ಮಡಿಕೇರಿಯಲ್ಲಿ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಆಚರಣೆ

KannadaprabhaNewsNetwork | Published : Jun 13, 2024 12:48 AM

ಸಾರಾಂಶ

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯಲ್ಲಿ ವಿಶ್ವ ಬಾಲ ಕಾರ್ಮಿಕ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಷ್ಟ್ರವು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯತ್ತ ಹೆಜ್ಜೆ ಹಾಕುತ್ತಿದ್ದು, ಆ ದಿಸೆಯಲ್ಲಿ ಮತ್ತಷ್ಟು ಪರಿಣಾಮಕಾರಿ ಕಾರ್ಯಗಳು ಆಗಬೇಕಿದೆ ಎಂದು ವಕೀಲ ಯಾಲದಾಳು ಮನೋಜ್ ಬೋಪಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

14 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಶಾಲೆಯಲ್ಲಿ ಓದಿಕೊಂಡು ತಮ್ಮ ಕುಟುಂಬದಲ್ಲಿ ಕೃಷಿ, ಮನೆ ಕೆಲಸಗಳನ್ನು ಮಾಡಿದರೆ ಬಾಲ ಕಾರ್ಮಿಕ ಪದ್ಧತಿ ಆಗುವುದಿಲ್ಲ. ಮಕ್ಕಳು ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಮನೋಜ್ ಬೋಪಯ್ಯ ವಿವರಿಸಿದರು.

ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳದಂತೆ ಗಮನಹರಿಸಬೇಕು. ಸ್ವಾತಂತ್ರ್ಯಾ ನಂತರ ರಾಜ್ಯ ನಿರ್ದೇಶಕ ತತ್ವಗಳಲ್ಲೂ ಸಹ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಹೇಳಲಾಗಿದೆ. 1986 ರಲ್ಲೂ ಸಹ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬಂಧಿಸಿದಂತೆ ವಿವರಿಸಲಾಗಿದೆ. ಹಾಗೆಯೇ 2016 ರಲ್ಲೂ ಸಹ ಬಾಲಕಾರ್ಮಿಕ ಪದ್ಧತಿ ವಿರೋಧ ಕಾಯ್ದೆ ಜಾರಿಗೆ ಬಂದಿದೆ ಎಂದು ಮನೋಜ್ ಬೋಪಯ್ಯ ಹೇಳಿದರು.

ಮಕ್ಕಳನ್ನು ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಳ್ಳುವುದು ಕಂಡುಬಂದಲ್ಲಿ 1098 ಅಥವಾ 112 ರ ಸಹಾಯವಾಣಿಗೆ ಕರೆ ಮಾಡಬಹುದು. ದಂಡ ವಿಧಿಸಲು ಅವಕಾಶವಿದೆ ಎಂದು ವಿವರಿಸಿದರು.

ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿಯು ಕೆಟ್ಟದಾಗಿದ್ದು, ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ಮಾಡಿದರು.

14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿ ನಿಲಯ ವ್ಯವಸ್ಥೆ ಇದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ವಸತಿ ಶಾಲೆಗಳು ಉತ್ತಮ ಹೆಸರು ಮಾಡುತ್ತಿದ್ದು, ಇಂತಹ ಅವಕಾಶಗಳನ್ನು ಮಕ್ಕಳು ಬಳಸಿಕೊಳ್ಳಬೇಕು ಎಂದು ವರ್ಣಿತ್ ನೇಗಿ ಸಲಹೆ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ದೂಡುವುದರಿಂದ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ತೊಂದರೆಯಾಗಲಿದೆ ಎಂದರು.

ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಅಧಿಕಾರಿ ಎಸ್.ಎಲ್.ಹರ್ಷವರ್ಧನ್ ಅವರು ಬಾಲ ಕಾರ್ಮಿಕ ವಿರೋಧಿ ದಿನದ ಪ್ರಯುಕ್ತ ಪ್ರಮಾಣ ವಚನ ಬೋಧಿಸಿ, ಸತ್ಯವಾಗಿ, ಪ್ರಾಮಾಣಿಕವಾಗಿ ಹಾಗೂ ಆತ್ಮಸಾಕ್ಷಿಯಾಗಿ ತಾವು ವಾಸಿಸುವ ಸುತ್ತಮುತ್ತಲಿನ ಪ್ರದೇಶ ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಯಾವುದೇ ಬಾಲಕಾರ್ಮಿಕರು ಕಂಡುಬಂದಲ್ಲಿ ನೇಮಿಸಿಕೊಂಡ ಮಾಲೀಕರು ಹಾಗೂ ಪೋಷಕರಿಗೆ ತಿಳುವಳಿಕೆ ಹೇಳಿ ಮಗುವನ್ನು ಶಾಲೆಗೆ ಸೇರಿಸುತ್ತೇನೆ ಎಂಬ ಪ್ರತಿಜ್ಞೆ ಮಾಡಬೇಕು ಎಂದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲಿಕ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮೀ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ್ ಕೆ.ನರ್ವಾಡೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಸಮಗ್ರ ಗಿರಿಜನ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ತಾಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಆರ್.ಶೀರಾಝ್ ಅಹ್ಮದ್ ಮತ್ತಿತರರು ಇದ್ದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಬಿ.ಎಸ್.ಜಯಪ್ಪ ನಿರೂಪಿಸಿ, ವಂದಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

Share this article