ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 15 ರಂದು ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥ ಪೂರ್ಣವಾಗಿ ಹಾಗೂ ಹಬ್ಬದ ಸಂಭ್ರಮದಂತೆ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿಯ ಸ್ವಾತಂತ್ರ್ಯ ಮಹೋತ್ಸವದ ದಿನಾಚರಣೆಯನ್ನು ಹಬ್ಬದಂತೆ ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ ಎ₹ದರು.ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ
ಧ್ವಜಾರೋಹಣ, ಗೌರವ ವಂದನೆ, ಪೊಲೀಸ್ ಕವಾಯತು, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎಂದಿನಂತೆಯೇ ಆಯೋಜಿಸಲು ಹಾಗೂ ಶಾಲಾ ಕಾಲೇಜುಗಳಲ್ಲಿ ಪೂರ್ವಭಾವಿಯಾಗಿ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಸನ್ಮಾನಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಇದಕ್ಕೆ ಪೂರ್ವ ಸಿದ್ಧತೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು. ಅಂದು ಕ್ರೀಡಾಂಗಣದಲ್ಲಿ ತುರ್ತು ಅರೋಗ್ಯ ಸೇವೆಗೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಮುನ್ನೆಚ್ಚರಿಕಾ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ,ಶಿಷ್ಟಚಾರ ರೀತ್ಯಾ ಆಹ್ವಾನ ಪತ್ರಿಕೆಗಳ ಮುದ್ರಣ, ವಿತರಣೆ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ಕ್ರೀಡಾಂಗಣ ಸ್ವಚ್ಛತೆ ಇನ್ನಿತರೆ ಸಿದ್ಧತಾ ಕಾರ್ಯಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ ಈ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಅಗತ್ಯ ಸೌಲಭ್ಯಗಳ ವ್ಯವಸ್ಥೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಮೂಲ ಭೂತ ಸೌಕರ್ಯ ಒದಗಿಸಲು ಮುಖ್ಯವಾಗಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸುವುದು, ವಿದ್ಯುತ್ ವ್ಯತ್ಯಯ ಆಗದಂತೆ ಹಾಗೂ ಸನ್ಮಾನಕ್ಕೆ ಯಾವ ಕ್ಷೇತ್ರದವರನ್ನು ಆಯ್ಕೆ ಮಾಡಬೇಕು ಎಂಬುದನ್ನು ಉಪವಿಭಾಗಾಧಿಕಾರಿಗಳ ಮಟ್ಟದ ಸಮಿತಿಯಲ್ಲಿ ನಿರ್ಧರಿಸಿ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಆರ್.ಐ. ಖಾಸಿಂ, ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.