ರಾಜ್ಯೋತ್ಸವ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಿ

KannadaprabhaNewsNetwork |  
Published : Oct 22, 2024, 12:06 AM IST
ಚಿತ್ರ 21ಬಿಡಿಆರ್3ಬೀದರ್‌ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು. | Kannada Prabha

ಸಾರಾಂಶ

ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ । ರಂಗಮಂದಿರದಲ್ಲಿ ಹಲ್ಮಡಿ ಶಾಸನ ಪ್ರತಿಕೃತಿ ಸ್ತಂಭ ಅನಾವರಣ

ಕನ್ನಡಪ್ರಭ ವಾರ್ತೆ ಬೀದರ್‌

ಜಿಲ್ಲೆಯಲ್ಲಿ ನವೆಂಬರ್‌ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿರುತ್ತದೆ ಎಂದು ಹೇಳಿದರು.

ಆಯಾ ಸಮಿತಿಗಳಿಗೆ ವಹಿಸಿದ ಕಾರ್ಯವನ್ನು ವಿಶೇಷ ಆಸಕ್ತಿಯಿಂದ ನಿರ್ವಹಿಸಬೇಕು. ಪ್ರತಿ ವರ್ಷದಂತೆ ಈ ವರ್ಷವು ಕೂಡ ಕನ್ನಡ ರಾಜ್ಯೋತ್ಸವದ ಹಿಂದಿನ ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಿಗಳಲ್ಲಿ ಸ್ವಚ್ಛತೆ, ವಿದ್ಯುತ್‌ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಅಂದು ಬೆಳಗ್ಗೆ 7.45ಕ್ಕೆ ಸರ್ಕಾರಿ ಅರೆ ಸರ್ಕಾರಿ ಹಾಗೂ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜಾರೋಹಣ ಮಾಡಿ, ಎಲ್ಲಾ ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಎಲ್ಲಾ ಶಾಲಾ ಕಾಲೇಜು ಮಕ್ಕಳೊಂದಿಗೆ ಬೆಳಗ್ಗೆ 7.50ಕ್ಕೆ ಬಸವೇಶ್ವರ ವೃತ್ತದಲ್ಲಿ ಸೇರುವುದು ನಂತರ ಬೆಳಗ್ಗೆ 8 ಗಂಟೆಗೆ ತಾಯಿ ಭುವನೇಶ್ವರಿ ಅವರ ಭಾವಚಿತ್ರದೊಂದಿಗೆ ಮೆರವಣಿಗೆ ಪ್ರಾರಂಭಿಸಲಾಗುವುದು.

ಈ ಮೆರವಣಿಗೆಯು ನಗರದ ನಗರದ ಭಗತಸಿಂಗ್‌ ವೃತ್ತ, ಡಾ.ಅಂಬೇಡ್ಕರ್‌ ವೃತ್ತ, ಜನರಲ್‌ ಕರಿಯಪ್ಪ ವೃತ್ತದಿಂದ ನೇರವಾಗಿ ನಗರದ ನೆಹರು ಕ್ರೀಡಾಂಗಣ ಸೇರಲಿದೆ. ನಂತರ ಬೆಳಗ್ಗೆ 9ಕ್ಕೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ಧ್ವಜಾರೋಹಣ ಮಾಡಲಿದ್ದಾರೆ ಎಂದು ಹೇಳಿದರು.

ಕ್ರೀಡಾಂಗಣದಲ್ಲಿ ಪೊಲೀಸ್‌ ಇಲಾಖೆ ಹೋಮ್‌ ಗಾರ್ಡ ಇನ್ನಿತರ ಇಲಾಖೆಯಿಂದ ಪರೇಡ್‌ ನಡೆಸಲು ಕ್ರಮ ವಹಿಸಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು. ನಂತರ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪರಿಣಿತರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸುವ ಕಾರ್ಯಕ್ರಮ ಜರುಗಲಿದೆ ಎಂದರು.

ಕರ್ನಾಟಕ ಸಂಭ್ರಮ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೆಸರಯಿತು ಕರ್ನಾಟಕ, ಉಸಿರಾಗಲಿ ಕನ್ನಡ ನಾಡ, ನುಡಿ, ಸಂಸ್ಕೃತಿಯ ಬಗ್ಗೆ ಶಾಲಾ ಕಾಲೆಜುಗಳಲ್ಲಿ ವಿದ್ಯಾರ್ಥಿಗಳಿಂದ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಏರ್ಪಡಿಸಲು ಕ್ರಮವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಸಹಾಯಕ ಆಯುಕ್ತರಾದ ಮಹ್ಮದ ಶಕೀಲ್‌, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸುರೇಶ ಚನ್ನಶೆಟ್ಟಿ, ಜಗನ್ನಾಥ ಹೆಬ್ಬಾಳೆ, ದೀಪಕ ವಾಲಿ, ಮಾಳಪ್ಪ ಅಡಸಾರೆ, ವಿರುಪಾಕ್ಷ ಗಾದಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

29ಕ್ಕೆ ಕವಿ ಸಮ್ಮೇಳನ ಗೋಷ್ಠಿ

ನ.1ರಂದು ಹಲ್ಮಡಿ ಶಾಸನ ಪ್ರತಿಕೃತಿ ಸ್ತಂಭವನ್ನು ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಅನಾವರಣಗೊಳಿಸಲಾಗುವುದು. ಅ.28ರಂದು ಕಾವ್ಯ ಕುಂಚ ಗಾಯನ, ಅ.29ರಂದು ಕವಿ ಸಮ್ಮೇಳನ ಕವಿಗೋಷ್ಠಿ, 30ರಂದು ಜಾನಪದ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ತೀರ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿಸಾನ್‌ ಸನ್ಮಾನ್‌ ಇ - ಕೆವೈಸಿಗೆ ಸರ್ವರ್‌ ಅಡ್ಡಿ!
ವರ್ಷಕ್ಕೆ ಲಕ್ಷ ಮಂದಿಗೆ ರೋಗ- 40 ಸಾವಿರ ಸಾವು : ಆತಂಕಕಾರಿ ಮಾಹಿತಿ ನೀಡಿದ ಡಾ.ಸಿಎನ್ ಮಂಜುನಾಥ್