ಸಂಘಟನೆಯ ಪ್ರಮುಖರು, ಪದಾಧಿಕಾರಿಗಳು ಡಿ. ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮತ್ತು ದಲಿತ ಸಂಘಟನೆಗಳ ಐಕ್ಯ ಹೋರಾಟ ಚಾಲನಾ ಸಮಿತಿ ವತಿಯಿಂದ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆಯನ್ನು ಶನಿವಾರಸಂತೆಯ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ದಿ.ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಿದರು.
ನಂತರ ಮಾತನಾಡಿದ ಹೋರಾಟ ಚಾಲನಾ ಸಮಿತಿ ಜಿಲ್ಲಾಧ್ಯಕ್ಷ ಜೆ.ಆರ್.ಪಾಲಾಕ್ಷ ಅವರು ವಿದ್ಯಾರ್ಥಿಗಳಿಗೆ ದೇವರಾಜ ಅರಸು ಅವರ ಹುಟ್ಟು, ಶಿಕ್ಷಣ, ರಾಜಕೀಯ ಜೀವನ ಹಾಗೂ ಮುಖ್ಯಮಂತ್ರಿಗಳಾಗಿದ್ದಾಗ ಈ ರಾಜ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ವಿವರಿಸಿದರು.
ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಆನಂದ್ ಮಾತನಾಡಿ, ದೇವರಾಜ ಅರಸು ಅವರ 20 ಅಂಶಗಳ ಕಾರ್ಯಕ್ರಮ ಹಾಗೂ ಜನಪರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ತಾಲೂಕು ಅಧ್ಯಕ್ಷ ಶಿವಾನಂದ ಮಾತನಾಡಿ, ವಿದ್ಯಾರ್ಥಿಗಳು ದೇವರಾಜ ಅರಸು ಅವರ ಸಾಧನೆ ಮತ್ತು ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.
ದುಂಡಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷರು, ಅಲ್ಪಸಂಖ್ಯಾತ ಘಟಕದ ಮುಖಂಡರು ಮತ್ತು ಅನುಷ್ಠಾನ ಸಮಿತಿ ಸದಸ್ಯರಾದ ಸಿ. ಬಿ. ಅಬ್ಬಾಸ್ ಮಾತನಾಡಿ, ದೇವರಾಜ್ ಅರಸು ಹಾಗೂ ಡಾ. ಅಂಬೇಡ್ಕರ್ ಅವರ ಚಿಂತನೆಗಳು, ರಾಜಕೀಯ ಬದುಕು ಹಾಗೂ ವಿದ್ಯಾರ್ಥಿಗಳಲ್ಲಿ ಇರಬೇಕಾದ ಸಾಮಾನ್ಯ ಜ್ಞಾನದ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಜಿಲ್ಲಾಧ್ಯಕ್ಷ ಜೆ. ಎಲ್. ಜನಾರ್ಧನ, ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆ ಮುಖಂಡರಾದ ಎಡೆಹಳ್ಳಿ ಚಿನ್ನಪ್ಪ, ಎಂ.ಕೆ.ಮಂಜುನಾಥ, ಮಾದ್ರೆ, ಮಂಜು, ವಿದ್ಯಾರ್ಥಿ ನಿಲಯದ ಅಡುಗೆ ಸಹಾಯಕ ಅನಂತ್ ಕುಮಾರ್ ಹಾಗೂ ರವಿ ಉಪಸ್ಥಿತರಿದ್ದರು. ಜಿಲ್ಲಾ ಚಾಲನಾ ಸಮಿತಿ ಕಾರ್ಯದರ್ಶಿ ಎಂ.ಎಸ್.ವೀರೇಂದ್ರ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.