ನವೆಂಬರ್‌ 17, 18ರಂದು ಉಡುಪಿ ನ್ಯಾಯಾಲಯದ ಶತಮಾನೋತ್ತರ ರಜತ ಸಂಭ್ರಮ

KannadaprabhaNewsNetwork |  
Published : Nov 14, 2024, 12:49 AM IST
13ಕೋರ್ಟ್ | Kannada Prabha

ಸಾರಾಂಶ

ಮಣಿಪಾಲದ ಕಸ್ತುರ್ಬಾ ಆಸ್ಪತ್ರೆಯಿಂದ ಉಡುಪಿ ವಕೀಲರ ಸಂಘದ ಸದಸ್ಯರಿಗೆ ನೀಡಲಾಗುವ ವಿಶಿಷ್ಟ ಆರೋಗ್ಯ ಕಾರ್ಡನ್ನು ಮಾಹೆಯ ಸಹ ಕುಲಪತಿ ಡಾ. ಎಚ್.ಎಸ್. ಬಲ್ಲಾಳ್ ಇವರ ಸಮ್ಮುಖದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನ್ಯಾ. ಎಸ್.ವಿ. ಅಂಜಾರಿಯಾ ಬಿಡುಗಡೆ ಮಾಡಲಿರುವರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲಾ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮ 17 ಮತ್ತು 18 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಈ ಬಗ್ಗೆ ಬುಧವಾರ, ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ವಿವರಗಳನ್ನು ನೀಡಿದರು.

ನ.17ರಂದು ಬೆಳಗ್ಗೆ 9 ಗಂಟೆಗೆ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಅತಿಥಿಗಳನ್ನು ಜಿಲ್ಲಾ ನ್ಯಾಯಾಲಯಕ್ಕೆ ಕರೆ ತರಲಾಗುವುದು. 10 ಗಂಟೆಗೆ ನ್ಯಾಯಾಲಯದ ಆವರಣದಲ್ಲಿ ಶತಮಾನೋತ್ತರ ರಜತ ಮಹೋತ್ಸವವನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಧೀಶ ನ್ಯಾ. ಅರವಿಂದ್ ಕುಮಾರ್ ಉದ್ಘಾಟಿಸಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ನ್ಯಾ.ಎನ್.ವಿ. ಅಂಜಾರಿಯಾ ಅಧ್ಯಕ್ಷತೆ ವಹಿಸಲಿದ್ದಾರೆ. ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ.ಎಸ್. ಅಬ್ದುಲ್ ನಜೀರ್ ಸಾಹೇಬ್ ಉಪಸ್ಥಿತರಿರುವರು. ಹೈಕೋರ್ಟ್ ನ್ಯಾಯಾಧೀಶ ಮತ್ತು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾ.ಇ.ಎಸ್. ಇಂದಿರೇಶ್, 125ರ ಸಂಭ್ರಮದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ್, ಸಾರ್ವಜನಿಕ ಸೇವಾ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ, ಅಡ್ವೋಕೇಟ್ ಜನರಲ್ ಶಶಿಕಿರಣ್ ಎಸ್. ಶೆಟ್ಟಿ, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಉಪಸ್ಥಿತರಿರುವರು.

ಇದೇ ವೇದಿಕೆಯಲ್ಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ.ಎಂ.ಜಿ. ಉಮಾ, ನ್ಯಾ. ರಾಮಚಂದ್ರ ಡಿ. ಹುದ್ದಾರ್, ನ್ಯಾ.ಟಿ. ವೆಂಕಟೇಶ್ ನಾಯ್ಕ್ ಅವರನ್ನು ಸನ್ಮಾನಿಸಲಾಗುವುದು.

ನ.18ರಂದು ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹೈಕೋರ್ಟ್ ನ್ಯಾಯಾಧೀಶ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ವಹಿಸಲಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರು ಮತ್ತು ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ನ್ಯಾ. ಇ.ಎಸ್. ಇಂದಿರೇಶ್ ಸಮಾರೋಪ ಭಾಷಣ ಮಾಡಲಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ. ಶಿವಶಂಕರ್ ಬಿ., ನ್ಯಾ. ಅಮರಣ್ಣವರ್, ನ್ಯಾ.ಸಿ.ಎಂ. ಜೋಷಿ, ನ್ಯಾ.ಟಿ.ಜಿ. ಶಿವಶಂಕರೇಗೌಡ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನ್ಯಾ. ಕಿರಣ್ ಎಸ್. ಗಂಗಣ್ಣನವರ್ ಉಪಸ್ಥಿತರಿರುವರು ಎಂದರು.

ಇದೇ ವೇಳೆ ಉಡುಪಿ ವಕೀಲರ ಸಂಘದ ಸದಸ್ಯರಾಗಿ, ನ್ಯಾಯಾಧೀಶರಾಗಿ ಮತ್ತು ಸರಕಾರಿ ಅಭಿಯೋಜಕರಾಗಿ ಆಯ್ಕೆಯಾಗಿ ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿರುವ ಉಡುಪಿ ವಕೀಲರ ಸಂಘದ ಮಾಜಿ ಸದಸ್ಯರಿಗೆ ಮತ್ತು ವಕೀಲರ ಸಂಘದ ಮಾಜಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ಸನ್ಮಾನಿಸಲಾಗುವುದು.

ಮಣಿಪಾಲದ ಕಸ್ತುರ್ಬಾ ಆಸ್ಪತ್ರೆಯಿಂದ ಉಡುಪಿ ವಕೀಲರ ಸಂಘದ ಸದಸ್ಯರಿಗೆ ನೀಡಲಾಗುವ ವಿಶಿಷ್ಟ ಆರೋಗ್ಯ ಕಾರ್ಡನ್ನು ಮಾಹೆಯ ಸಹ ಕುಲಪತಿ ಡಾ. ಎಚ್.ಎಸ್. ಬಲ್ಲಾಳ್ ಇವರ ಸಮ್ಮುಖದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನ್ಯಾ. ಎಸ್.ವಿ. ಅಂಜಾರಿಯಾ ಬಿಡುಗಡೆ ಮಾಡಲಿರುವರು.

ಹಿರಿಯ ಸಿವಿಲ್ ನ್ಯಾಯಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಯೋಗೇಶ್ ಮಾತನಾಡಿ, ಇದು ಕೇವಲ ವಕೀಲರಿಗೆ ಸಂಬಂಧಿಸಿದ ಕಾರ್ಯಕ್ರಮವಲ್ಲ. ಸಾರ್ವಜನಿಕರು ಮುಕ್ತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾನೂನಿನ ಬಗ್ಗೆ ಅರಿವನ್ನು ಮೂಡಿಸಿಕೊಳ್ಳಬಹುದು ಎಂದು ಕರೆ ನೀಡಿದರು‌.

ಉಡುಪಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್, ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ಬೈಲೂರು ರವೀಂದ್ರ ದೇವಾಡಿಗ, ಖಜಾಂಚಿ ಗಂಗಾಧರ ಎಚ್‌.ಎಂ., ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ವಕೀಲರ ಸಂಘ ವಿವಿಧ ಉಪ ಸಮಿತಿಗಳ ಮುಖ್ಯಸ್ಥರಾದ ಎಂ. ಶಾಂತಾರಾಮ್ ಶೆಟ್ಟಿ, ಅಸದುಲ್ಲಾ ಕಟಪಾಡಿ, ಎನ್.ಕೆ. ಆಚಾರ್ಯ, ಬಿ. ನಾಗರಾಜ್, ಆನಂದ ಮಡಿವಾಳ, ಸತೀಶ್ ಪೂಜಾರಿ, ಅಮೃತಕಲಾ, ಆರೂರು ಸುಕೇಶ್ ಶೆಟ್ಟಿ, ವಕೀಲರಾದ ಶಿವಾನಂದ್ ಆಮೀನ್ ಪಾಂಗಾಳ, ಶಶಿರಾಜ್ ಪೈಯ್ಯಾರ್, ಪ್ರಜ್ವಲ್ ಶೆಟ್ಟಿ, ಆಕಾಶ್ ಅಂಬಾಗಿಲು ಹಾಜರಿದ್ದರು.

......................

ಸಾರ್ವಜನಿಕರಿಗೆ ಮುಕ್ತ ಅವಕಾಶ

ನ.17 ರಂದು ಬೆಳಗ್ಗೆ 9.30 ಕ್ಕೆ ನಗರದ ಜೋಡುಕಟ್ಟೆಯಿಂದ ಅತಿಥಿಗಳಿಗೆ ಪೂರ್ಣಕುಂಭ ಸ್ವಾಗತವನ್ನು ನೀಡಿ, ಉಡುಪಿ ಜಿಲ್ಲೆಯ ಎಲ್ಲ ವಕೀಲರು, ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಮೆರವಣಿಗೆಯೊಂದಿಗೆ ನ್ಯಾಯಾಲಯದ ಆವರಣಕ್ಕೆ ಕರೆತರಲಾಗುವುದು. ಕಾರ್ಯಕ್ರಮಕ್ಕೆ ಈಗಾಗಲೇ ತಯಾರಿ ನಡೆಯುತ್ತಿದ್ದು, ವೇದಿಕೆ, ನ್ಯಾಯಾಲಯಕ್ಕೆ ವಿದ್ಯುತ್ ದೀಪಾಲಂಕಾರ ಕಾರ್ಯಗಳು ಭರದಿಂದ ಸಾಗುತ್ತಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಬೇಕು‌.

-ರೆನೋಲ್ಡ್ ಪ್ರವೀಣ್ ಕುಮಾರ್, ಅಧ್ಯಕ್ಷ, ಉಡುಪಿ ವಕೀಲರ ಸಂಘ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌