ಸುವರ್ಣ ಸೀರೆ ಸಮರ್ಪಣೆ । 3 ದಿನ ನಡೆವ ಕಾರ್ಯಕ್ರಮ । ವಾಸವಿ ಚರಿತ್ರೆ ಪಾರಾಯಣದ ಸಮಾರೋಪ
ಆರ್ಯವೈಶ್ಯ ಮಹಾಜನ ಸಮಿತಿ ವತಿಯಿಂದ ಫೆ.14ರಿಂದ 16ರವರೆಗೆ ಶತಮಾನೋತ್ಸವ ಸಂಭ್ರಮ ಹಾಗೂ ಸುವರ್ಣ ಸೀರೆ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಿ.ಎಸ್. ಅರುಣ್ ಹೇಳಿದರು.
ನಗರದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಆರ್ಯವೈಶ್ಯ ಮಹಾಜನ ಸಮಿತಿಯು ಹಲವು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸುತ್ತ ಬಂದಿದ್ದು, ಈಗ ಶತಮಾನೋತ್ಸವದ ಸಂಭ್ರಮವನ್ನು ಆಚರಿಸಲಾಗುತ್ತಿದೆ ಎಂದರು.ಫೆ. 14ರಂದು ಬೆಳಿಗ್ಗೆ 7.30ರಿಂದ ಮಧ್ಯಾಹ್ನದವರೆಗೆ ಶ್ರೀ ರಾಮಣ್ಣ ಶ್ರೇಷ್ಠಿ ಪಾರ್ಕ್ನಲ್ಲಿ ವಾಸವಿ ವ್ರತ, ಹೋಮ ಹಾಗೂ ಸಮಾಜದ ಪದ್ಧತಿಯಂತೆ 102 ದಂಪತಿಯೊಂದಿಗೆ 102 ದಿನಗಳ ವಾಸವಿ ಚರಿತ್ರೆ ಸಾಮೂಹಿಕ ಪಾರಾಯಣದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಸಂಜೆ 2 ಗಂಟೆಗೆ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದ ಮುಂಭಾಗ ದೀಪೋತ್ಸವ ಮತ್ತು ಆಶೀರ್ವಚನವನ್ನು ಏರ್ಪಡಿಸಲಾಗಿದೆ ಎಂದರು.
ಫೆ. 16ರಂದು ಬೆಳಿಗ್ಗೆ 8 ಗಂಟೆಗೆ ಅಮ್ಮನವರಿಗೆ ಸುಮಾರು ಅರ್ಧ ಕೆಜಿ ಬಂಗಾರವಿರುವ 35 ಲಕ್ಷ ರು. ಬೆಲೆ ಬಾಳುವ ಬಂಗಾರದ ಸೀರೆ ಸಮರ್ಪಿಸಲಾಗುವುದು. ನಂತರ 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಶತಮಾನೋತ್ಸವದ ಸಮಾರೋಪ ಸಮಾರಂಭ ನಡೆಯುವ ಕುವೆಂಪು ರಂಗಮಂದಿರಕ್ಕೆ ತೆರಳಲಾಗುವುದು ಎಂದರು.
ಬೆಳಿಗ್ಗೆ 10 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಶತಮಾನೋತ್ಸವ ಸಮಾರಂಭವನ್ನು ಬೆಂಗಳೂರಿನ ಬ್ರಿಗೇಡ್ ಗ್ರೂಪ್ ಸಿಎಂಡಿ ಎಂ.ಆರ್.ಜೈಶಂಕರ್ ಉದ್ಘಾಟಿಸುವರು. ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಧನಂಜಯ ಸರ್ಜಿ, ಡಿ.ಎಸ್. ಅರುಣ್, ಆರ್ಯ ವೈಶ್ಯ ಮಹಾಸಭಾ ರಾಜ್ಯಾಧ್ಯಕ್ಷ ಆರ್.ಪಿ. ರವಿಶಂಕರ್, ಜಿಲ್ಲಾಧ್ಯಕ್ಷ ಭೂಪಾಳಂ ಎಸ್. ಶಶಿಧರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.ಸಂಜೆ 5.30ಕ್ಕೆ ಮಂಜರಿ ಚಂದ್ರ ಪುಷ್ಪರಾಜ್ ಅವರ ನೇತೃತ್ವದಲ್ಲಿ ನೃತ್ಯ, ಮತ್ತು ಶಿವಮೊಗ್ಗದ ಸಹಚೇತನ ನಾಟ್ಯಾಲಯದ ವತಿಯಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಆರ್ಯವೈಶ್ಯ ಮಹಾಜನ ಸಮಿತಿ ಜಿಲ್ಲಾಧ್ಯಕ್ಷ ಭೂಪಾಳಂ ಎಸ್. ಶಶಿಧರ್, ಪದಾಧಿಕಾರಿಗಳಾದ ಎಸ್.ಜೆ. ಅಶ್ವತ್ಥನಾರಾಯಣ್, ಡಿ.ಎಸ್. ಶ್ರೀನಾಥ್, ಕೆ.ಜಿ. ರಮೇಶ್, ಸಿ.ಎ. ನರೇಶ್, ಕಾಂತೇಶ್ ಮತ್ತಿತರರು ಇದ್ದರು.