ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 1924ರಲ್ಲಿ ಮಹಾತ್ಮ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗ ಜವಾಹರಲಾಲ್ ನೆಹರು ಹಾಗೂ ಕರ್ನಾಟಕದವರಾದ ಗಂಗಾಧರ ದೇಶಪಾಂಡೆ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರಿಬ್ಬರೂ ಸೇರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಿ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಮಾಡಿದರು ಎಂದರು.
ಈಗಿನ ಕಾಲಘಟ್ಟದಲ್ಲಿ ದೇಶ ಹಾಗೂ ರಾಜ್ಯ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದನ್ನು ದೇಶದ ಎಲ್ಲಾ ಪ್ರಮುಖ ನಾಯಕರು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಸುವರ್ಣಸೌಧದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷಕ್ಕೂ ಆಹ್ವಾನ ಇದೆಯೇ ಎಂದು ಕೇಳಿದಾಗ, ವಿರೋಧ ಪಕ್ಷಗಳ ನಾಯಕರು, ಸಂಸದರು, ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಸಭಾಪತಿಗಳು, ಎಲ್ಲಾ ಪಕ್ಷಗಳ ಶಾಸಕರು ಹಾಗೂ ಪರಿಷತ್ ಸದಸ್ಯರು ಸೇರಿ ಎಲ್ಲಾ ಪಕ್ಷಗಳಿಗೂ ಆಹ್ವಾನ ನೀಡಲಾಗುವುದು. ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮ. ಭದ್ರತಾ ದೃಷ್ಟಿಯಿಂದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಆಹ್ವಾನ ಇರುವುದಿಲ್ಲ. ಬೆಳಗಾವಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಇತರೆ ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗುವುದು ಎಂದು ತಿಳಿಸಿದರು.
ದೇಶಾದ್ಯಂತ ಕಾಂಗ್ರೆಸ್ ಪಕ್ಷದ ಪ್ರಮುಖ 500 ರಿಂದ 600 ಜನ ಕಾಂಗ್ರೆಸ್ ನಾಯಕರು ಮಾತ್ರ ಆಗಮಿಸುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಸಂಸದರು ಆಗಮಿಸಲಿದ್ದಾರೆ. ಇವರೆಲ್ಲರೂ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದು, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಿತಿಯ ಸದಸ್ಯರು ಮಾತ್ರ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಬೆಳಗಾವಿಯಿಂದಲೇ ಮಹಾತ್ಮ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದರು. 2023ರ ಚುನಾವಣೆ ಸಮಯದಲ್ಲಿ ಇದೇ ಜಾಗದಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿ ಹೋರಾಟ ಮಾಡಿದೆವು. ನಂತರ ನಡೆದ ಚುನಾವಣೆಯಲ್ಲಿ ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆದ್ದು ಸುಭದ್ರ ಸರ್ಕಾರ ಸ್ಥಾಪಿಸಿದೆವು. ಮತ್ತೆ ಇದೇ ಭೂಮಿಯಿಂದ ದೇಶ ಹಾಗೂ ರಾಜ್ಯವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯಬೇಕು ಎಂದು ತೀರ್ಮಾನ ಮಾಡಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ.- ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ