜಿಲ್ಲೆಯಲ್ಲಿ ವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ. ನಮ್ಮ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವ ಕಾರಣ, ಶಿಕ್ಷಕರ ಪರಿಶ್ರಮ ಹಾಗೂ ಪಾಲಕರ ಸಹಕಾರದಿಂದಾಗಿ ನಮ್ಮ ವಿದ್ಯಾಲಯದ ವಿದ್ಯಾರ್ಥಿಗಳು ಈ ವರ್ಷದ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಜ್ಞಾನಸುಧಾ ವಿದ್ಯಾಲಯದ ನಿರ್ದೇಶಕರಾದ ಡಾ. ಮುನೇಶ್ವರ ಲಾಖಾ ಮಾತನಾಡಿ, 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ವಾತಾವರಣ ಹೊಂದಿರುವ, ಒಳ್ಳೆಯ ರೀತಿಯಿಂದ ಮಾರ್ಗದರ್ಶನ ಕಲ್ಪಿಸುವ ಪದವಿಪೂರ್ವ ಕಾಲೇಜಿನಲ್ಲಿ ಮಾತ್ರ ಪ್ರವೇಶ ಪಡೆಯಬೇಕು. ಅಂದಾಗ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯ ಟಾಪರ್ ಆಗಿ ಹೊರಹೊಮ್ಮಿದ ವಿದ್ಯಾರ್ಥಿನಿ ಸೃಷ್ಟಿ ಶಿವಾನಂದ ತಮ್ಮ ಅನಿಸಿಕೆ ಹಂಚಿಕೊಂಡರು.

ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಶ್ರೀಕಾಂತ ರೆಡ್ಡಿ, ಜ್ಞಾನಸುಧಾ ವಿದ್ಯಾಲಯದ ಪ್ರಾಚಾರ್ಯರಾದ ಸುನೀತಾ ಸ್ವಾಮಿ, ಮೇಲ್ವಿಚಾರಕರಾದ ರಜನಿ, ಸಾಯಿಗೀತಾ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಪಾಲ್ಗೊಂಡಿದ್ದರು.

Share this article